
ನವದೆಹಲಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಅವರು ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಧಾಕೃಷ್ಣನ್ಗೆ ಪ್ರಮಾಣವಚನ ಬೋಧಿಸಿದರು.
ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಶುಕ್ರವಾರ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಭಾರತದ 15 ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹಿರಿಯ ಸರ್ಕಾರಿ ಅಧಿಕಾರಿಗಳು ಮತ್ತು ಗಣ್ಯರ ಸಮ್ಮುಖದಲ್ಲಿ ರಾಧಾಕೃಷ್ಣನ್ ಅವರಿಗೆ ಪ್ರಮಾಣವಚನ ಬೋಧಿಸಿದರು.
ಜಗದೀಪ್ ಧನಕರ್ ಅವರ ದಿಢೀರ್ ರಾಜೀನಾಮೆಯಿಂದ ತೆರವಾಗಿದ್ದ ಹುದ್ದೆಗೆ ಮಂಗಳವಾರ (ಸೆ.9) ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಎನ್ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ರಾಧಾಕೃಷ್ಣನ್, ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿ ಬಿ.ಸುದರ್ಶನ ರೆಡ್ಡಿ ಅವರನ್ನು ಮಣಿಸಿದ್ದರು.
ರಾಧಾಕೃಷ್ಣನ್ ಪರ ಒಟ್ಟು 452 ಮತಗಳು ಚಲಾವಣೆಯಾಗಿದ್ದವು. ರೆಡ್ಡಿ 300 ಮತಗಳನ್ನು ಗಳಿಸಿದ್ದರು. ರಾಜೀನಾಮೆ ನೀಡಿದ ನಂತರ ಮೊದಲ ಬಾರಿಗೆ ಧನಕರ್ ಸಾರ್ವಜನಿಕವಾಗಿ ಕಾಣಿಸಿಕೊಂಡರು.
Advertisement