

ಕೋಲ್ಕತ್ತಾ: ಚುನಾವಣಾ ಪ್ರಚಾರದ ವೇಳೆ ಬಿಜೆಪಿ, ಟಿಎಂಸಿ ಕಾರ್ಯಕರ್ತರ ನಡುವೆ ಗಲಾಟೆ ನಡೆದು ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಪೂರ್ವ ಕೋಲ್ಕತ್ತಾದ ಧಾಪಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ತಿಬ್ರೆವಾಲ್ ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಷನ್ನ ವಾರ್ಡ್ 58 ರಲ್ಲಿ ಪ್ರಚಾರ ನಡೆಸುತ್ತಿದ್ದಾಗ ಗಲಾಟೆ ಸಂಭವಿಸಿದೆ.
ಧ್ವನಿವರ್ಧಕಗಳಲ್ಲಿ ಹಾಡುಗಳನ್ನು ಹಾಕುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರಾರಂಭವಾದ ವಾಗ್ವಾದವು ಜಗಳಕ್ಕೆ ಕಾರಣವಾಗಿದೆ. ಆದಾಗ್ಯೂ, ಕೇಂದ್ರ ಪಡೆಗಳು ಮತ್ತು ಸ್ಥಳೀಯ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು ಮತ್ತು ತಿಬ್ರೆವಾಲ್ ಅವರನ್ನು ಇತರ ಬಿಜೆಪಿ ಕಾರ್ಯಕರ್ತರೊಂದಿಗೆ ಅಲ್ಲಿಂದ ಹೊರಗೆ ಕರೆದೊಯ್ಯಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕಾ ತಿಬ್ರೆವಾಲ್ , ನಮ್ಮ ಕಾರ್ಯಕರ್ತರಲ್ಲಿ ಒಬ್ಬರಿಗೆ ತೀವ್ರವಾಗಿ ಥಳಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಿಂಸಾಚಾರದಲ್ಲಿ ಕೆಲವು ಮಹಿಳಾ ಪೊಲೀಸ್ ಸಿಬ್ಬಂದಿಯೂ ಗಾಯಗೊಂಡಿದ್ದಾರೆ. ಏಪ್ರಿಲ್ 29 ರಂದು ಮುಕ್ತ ಮತ್ತು ನ್ಯಾಯಯುತ ಮತದಾನ ನಡೆಯದಂತೆ ಟಿಎಂಸಿ ಬೆಂಬಲಿಗರು ಬಿಜೆಪಿ ಕಾರ್ಯಕರ್ತರನ್ನು ಭಯಭೀತಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ಟಿಎಂಸಿ ಕಾರ್ಯಕರ್ತರು ನಮ್ಮ ಬ್ಯಾನರ್ಗಳು, ಫ್ಲೆಕ್ಸ್ಗಳು ಮತ್ತು ಪೋಸ್ಟರ್ಗಳನ್ನು ಹರಿದು ಹಾಕಿದ್ದಾರೆ. ಅವರು ಎಷ್ಟೇ ಹರಿದುಹಾಕಲಿ, ಜನರು ಈಗಾಗಲೇ ಯಾರು ಚುನಾವಣೆಯಲ್ಲಿ ಗೆಲ್ಲಬೇಕು ಎಂದು ತೀರ್ಮಾನಿಸಿದ್ದಾರೆ ಎಂದು ಅವರು ಹೇಳಿದರು.
Advertisement