

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಸರ್ಕಾರವು ಚುನಾವಣಾ ಆಯೋಗ ಮತ್ತು ನ್ಯಾಯಾಂಗದಂತಹ ಸಂಸ್ಥೆಗಳ ಮೇಲೆ ಒತ್ತಡ ಹೇರುವ ಮೂಲಕ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಿದ್ದು, ಈಗ ಸಂವಿಧಾನ ತಿದ್ದುಪಡಿ ಮಸೂದೆಯ ಮೂಲಕ "ಬಹಿರಂಗ ದಾಳಿ" ನಡೆಸಿದೆ ಎಂದು ಗುರುವಾರ ಆರೋಪಿಸಿದರು.
ಮಹಿಳಾ ಮೀಸಲಾತಿ ಕಾನೂನಿನಲ್ಲಿ ತಿದ್ದುಪಡಿ ಮತ್ತು ಡಿಲಿಮಿಟೇಶನ್ ಆಯೋಗ ಸ್ಥಾಪಿಸಲು ಮಂಡಿಸಲಾದ ಮೂರು ಮಸೂದೆಗಳ ಕುರಿತು ಇಂದು ಲೋಕಸಭೆಯಲ್ಲಿ ನಡೆದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಲೋಕಸಭೆಯ ಪ್ರಸ್ತುತ 543 ಸ್ಥಾನಗಳಲ್ಲಿಯೇ ಮಹಿಳೆಯರಿಗೆ ಶೇಕಡಾ 33 ರಷ್ಟು ಮೀಸಲಾತಿಯನ್ನು ನೀಡಲು ಏಕೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿದರು.
2011ರ ಜನಗಣತಿಯ ದತ್ತಾಂಶದ ಆಧಾರದ ಮೇಲೆ ಡಿಲಿಮಿಟೇಶನ್ ಆಯೋಗವು ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು 850ಕ್ಕೆ ಹೆಚ್ಚಿಸುವ ಬಗ್ಗೆ ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ ಎಂದು ಅವರು ಹೇಳಿದರು.
"ಇದು ಮೇಲ್ನೋಟಕ್ಕೆ ಚೆನ್ನಾಗಿ ಕಾಣುತ್ತದೆ. ಆದರೆ ಅದನ್ನು ಎಚ್ಚರಿಕೆಯಿಂದ ಓದಿದಾಗ ಅದರ ನಿಜವಾದ ಅರ್ಥ ಹೊರ ಬರುತ್ತದೆ. ಇದರಲ್ಲಿ ರಾಜಕೀಯದ ವಾಸನೆ ಇದೆ" ಎಂದು ಕಾಂಗ್ರೆಸ್ ನಾಯಕಿ ಆರೋಪಿಸಿದರು.
ಸೂಕ್ಷ್ಮವಾಗಿ ಓದಿದಾಗ, ಡಿಲಿಮಿಟೇಶನ್ ಆಯೋಗದ ಮೂವರು ಸದಸ್ಯರು, ರಾಜ್ಯಗಳ ಭವಿಷ್ಯ ಮತ್ತು ಸಂಸತ್ತಿನಲ್ಲಿ ಅವರ ಪ್ರಾತಿನಿಧ್ಯವನ್ನು ನಿರ್ಧರಿಸುತ್ತಾರೆ ಎಂದು ಅವರು ಹೇಳಿದರು.
"ಚುನಾವಣಾ ಆಯೋಗ, ನ್ಯಾಯಾಂಗ, ಮಾಧ್ಯಮ ಮುಂತಾದ ಸಂಸ್ಥೆಗಳ ಮೇಲೆ ಒತ್ತಡ ಹೇರುವ ಮೂಲಕ ಸರ್ಕಾರ ಪ್ರಜಾಪ್ರಭುತ್ವವನ್ನು ಕೊನೆಗೊಳಿಸಲು ಆರಂಭಿಸಿತು. ಆದರೆ ಈಗ, ಪ್ರಜಾಪ್ರಭುತ್ವದ ಮೇಲೆ ಬಹಿರಂಗ ದಾಳಿಯನ್ನು ಆರಂಭಿಸಿದೆ" ಎಂದು ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದರು.
ಈ ಸಂವಿಧಾನ ತಿದ್ದುಪಡಿ ಮಸೂದೆ ಸಂಸತ್ತಿನಲ್ಲಿ ಅಂಗೀಕಾರವಾದರೆ, ಭಾರತದಲ್ಲಿ ಪ್ರಜಾಪ್ರಭುತ್ವ ಕೊನೆಗೊಳ್ಳುತ್ತದೆ ಎಂದು ಅವರು ಎಚ್ಚರಿಸಿದರು.
Advertisement