

ಜೈಪುರ: ರಾಜಸ್ಥಾನದ ಅಲ್ವಾರ್ ಜಿಲ್ಲೆಯ ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇಯಲ್ಲಿ ಚಲಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಐವರು ಸಜೀವ ದಹನವಾಗಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಬುಧವಾರ ರಾತ್ರಿ ಮೌಜ್ಪುರ ಬಳಿ ಈ ಭೀಕರ ಘಟನೆ ನಡೆದಿದ್ದು, ಮೃತಪಟ್ಟವರು ವೈಷ್ಣೋದೇವಿ ಯಾತ್ರೆಯಿಂದ ಹಿಂತಿರುಗುತ್ತಿದ್ದರು ಎನ್ನಲಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ 15 ನಿಮಿಷಗಳಲ್ಲಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು, ಆದರೆ ಆ ಹೊತ್ತಿಗೆ ಕಾರು ಸಂಪೂರ್ಣವಾಗಿ ಸುಟ್ಟುಹೋಗಿತ್ತು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರಿಯಾಂಕಾ ರಘುವಂಶಿ ತಿಳಿಸಿದ್ದಾರೆ.
ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು, ಅಪ್ರಾಪ್ತ ಬಾಲಕಿ ಮತ್ತು ಒಬ್ಬ ಪುರುಷ ಸಾವನ್ನಪ್ಪಿದ್ದಾರೆ. ಅವರೆಲ್ಲರೂ ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯ ನಿವಾಸಿಗಳು ಎಂದು ಅಧಿಕಾರಿ ಹೇಳಿದ್ದಾರೆ.
ಶಾರ್ಟ್ ಸರ್ಕ್ಯೂಟ್ನಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ ಎಂದು ಪೊಲೀಸ್ ಉಪ ವರಿಷ್ಠಾಧಿಕಾರಿ ಕೈಲಾಶ್ ಜಿಂದಾಲ್ ತಿಳಿಸಿದ್ದಾರೆ.
ಇದು ಸಿಎನ್ಜಿ ವಾಹನವಾಗಿರುವುದರಿಂದ, ಬೆಂಕಿ ವೇಗವಾಗಿ ಹರಡಿತು, ಇದರಿಂದ ಕಾರಿನಲ್ಲಿದ್ದವರಿಗೆ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಅವರು ಹೇಳಿದ್ದಾರೆ.
"ವಾಹನದಿಂದ ಅಸ್ಥಿಪಂಜರದ ಅವಶೇಷಗಳನ್ನು ಮಾತ್ರ ವಶಪಡಿಸಿಕೊಳ್ಳಲಾಗಿದೆ, ಅವುಗಳನ್ನು ಪ್ರತ್ಯೇಕವಾಗಿ ಸಂರಕ್ಷಿಸಲಾಗಿದೆ. ಅವರ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ನಡೆಸಲಾಗುವುದು" ಎಂದು ಅವರು ತಿಳಿಸಿದ್ದಾರೆ.
ಕಾರಿನ ಚಾಲಕ ವಿನೋದ್ ಕುಮಾರ್ ಮೆಹರ್ ಎಂದು ಗುರುತಿಸಲಾಗಿದ್ದು, ಅವರು ವಾಹನದಿಂದ ಜಿಗಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಸುಮಾರು ಶೇ. 80 ರಷ್ಟು ಸುಟ್ಟ ಗಾಯಗಳಾಗಿವೆ. ಅವರನ್ನು ಆರಂಭದಲ್ಲಿ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು ಮತ್ತು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜೈಪುರಕ್ಕೆ ಕಳುಹಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement