ಬಿಹಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಮುನ್ನ ಸಚಿವ ಸಂಪುಟ ವಿಸರ್ಜನೆಗೆ ನಿತೀಶ್ ಕುಮಾರ್ ಶಿಫಾರಸು; ಮುಂದಿನ ಮುಖ್ಯಮಂತ್ರಿ ಯಾರು?

ರಾಜ್ಯದಲ್ಲಿ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನಿತೀಶ್ ಕುಮಾರ್ ಅವರು, ಇಂದು ಬೆಳಗ್ಗೆ ನಡೆದ ಸಭೆಯಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಈ ನಿರ್ಧಾರವನ್ನು ತಿಳಿಸಿದ್ದಾರೆ ಎಂದು ಯಾದವ್ ಸುದ್ದಿಗಾರರಿಗೆ ಹೇಳಿದ್ದಾರೆ.
CM Nitish Kumar
ಬಿಹಾರ ಸಿಎಂ ನಿತೀಶ್ ಕುಮಾರ್
Updated on

ಪಾಟ್ನಾ: ಪ್ರಮುಖ ರಾಜಕೀಯ ಬೆಳವಣಿಗೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಂಗಳವಾರ ರಾಜ್ಯಪಾಲ ಸೈಯದ್ ಅತಾ ಹಸ್ನೈನ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸುವ ಮುನ್ನ ತಮ್ಮ ಸಚಿವ ಸಂಪುಟ ವಿಸರ್ಜನೆ ಮಾಡುವಂತೆ ಶಿಫಾರಸು ಮಾಡಿದ್ದಾರೆ ಎಂದು ರಾಜ್ಯ ಸಚಿವ ರಾಮ್ ಕೃಪಾಲ್ ಯಾದವ್ ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನಿತೀಶ್ ಕುಮಾರ್ ಅವರು, ಇಂದು ಬೆಳಗ್ಗೆ ನಡೆದ ಸಭೆಯಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಈ ನಿರ್ಧಾರವನ್ನು ತಿಳಿಸಿದ್ದಾರೆ ಎಂದು ಯಾದವ್ ಸುದ್ದಿಗಾರರಿಗೆ ಹೇಳಿದ್ದಾರೆ.

"ಇದು ನಮಗೆಲ್ಲರಿಗೂ ಬಹಳ ಭಾವನಾತ್ಮಕ ಕ್ಷಣವಾಗಿತ್ತು. ಸಚಿವ ಸಂಪುಟ ವಿಸರ್ಜನೆಯ ನಿರ್ಧಾರದ ಬಗ್ಗೆ ಸಿಎಂ ನಮಗೆ ಮಾಹಿತಿ ನೀಡಿದರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ" ಎಂದು ಯಾದವ್ ತಿಳಿಸಿದರು.

ಸಚಿವ ಸಂಪುಟ ವಿಸರ್ಜನೆಯು ಮುಖ್ಯಮಂತ್ರಿ ರಾಜೀನಾಮೆಗೂ ಮುನ್ನ ಸಾಂವಿಧಾನಿಕ ಔಪಚಾರಿಕತೆಯಾಗಿದೆ.

ನಿತೀಶ್ ಕುಮಾರ್ ಅವರು ಇಂದು ಮಧ್ಯಾಹ್ನ 3 ಗಂಟೆಗೆ ರಾಜ್ಯಪಾಲರನ್ನು ಭೇಟಿ ಮಾಡಿ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸುವ ನಿರೀಕ್ಷೆಯಿದೆ. ಈ ಮೂಲಕ ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ(ಬಿಜೆಪಿ) ನೇತೃತ್ವದ ಸರ್ಕಾರ ರಚನೆಗೆ ದಾರಿ ಮಾಡಿಕೊಡಲಾಗುತ್ತದೆ ಎಂದು ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ.

CM Nitish Kumar
ನಿತೀಶ್ ಕುಮಾರ್​​​ಗೆ ರಾಷ್ಟ್ರ ರಾಜಕಾರಣಕ್ಕೆ ಸ್ವಾಗತ; ಬಿಹಾರ ಸಿಎಂ ಆಗಿ "ಅದ್ಭುತ" ಅವಧಿ: ಅಮಿತ್ ಶಾ

243 ಸದಸ್ಯ ಬಲದ ವಿಧಾನಸಭೆಯಲ್ಲಿ 89 ಶಾಸಕರನ್ನು ಹೊಂದಿರುವ ಏಕೈಕ ಅತಿದೊಡ್ಡ ಪಕ್ಷವಾಗಿರುವ ಬಿಜೆಪಿ, ಇಂದು ಸಂಜೆ ತನ್ನ ಕಚೇರಿಯಲ್ಲಿ ನಡೆಯುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದೆ.

ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗಾಗಿ 'ಕೇಂದ್ರ ವೀಕ್ಷಕರಾಗಿ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಕೇಸರಿ ಪಕ್ಷ ನೇಮಿಸಿದೆ.

ಮುಂದಿನ ಮುಖ್ಯಮಂತ್ರಿ ಯಾರು?

ಸಿಎಂ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಗಳಲ್ಲಿ ಪ್ರಮುಖರಾಗಿ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಇದ್ದು, ಅವರು ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಮತ್ತೊಂದು ಪ್ರಮುಖ ಹೆಸರು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರೈ. ಯಾದವ್ ಸಮುದಾಯದಿಂದ ಬಂದ ನಿತ್ಯಾನಂದ ರೈ, 1980 ರ ದಶಕದಿಂದಲೂ ABVP ಮತ್ತು RSS ನೊಂದಿಗೆ ಸಂಬಂಧ ಹೊಂದಿದ್ದಾರೆ. ಅಲ್ಲದೆ ಆರೋಗ್ಯ ಮತ್ತು ಕಾನೂನು ಸಚಿವ ಮಂಗಲ್ ಪಾಂಡೆ ಹಾಗೂ ದಿಘಾ ಶಾಸಕ ಸಂಜೀವ್ ಚೌರಾಸಿಯಾ ಅವರ ಹೆಸರು ಕೂಡ ಚರ್ಚೆಯಲ್ಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com