

ಚಂಬಾ (ಹಿಮಾಚಲ ಪ್ರದೇಶ): ಹಿಮಾಚಲ ಪ್ರದೇಶದಲ್ಲಿ ಬೆಳ್ಳಂಬೆಳ್ಳಗೆ ಜವರಾಯ ಅಟ್ಟಹಾಸ ಮೆರೆದಿದ್ದು, ಚಂಬಾ ಜಿಲ್ಲೆಯ ತೀಸ್ಸಾ-ಬೈರಾಗಢ ರಸ್ತೆಯ ಅಪಾಯಕಾರಿ ತಿರುವಿನಲ್ಲಿ ಖಾಸಗಿ ಬಸ್ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಇದರ ಪರಿಣಾಮ, ಚಾಲಕ, ಕಂಡಕ್ಟರ್ ಸೇರಿದಂತೆ ಕನಿಷ್ಠ 7 ಜನರು ಸಾವನ್ನಪ್ಪಿದ್ದಾರೆ ಮತ್ತು 11 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ಏನಿದು ಘಟನೆ?
ಇಂದು ಮುಂಜಾನೆ 7.15 ರ ಸುಮಾರಿಗೆ ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಬೈರಾಗಢದಿಂದ ಚಂಬಾ ಕಡೆಗೆ ಹೊರಟಿದ್ದ ಒಟ್ಟು 22 ಪ್ರಯಾಣಿಕರಿದ್ದ ಈ ಖಾಸಗಿ ಬಸ್, ಚಲುಂಜ್ ಮೋಡ್ ಬಳಿ ನಿಯಂತ್ರಣ ತಪ್ಪಿದೆ. ಇದರ ಪರಿಣಾಮ ರಸ್ತೆಯಿಂದ ಪಲ್ಟಿಯಾದ ಬಸ್ ಸುಮಾರು 100 ಅಡಿ ಆಳದ ಪ್ರಪಾತಕ್ಕೆ ಉರುಳಿ, ಅದರ ಕೆಳಗಿದ್ದ ಮತ್ತೊಂದು ರಸ್ತೆಯ ಮೇಲೆ ಬಿದ್ದಿದೆ. ಈ ವೇಳೆ ಬಸ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಘಟನೆಯಲ್ಲಿ ಚಾಲಕ, ಕಂಡಕ್ಟರ್ ಸೇರಿದಂತೆ ಕನಿಷ್ಠ 7 ಜನರು ಸಾವನ್ನಪ್ಪಿದ್ದಾರೆ ಮತ್ತು 11 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಏತನ್ಮಧ್ಯೆ, ಅಪಘಾತ ಸಂಭವಿಸಿದ ತಕ್ಷಣವೇ ಸ್ಥಳೀಯ ನಿವಾಸಿಗಳು ರಕ್ಷಣಾ ಕಾರ್ಯಕ್ಕೆ ಧಾವಿಸಿ, ಪೊಲೀಸರು ಬರುವ ಮುನ್ನವೇ ಗಾಯಾಳುಗಳನ್ನು ಹೊರತೆಗೆಯಲು ನೆರವಾಗಿದ್ದಾರೆ. ಇನ್ನು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ 11 ಜನರನ್ನು ತೀಸ್ಸಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದ 6 ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಂಬಾದ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಭೀಕರ ಅಪಘಾತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೃತರ ಕುಟುಂಬಗಳಿಗೆ ಕಂಬನಿ ಮಿಡಿದಿದ್ದು, ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಘಟನೆಗೆ ಸಂತಾಪ ಸೂಚಿಸಿ, "ಚಂಬಾ ಜಿಲ್ಲೆಯ ಟಿಸ್ಸಾ-ಬೈರಾಗಢ ಮಾರ್ಗದಲ್ಲಿ ಚಲುಜ್ ಮೋರ್ ಬಳಿ ಸಂಭವಿಸಿದ ಬಸ್ ಅಪಘಾತದಲ್ಲಿ 7 ಜನರು ಸಾವನ್ನಪ್ಪಿ, 11 ಜನರು ಗಾಯಗೊಂಡಿರುವ ಸುದ್ದಿ ಅತ್ಯಂತ ಹೃದಯವಿದ್ರಾವಕವಾಗಿದೆ. ಈ ದುರಂತ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನಾನು ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ" ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.