

ನವದೆಹಲಿ: ರಾಮ ಮಂದಿರ ದೇಣಿಗೆ ಮತ್ತು ನೀಟ್ ಅಕ್ರಮ ಖಂಡಿಸಿ ಜಂತರ್ ಮಂತರ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯದ ಹೊಣೆಗಾರಿಕೆಯನ್ನು ಪ್ರಧಾನಿ ನರೇಂದ್ರ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಹಿಸಿಕೊಳ್ಳಬೇಕು ಎಂದು ಆಗ್ರಹಿಸಿ ಪ್ರತಿಪಕ್ಷಗಳ ಸದಸ್ಯರು ಗುರುವಾರವೂ ಪ್ರತಿಭಟನೆ ಮುಂದುವರೆಸಿದ್ದಾರೆ.
ಇದೇ ವಿಚಾರ ಇಂದು ರಾಜ್ಯಸಭೆಯಲ್ಲೂ ತೀವ್ರ ಗದ್ದಲಕ್ಕೆ ಸಾಕ್ಷಿಯಾಯಿತು. ವಿದ್ಯಾರ್ಥಿಗಳ ವಿರುದ್ಧ ಪೊಲೀಸ್ ಕ್ರಮದ ಬಗ್ಗೆ ಅಮಿತ್ ಶಾ ಅವರು ಸದನದಲ್ಲಿ ಉತ್ತರ ಕೊಡಬೇಕು ಎಂದು ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಆಗ್ರಹಿಸಿದರು. ಅಲ್ಲದೆ ಸಭಾಪತಿ ಸಿ.ಪಿ. ರಾಧಾಕೃಷ್ಣನ್ ಅವರು, ಗೃಹ ಸಚಿವರಿಗೆ ನಿರ್ದೇಶನ ನೀಡಿ ಸದನಕ್ಕೆ ಕರೆಸಿ ಉತ್ತರ ಪಡೆಯುವಂತೆ ಮನವಿ ಮಾಡಿದರು.
ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಕಳೆದ ಏಳು ದಿನಗಳಿಂದ ಇದೇ ವಿಷಯವನ್ನು ಮತ್ತೆ ಮತ್ತೆ ಪ್ರಸ್ತಾಪಿಸುತ್ತಿದ್ದಾರೆ. ಸದನದ ನಿಯಮಗಳ ಪ್ರಕಾರ, ಸಭಾಪತಿಗೆ ಈ ರೀತಿಯ ನಿರ್ದೇಶನ ನೀಡಲು ಸಾಧ್ಯವಿಲ್ಲ. ವಿಪಕ್ಷದ ನಾಯಕರು ಸದನದ ಕಾರ್ಯವೈಖರಿಯನ್ನ ನಿರ್ಧರಿಸಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು.
ಈ ವೇಳೆ ಮಧ್ಯಪ್ರವೇಶಿಸಿದ ರಾಜ್ಯಸಭೆ ಸಭಾಪತಿ ಸಿ.ಪಿ ರಾಧಾಕೃಷ್ಣನ್ ಅವರು, ವಿರೋಧ ಪಕ್ಷದ ಭಾವನೆಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸುವಂತೆ ಕಿರಣ್ ರಿಜಿಜು ಅವರಿಗೆ ಸೂಚಿಸಿದರು.
ಮಧ್ಯಾಹ್ನ ಸಭೆ ಸೇರಿದ ನಂತರ ಪ್ರಶ್ನೋತ್ತರ ಅವಧಿಯಲ್ಲೂ ಪ್ರತಿಪಕ್ಷಗಳು ಪದೇ ಪದೇ ಕಲಾಪಕ್ಕೆ ಅಡ್ಡಿಪಡಿಸಿದ ಕಾರಣ ಸಭಾಪತಿಗಳು ಈ ಸೂಚನೆ ನೀಡಿದರು.
ಸಭಾಪತಿಗಳು ಪ್ರತಿಭಟನಾ ನಿರತ ಸದಸ್ಯರಿಗೆ ಕಲಾಪದ ಸಮಯದಲ್ಲಿ ಘೋಷಣೆಗಳನ್ನು ಕೂಗದಂತೆ ಪದೇ ಪದೇ ಕೇಳಿಕೊಂಡರು ಮತ್ತು ಅವರಿಗೆ ತಮ್ಮ ಅಭಿಪ್ರಾಯಗಳನ್ನು ಮಂಡಿಸಲು ಅವಕಾಶ ನೀಡಲಾಗುವುದು ಎಂದು ಭರವಸೆ ನೀಡಿದರು.
ಇನ್ನೊಂದೆಡೆ, ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮದ ಬಗ್ಗೆ ಅಮಿತ್ ಶಾ ಹೇಳಿಕೆ ನೀಡಬೇಕು, ರಾಮಮಂದಿರ ದೇಣಿಗೆಯ ದುರುಪಯೋಗದ ಕುರಿತು ಚರ್ಚೆ ನಡೆಯಬೇಕು ಹಾಗೂ ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯದ ಸ್ಥಾನಮಾನ ಮರುಸ್ಥಾಪಿಸಬೇಕು ಎಂಬ ಬೇಡಿಕೆಯನ್ನು ವಿರೋಧ ಪಕ್ಷಗಳು ಮುಂದುವರಿಸಿದವು.