

ನವದೆಹಲಿ: ಜಂತರ್ ಮಂತರ್ನಲ್ಲಿ ಜುಲೈ 20 ರಂದು ನಡೆದ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಕೈಗೊಂಡ ಕ್ರಮದ ಕುರಿತು ಚರ್ಚಿಸಲು ವಿರೋಧ ಪಕ್ಷಗಳು ಸಿದ್ಧವಿವೆ ಎಂದು ಹೇಳಿರುವ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಈ ವಿಷಯದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸದನದಲ್ಲಿ ಹೇಳಿಕೆ ನೀಡಬೇಕೆಂದು ಗುರುವಾರ ಆಗ್ರಹಿಸಿದರು.
ಪ್ರತಿಭಟನೆಯ ಸಂದರ್ಭದಲ್ಲಿ ನಡೆದ ಪೊಲೀಸ್ ಕ್ರಮದ ಕುರಿತು ಗೃಹ ಸಚಿವರು ಹೇಳಿಕೆ ನೀಡಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸುತ್ತಲೇ ಬಂದಿವೆ.
ರಾಜ್ಯಸಭೆಯಲ್ಲಿ ಮಾತನಾಡಿದ ಖರ್ಗೆ, ಸಂಸದೀಯ ವ್ಯವಹಾರಗಳ ಸಚಿವ ಕಿರೆಣ್ ರಿಜಿಜು ಅವರ ಹಿಂದಿನ ಹೇಳಿಕೆಗಳನ್ನು ಟೀಕಿಸಿದರು ಹಾಗೂ ಸಂಸತ್ತಿನ ಕಲಾಪಗಳಿಗೆ ಉಂಟಾಗುವ ಅಡಚಣೆಗಳ ಕುರಿತು ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ವ್ಯಕ್ತಪಡಿಸಿದ್ದ ಅಭಿಪ್ರಾಯಗಳನ್ನು ಉಲ್ಲೇಖಿಸಿ, ಸರ್ಕಾರವು ಚರ್ಚೆಯಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.
ಖರ್ಗೆ ಅವರಿಗೆ ಪ್ರತಿಕ್ರಿಯಿಸಿದ ರಿಜಿಜು, ವಿರೋಧ ಪಕ್ಷದ ನಾಯಕರು ತಮ್ಮ ಬೇಡಿಕೆಯನ್ನು ಮಂಡಿಸುವಾಗ ಯಾವುದೇ ನಿಯಮವನ್ನು ಉಲ್ಲೇಖಿಸಿಲ್ಲ ಮತ್ತು ಅವರು ಸದನದ ಕಲಾಪಗಳನ್ನು ನಿರ್ದೇಶಿಸಲು ಅಥವಾ ಸರ್ಕಾರದ ಪರವಾಗಿ ಯಾವ ಸಚಿವರು ಉತ್ತರಿಸಬೇಕು ಎಂಬುದನ್ನು ನಿರ್ಧರಿಸಲು ಸಾಧ್ಯವಿಲ್ಲ ಎಂದು ಹೇಳಿದರು.
'ವಿರೋಧ ಪಕ್ಷದ ನಾಯಕರು ಯಾವುದೇ ನಿಯಮವನ್ನು ಉಲ್ಲೇಖಿಸಲಿಲ್ಲ. ಅವರು ಪೀಠಕ್ಕೆ ನಿರ್ದೇಶನ ನೀಡಲು ಸಾಧ್ಯವಿಲ್ಲ. ಇದು ಸರ್ಕಾರದ ಸಾಮೂಹಿಕ ಜವಾಬ್ದಾರಿಯಾಗಿದೆ. ಕಾಂಗ್ರೆಸ್ ಕೂಡ ಹೊಸ ಸದಸ್ಯರಿಗೆ ಅವಕಾಶ ನೀಡಬೇಕು' ಎಂದು ರಿಜಿಜು ಹೇಳಿದರು.
ನಂತರ, ವಿರೋಧ ಪಕ್ಷದ ಅಭಿಪ್ರಾಯಗಳನ್ನು ಗೃಹ ಸಚಿವರ ಗಮನಕ್ಕೆ ತರುವಂತೆ ರಾಜ್ಯಸಭಾ ಅಧ್ಯಕ್ಷ ಸಿಪಿ ರಾಧಾಕೃಷ್ಣನ್ ಅವರು ರಿಜಿಜು ಅವರಿಗೆ ಸೂಚಿಸಿದರು.
ಇದಕ್ಕೂ ಮುನ್ನ, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ಅತಿಯಾದ ಬಲಪ್ರಯೋಗ ಮಾಡಲಾಗಿದೆ ಎಂದು ಆರೋಪಿಸಿ ಹಾಗೂ ಈ ಘಟನೆಯ ಕುರಿತು ಚರ್ಚೆಗೆ ಆಗ್ರಹಿಸಿ, ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಅವರು ಲೋಕಸಭೆಯಲ್ಲಿ 'ನಿಲುವಳಿ ಸೂಚನೆ'ಯನ್ನು ಸಲ್ಲಿಸಿದ್ದರು. ಈ ಘಟನೆಯ ಕುರಿತು ಸ್ವತಂತ್ರ ತನಿಖೆ ನಡೆಸಬೇಕೆಂದು ವಿರೋಧ ಪಕ್ಷಗಳು ಆಗ್ರಹಿಸುತ್ತಿವೆ.
ಜಂತರ್ ಮಂತರ್ನಲ್ಲಿ ಜುಲೈ 20 ರಂದು ನಡೆದ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಕೈಗೊಂಡ ಕ್ರಮದ ಕುರಿತು ವಿರೋಧ ಪಕ್ಷದ ಸಂಸದರು ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಹಲವು ಸಂಸದರು 'ಅಮಿತ್ ಶಾ ಜವಾಬ್ ದೋ' (ಅಮಿತ್ ಶಾ ಅವರೇ, ಉತ್ತರಿಸಿ) ಎಂದು ಬರೆದಿದ್ದ ಫಲಕಗಳನ್ನು ಹಿಡಿದಿದ್ದರು.
ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾದಾಗಿನಿಂದಲೂ ವಿರೋಧ ಪಕ್ಷವು ಈ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ.