

ನವದೆಹಲಿ: ಜಾತಿ ಗಣತಿ ಕುರಿತು ಪ್ರತಿಪಕ್ಷ ಕಾಂಗ್ರೆಸ್ ಶುಕ್ರವಾರ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದೆ. ಪ್ರತಿಕ್ರಿಯೆ ನೀಡಿದವರು ತಿಳಿಸಿದ ಜಾತಿಗಳ ವಿವರವನ್ನು ದಾಖಲಿಸಿಕೊಳ್ಳದಿರುವುದು ಸರ್ಕಾರದ ಉದ್ದೇಶದ ಬಗ್ಗೆ ಗಂಭೀರ ಅನುಮಾನಗಳನ್ನು ಹುಟ್ಟುಹಾಕುತ್ತದೆ ಎಂದು ಹೇಳಿದೆ.
ದೇಶದ ಜನಸಂಖ್ಯೆಯ ಸಮಗ್ರ ಮಾಹಿತಿ ಸಂಗ್ರಹಿಸುವ ಜನಗಣತಿ 2027ರ ಎರಡನೇ ಹಂತಕ್ಕೆ ಕೇಂದ್ರ ಸರ್ಕಾರ 40 ಪ್ರಶ್ನಾವಳಿಯನ್ನು ಶುಕ್ರವಾರ ಅಧಿಸೂಚನೆ ಮೂಲಕ ಪ್ರಕಟಿಸಿದೆ. ಸ್ವತಂತ್ರ ಭಾರತದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST)ಗಳ ಮಾಹಿತಿಯ ಜೊತೆಗೆ ಎಲ್ಲಾ ಜನರಿಂದ ಜಾತಿ ಕುರಿತ ಮುಕ್ತ ಪ್ರಶ್ನೆಯ ಮೂಲಕ ಮಾಹಿತಿ ಪಡೆಯಲಾಗುತ್ತದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್, ಈ ಹಿಂದೆ ತೆಲಂಗಾಣ ಮತ್ತು ಬಿಹಾರದಲ್ಲಿ ನಡೆದ ಸಮೀಕ್ಷೆ ವೇಳೆ ಜಾತಿಗಳ ಪಟ್ಟಿ ಹಾಗೂ ಪ್ರಶ್ನಾವಳಿ ಸಿದ್ಧಪಡಿಸಲಾಗಿತ್ತು. ಜನ ನೀಡಿದ ಉತ್ತರವನ್ನು ಗುರುತು ಮಾಡಲಾಗುತ್ತಿತ್ತು.
ಇದೇ ಮಾದರಿಯಲ್ಲಿ ಕೇಂದ್ರ ಸರ್ಕಾರ ಕೂಡಾ ಗಣತಿ ನಡೆಸಲಿದೆ ಎಂಬ ನಿರೀಕ್ಷೆ ಹುಸಿಯಾಗಿದೆ ಎಂದು ಹೇಳಿದ್ದಾರೆ.
ಜಾತಿ ಗಣತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಐಸಿಸಿ ಅಧ್ಯಕ್ಷ ಖರ್ಗೆ ಅವರು ಕಳೆದ ವರ್ಷ ಮೇ 5 ರಂದು ಬರೆದಿದ್ದ ಪತ್ರದ ಪ್ರತಿಯನ್ನು ಜೈರಾಮ್ ರಮೇಶ್ ತಮ್ಮ ಪೋಸ್ಟ್ ನೊಂದಿಗೆ ಹಂಚಿಕೊಂಡಿದ್ದಾರೆ.
ಜಾತಿ ಗಣತಿ ವಿಚಾರವಾಗಿ ಎಲ್ಲ ರಾಜಕೀಯ ಪಕ್ಷಗಳೊಂದಿಗೆ ಚರ್ಚೆ ನಡೆಸಬೇಕು. ಗಣತಿಗೆ ಸಂಬಂಧಿಸಿದಂತೆ ಸಮರ್ಪಕ ಪ್ರಶ್ನಾವಳಿ ಸಿದ್ಧಪಡಿಸಬೇಕು. ಜಾತಿವಾರು ಜನಸಂಖ್ಯೆಯ ಮಾಹಿತಿ ಸಂಗ್ರಹವಷ್ಟೇ ಗಣತಿ ಉದ್ದೇಶವಾಗಿರದೆ, ಸಾಮಾಜಿಕ ಆರ್ಥಿಕ ಸಾಧನೆಯೇ ಗುರಿಯಾಗಿರಬೇಕು ಎಂದು ಖರ್ಗೆ ಪತ್ರದಲ್ಲಿ ಪ್ರತಿಪಾದಿಸಿದ್ದರು. ಈ ಸಲಹೆಗಲನ್ನು ಕೇಂದ್ರ ಸರ್ಕಾರ ಕಡೆಗಣಿಸಿದೆ ಎಂದು ಅವರು ದೂರಿದ್ದಾರೆ.