

ಚೆನ್ನೈ: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಸ್ವಾತಂತ್ರ್ಯ ದಿನಾಚರಣೆಯ ಭಾಷಣವನ್ನು ಮಾಡಿದ ವಿಜಯ್, ಜಾತಿ ಮತ್ತು ಧಾರ್ಮಿಕ ತಡೆಗೋಡೆ ಮುರಿಯುವುದೇ ನಿಜವಾದ ಸ್ವಾತಂತ್ರ್ಯ ಎಂದಿದ್ದಾರೆ. ಸ್ವಾತಂತ್ರ್ಯವು ಒಂದು ನಿರಂತರ ಪ್ರಯಾಣವಾಗಿದ್ದು, ಅದು ಸಾಮಾಜಿಕ ಅಸಮಾನತೆ ಮತ್ತು ಭ್ರಷ್ಟಾಚಾರವನ್ನೂ ಎದುರಿಸಬೇಕಾದ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಚೆನ್ನೈನ ಸೇಂಟ್ ಜಾರ್ಜ್ ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮ ಪ್ರಾಣವನ್ನೇ ಅರ್ಪಿಸಿದವರಿಗೆ ಗೌರವ ಸಲ್ಲಿಸಿದರು. ಅವರ ಆದರ್ಶಗಳು ರಾಜ್ಯಕ್ಕೆ ಮಾರ್ಗದರ್ಶನ ನೀಡುತ್ತಿರಬೇಕು ಎಂದು ಹೇಳಿದರು.
ಕೇವಲ ರಾಜಕೀಯ ಸ್ವಾತಂತ್ರ್ಯದಿಂದ ಸ್ವಾತಂತ್ರ್ಯದ ಪರಿಕಲ್ಪನೆ ಪೂರ್ಣಗೊಳ್ಳುವುದಿಲ್ಲ, ಸಮಾಜವು ಜಾತಿ ಮತ್ತು ಧರ್ಮದ ಆಧಾರದ ಮೇಲಿನ ತಡೆಗೋಡೆಯಿಂದ ಮುಕ್ತವಾಗಬೇಕು ಎಂದು ಹೇಳಿದರು. ತಾವು ವಿವಿಧ ರೀತಿಯ ದಬ್ಬಾಳಿಕೆಗೆ ಒಳಗಾಗಿದ್ದೇವೆ ಎಂಬುದನ್ನು ಅರಿತು ಜನರು ಒಗ್ಗೂಡಬೇಕು. ಇದು ಸಾಮಾಜಿಕ ತಡೆಗೋಡೆಗಳನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ ಎಂದು ಅವರು ತಿಳಿಸಿದರು.
ಮಹಾತ್ಮ ಗಾಂಧಿಯವರ ದೃಷ್ಟಿಕೋನವನ್ನು ಉಲ್ಲೇಖಿಸಿದ ವಿಜಯ್, ಜಾತಿ ಮತ್ತು ಧಾರ್ಮಿಕ ಆಧಾರದ ಮೇಲೆ ವಿಭಜನೆಗಳನ್ನು ತಿರಸ್ಕರಿಸುವುದು ನಿಜವಾದ ಸ್ವಾತಂತ್ರ್ಯವನ್ನು ಸಾಧಿಸುವಲ್ಲಿನ ಪ್ರಮುಖ ಭಾಗವಾಗಿದೆ ಎಂದು ಹೇಳಿದರು. ಹಣ ಮತ್ತು ತೋಳ್ಬಲದ ರಾಜಕಾರಣವನ್ನು ತಿರಸ್ಕರಿಸಿದ್ದಕ್ಕಾಗಿ ಹಾಗೂ ಸಾಮಾಜಿಕ ನ್ಯಾಯ ಮತ್ತು ಜನಪರ ಆಡಳಿತಕ್ಕೆ ಬೆಂಬಲ ನೀಡಿದ್ದಕ್ಕಾಗಿ ತಮಿಳುನಾಡಿನ ಜನರನ್ನು ಮುಖ್ಯಮಂತ್ರಿ ಅಭಿನಂದಿಸಿದರು.
ಸರ್ಕಾರಿ ಇಲಾಖೆಗಳಲ್ಲಿ ಭ್ರಷ್ಟಾಚಾರವನ್ನು ತೊಡೆದುಹಾಕುವ ಪ್ರಯತ್ನಗಳು ಮುಂದುವರಿಯುತ್ತವೆ. ಭ್ರಷ್ಟಾಚಾರದ ಬಗ್ಗೆ ನಾಗರಿಕರು ಶೂನ್ಯ ಸಹಿಷ್ಣುತೆಯ ವಿಧಾನವನ್ನು ಅಳವಡಿಸಿಕೊಳ್ಳಬೇಕೆಂದು ವಿಜಯ್ ಕರೆ ನೀಡಿದರು.
ಇನ್ನೂ ಕೇಂದ್ರ ಸರ್ಕಾರದೊಂದಿಗೆ ರಾಜ್ಯಗಳ ಸಂಬಂಧಗಳ ಕುರಿತು ಮಾತನಾಡಿದ ಮುಖ್ಯಮಂತ್ರಿ, ತಮಿಳುನಾಡು ಆಡಳಿತಾತ್ಮಕ ವಿಷಯಗಳಲ್ಲಿ ಕೇಂದ್ರದೊಂದಿಗೆ ಸಹಕರಿಸುತ್ತದೆ ಆದರೆ ನೀತಿಗಳು ಅಥವಾ ನಿರ್ಧಾರಗಳು ರಾಜ್ಯದ ಹಕ್ಕುಗಳ ಮೇಲೆ ಪರಿಣಾಮ ಬೀರಿದಾಗ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ವಿಜಯ್ ಹೇಳಿದರು.