

ನವದೆಹಲಿ: ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ ಮತ್ತು ಪುದುಚೇರಿ ಸೇರಿದಂತೆ ದೇಶದ ವಿವಿಧೆಡೆ ನಡೆಯುತ್ತಿರುವ ಚುನಾವಣೆ ನಾಳೆ ಅಂತ್ಯವಾಗಲಿದ್ದು, ಬಳಿಕ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿದೆ.
ಈ ಕುರಿತು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ಮಾತನಾಡಿದ್ದು, ಅಂತಹ ವದಂತಿಗಳನ್ನು ತಳ್ಳಿಹಾಕಿದ್ದಾರೆ.ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಕಳೆದ ಎರಡು ತಿಂಗಳಲ್ಲಿ ಕಚ್ಚಾ ತೈಲದ ಬೆಲೆ ಶೇ. 50 ರಷ್ಟು ಹೆಚ್ಚಾಗಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಬೆಲೆಗಳು ನಾಲ್ಕನೇ ವರ್ಷವೂ ಏರಿಕೆಯಾಗಿಲ್ಲ.
ಇನ್ಪುಟ್ ವೆಚ್ಚಗಳು ಮತ್ತು ಪಂಪ್ ಬೆಲೆಗಳ ನಡುವಿನ ಹೆಚ್ಚುತ್ತಿರುವ ಅಂತರವು ಸರ್ಕಾರಿ ಸ್ವಾಮ್ಯದ ಇಂಧನ ಚಿಲ್ಲರೆ ವ್ಯಾಪಾರಿಗಳನ್ನು ಭಾರೀ ನಷ್ಟಕ್ಕೆ ಒಳಪಡಿಸಿದೆ. ಕೆಲವು ಅಂದಾಜಿನ ಪ್ರಕಾರ ದೈನಂದಿನ ವೆಚ್ಚ ಸುಮಾರು 2,400 ಕೋಟಿ ರೂ.ಗಳಷ್ಟಿದೆ. ಹೀಗಾಗಿ ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ ಮತ್ತು ಪುದುಚೇರಿಯಲ್ಲಿ ಬುಧವಾರ ಚುನಾವಣೆ ಮುಕ್ತಾಯಗೊಂಡ ನಂತರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಲಿದೆ ಎನ್ನಲಾಗುತ್ತಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತ ಶರ್ಮಾ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವ ಯಾವುದೇ ಪ್ರಸ್ತಾಪವಿಲ್ಲ ಎಂದು ಹೇಳಿದರು. ಪಶ್ಚಿಮ ಬಂಗಾಳದಲ್ಲಿ ಬುಧವಾರ ಮತದಾನ ಮುಗಿದ ನಂತರ ಚಿಲ್ಲರೆ ಇಂಧನ ಬೆಲೆಗಳನ್ನು ಹೆಚ್ಚಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಅವರು ಉತ್ತರಿಸಿದರು.
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯ ಭೀತಿಯಿಂದ ಕೆಲವು ಕಡೆಗಳಲ್ಲಿ ಈಗಲೇ ಖರೀದಿಸುತ್ತಿರುವುದನ್ನು ನೋಡಿದ್ದೇವೆ. ಅಂತಕ ಕಡೆಗಳಲ್ಲಿ ರಾಜ್ಯ ಸರ್ಕಾರಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಎಲ್ಲಾ ಚಿಲ್ಲರೆ ಮಾರಾಟ ಮಳಿಗೆಗಳನ್ನು ಮೇಲ್ವಿಚಾರಣೆ ಮಾಡಲಾಗುತ್ತಿದ್ದು, ಪೂರೈಕೆಗೆ ಆದ್ಯತೆ ನೀಡಲಾಗುತ್ತಿದೆ. ಇದರಿಂದ ಸ್ಟಾಕ್ ಲಭ್ಯತೆ ಖಚಿತವಾಗುತ್ತದೆ ಮತ್ತು ಯಾವುದೇ ಕೊರತೆ ಉಂಟಾಗುವುದಿಲ್ಲ ಎಂದು ಅವರು ಹೇಳಿದರು.
ಆಂಧ್ರಪ್ರದೇಶದಲ್ಲಿ ಸಂಭಾವ್ಯ ಬೆಲೆ ಏರಿಕೆಯ ಭೀತಿಯಿಂದ ಹಲವು ಕಡೆಗಳಲ್ಲಿ ಜನರು ಪೆಟ್ರೋಲ್ ಹಾಗೂ ಡೀಸೆಲ್ ಖರೀದಿಗೆ ಮುಗಿಬಿದ್ದಿದ್ದರು. ಇದು ಕೊರತೆಗೆ ಕಾರಣವಾಗಿತ್ತು. ಭಾನುವಾರ 400 ಕ್ಕೂ ಹೆಚ್ಚು ಪೆಟ್ರೋಲ್ ಪಂಪ್ಗಳು ಖಾಲಿಯಾಗಿವೆ ಎಂದು ವರದಿಗಳು ತಿಳಿಸಿವೆ. ಪೆಟ್ರೋಲಿಯಂ ಸಚಿವಾಲಯದ ಪ್ರಕಾರ, ಕೆಲವು ಮಳಿಗೆಗಳಲ್ಲಿ ಬೇಡಿಕೆ ಶೇ. 30-33 ರಷ್ಟು ಏರಿಕೆಯಾಗಿದೆ.
Advertisement