

ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಉಕ್ರೇನ್ನಲ್ಲಿ ನಡೆಯುತ್ತಿರುವ ಸಂಘರ್ಷಗಳನ್ನು ಶಾಂತಿಯುತವಾಗಿ ಪರಿಹರಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ನೀಡಿದ್ದಾರೆ.
ನಾಲ್ಕು ದಿನಗಳ ಭಾರತ ಭೇಟಿಯಲ್ಲಿರುವ ಆಸ್ಟ್ರಿಯಾದ ಫೆಡರಲ್ ಚಾನ್ಸೆಲರ್ ಕ್ರಿಶ್ಚಿಯನ್ ಸ್ಟಾಕರ್ ಅವರೊಂದಿಗೆ ನಡೆದ ದ್ವಿಪಕ್ಷೀಯ ಮಾತುಕತೆಯ ನಂತರ, ಸೇನಾ ಮುಖಾಮುಖಿಯ ಮೂಲಕ ಯಾವುದೇ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ ಎಂದು ಮೋದಿ ಸ್ಪಷ್ಟವಾಗಿ ಹೇಳಿದರು.
"ಇಂದು, ಇಡೀ ಜಗತ್ತು ಬಹಳ ಗಂಭೀರ ಮತ್ತು ಉದ್ವಿಗ್ನ ಪರಿಸ್ಥಿತಿಯನ್ನು ಎದುರಿಸುತ್ತಿದೆ" ಎಂದು ಮೋದಿ ಹೇಳಿದರು. ಜಾಗತಿಕ ಉದ್ವಿಗ್ನತೆಯ ಪರಿಣಾಮವನ್ನು ಭಾರತವೂ ಅನುಭವಿಸುತ್ತಿದೆ ಎಂದರು.
ಭಾರತ ಮತ್ತು ಆಸ್ಟ್ರಿಯಾ ಸಂಘರ್ಷಗಳನ್ನು ಸಂವಾದ ಮತ್ತು ರಾಜತಾಂತ್ರಿಕತೆಯ ಮೂಲಕ ಪರಿಹರಿಸಬೇಕು ಎಂಬ ಅಭಿಪ್ರಾಯವನ್ನು ಹಂಚಿಕೊಂಡಿವೆ ಎಂದು ಪ್ರಧಾನಿ ಹೇಳಿದರು.
"ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದಲ್ಲಿ ಸ್ಥಿರ, ಸುಸ್ಥಿರ ಮತ್ತು ಶಾಶ್ವತ ಶಾಂತಿಯನ್ನು ನಾವು ಬೆಂಬಲಿಸುತ್ತೇವೆ" ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಭಾರತವು ಶಾಂತಿಯನ್ನು ಪ್ರತಿಪಾದಿಸುವುದಲ್ಲದೆ, ಭಯೋತ್ಪಾದನೆಯಂತಹ ಗಂಭೀರ ವಿಷಯಗಳ ಬಗ್ಗೆಯೂ ದೃಢವಾದ ನಿಲುವನ್ನು ತೆಗೆದುಕೊಳ್ಳುತ್ತದೆ ಎಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಸ್ಪಷ್ಟಪಡಿಸಿದರು.
ಸಭೆಯ ಸಮಯದಲ್ಲಿ ಎರಡೂ ದೇಶಗಳ ನಡುವಿನ ಸಹಕಾರದ ಬಗ್ಗೆ ಪ್ರಮುಖ ಅಂಶಗಳನ್ನು ಸಹ ಪ್ರಸ್ತಾಪಿಸಲಾಯಿತು. ಆಸ್ಟ್ರಿಯಾದೊಂದಿಗೆ ಸಂಬಂಧವನ್ನು ಹೊಸ ಮಟ್ಟಕ್ಕೆ ಕೊಂಡೊಯ್ಯುವ ಬಗ್ಗೆ ಪ್ರಧಾನಿ ಮೋದಿ ಮಾತನಾಡಿದರು.
ಮೂಲಸೌಕರ್ಯ, ನಾವೀನ್ಯತೆ ಮತ್ತು ಸುಸ್ಥಿರತೆಯಂತಹ ಕ್ಷೇತ್ರಗಳಲ್ಲಿ ಪಾಲುದಾರಿಕೆಗಳನ್ನು ಬಲಪಡಿಸುವ ಬಗ್ಗೆ ಒತ್ತು ನೀಡಲಾಯಿತು. ಐಐಟಿ ದೆಹಲಿ ಮತ್ತು ಮಾಂಟೇನ್ ವಿಶ್ವವಿದ್ಯಾಲಯದ ನಡುವಿನ ಒಪ್ಪಂದವನ್ನು ಜ್ಞಾನ ಪಾಲುದಾರಿಕೆಯ ಉತ್ತಮ ಉದಾಹರಣೆ ಎಂದು ಪ್ರಧಾನಿ ಬಣ್ಣಿಸಿದರು.
Advertisement