

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯಂದು ನವದೆಹಲಿಯ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ‘ವಂದೇ ಮಾತರಂ’ ಗಾಯನದ ವೇಳೆ ಸೋನಿಯಾ ಗಾಂಧಿ ಅವರ ವರ್ತನೆ ಕುರಿತು ಬಿಜೆಪಿ-ಕಾಂಗ್ರೆಸ್ ನಡುವೆ ಹೊಸ ರಾಜಕೀಯ ಸಂಘರ್ಷ ಶುರುವಾಗಿದೆ.
‘ವಂದೇ ಮಾತರಂ’ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಈ ಹಿಂದೆಯೂ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿದ್ದವು. ಇದೀಗ ಸ್ವಾತಂತ್ರ್ಯ ದಿನಾಚರಣೆಯ ವೇದಿಕೆಯಲ್ಲೇ ನಡೆದ ಘಟನೆ ಹೊಸ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.
ಬಿಜೆಪಿ ಇದನ್ನು ರಾಷ್ಟ್ರಭಕ್ತಿ ಮತ್ತು ರಾಷ್ಟ್ರೀಯ ಸಂಕೇತಗಳಿಗೆ ಗೌರವದ ವಿಚಾರವಾಗಿ ಬಿಂಬಿಸುತ್ತಿದ್ದರೆ, ಕಾಂಗ್ರೆಸ್ ಬಿಜೆಪಿ ವಿಡಿಯೊವನ್ನು ರಾಜಕೀಯ ಉದ್ದೇಶಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸುತ್ತಿದೆ.
ಆಗಿದ್ದೇನು?
ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ಬಳಿಕ ಈ ವಿವಾದ ಭುಗಿಲೆದ್ದಿದೆ. ‘ವಂದೇ ಮಾತರಂ’ ಗಾಯನ ನಡೆಯುತ್ತಿದ್ದ ವೇಳೆ ಪಕ್ಷದ ಹಿರಿಯ ನಾಯಕರು ಪರಸ್ಪರ ಮಾತನಾಡುತ್ತಿರುವುದು ದೃಶ್ಯಗಳಲ್ಲಿ ಕಂಡುಬಂದಿದೆ. ಅವರ ವರ್ತನೆ ರಾಷ್ಟ್ರಗೀತೆಗೆ ಅಗೌರವ ತೋರಿದಂತಾಗಿದೆ ಎಂದು ಬಿಜೆಪಿ ನಾಯಕರು ಟೀಕಿಸಿದ್ದಾರೆ.
ಮನೋಜ್ ತಿವಾರಿ ಕಿಡಿ
ಈ ನಡುವೆ, ಬಿಜೆಪಿ ಸಂಸದ ಮನೋಜ್ ತಿವಾರಿ ಭಾನುವಾರ ಕಾಂಗ್ರೆಸ್ ನಾಯಕತ್ವವನ್ನು ಟೀಕಿಸಿದ್ದು, ಪ್ರತಿಪಕ್ಷ ಕಾಂಗ್ರೆಸ್ಗೆ ರಾಷ್ಟ್ರಗೀತೆ ‘ವಂದೇ ಮಾತರಂ’ ಬಗ್ಗೆ ತೀವ್ರ ಅಸಹನೆ ಮತ್ತು ಅಗೌರವವಿದೆ ಎಂದು ಆರೋಪಿಸಿದ್ದಾರೆ.
ಸೋನಿಯಾ ಗಾಂಧಿ, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಗುರಿಯಾಗಿಸಿಕೊಂಡು ಮಾತನಾಡಿದ ಅವರು, ಕಾರ್ಯಕ್ರಮದ ವೇಳೆ ಅವರ ಮುಖದಲ್ಲಿ ಕಂಡುಬಂದ ಅಸಮಾಧಾನವೇ ಅವರ ನಿಲುವನ್ನು ಬಹಿರಂಗಪಡಿಸಿದೆ ಎಂದು ಹೇಳಿದ್ದಾರೆ.
“ನಿನ್ನೆ ಕಾಂಗ್ರೆಸ್ ದೇಶಕ್ಕೆ ಮತ್ತು ಇಡೀ ಜಗತ್ತಿಗೆ ತನ್ನ ನಿಜವಾದ ಮುಖವನ್ನು ತೋರಿಸಿದೆ. ಅವರಿಗೆ ‘ವಂದೇ ಮಾತರಂ’ ಬಗ್ಗೆ ಎಷ್ಟೊಂದು ದ್ವೇಷವಿದೆ... ‘ವಂದೇ ಮಾತರಂ’ನ ಪೂರ್ಣ ಆವೃತ್ತಿ ಆರಂಭವಾದ ತಕ್ಷಣ ಸೋನಿಯಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಎಷ್ಟು ಅಸಹಜವಾಗಿ ವರ್ತಿಸಿದರು ಎಂಬುದನ್ನು ನೀವು ನೋಡಿದ್ದೀರಿ. ಅದು ಕ್ಯಾಮೆರಾದಲ್ಲಿ ದಾಖಲಾಗಿದೆ ಎಂಬುದು ಗೊತ್ತಾದ ಬಳಿಕ ಅವರು ಸಮಜಾಯಿಷಿ ನೀಡಲು ಮುಂದಾದರು” ಎಂದು ಬಿಜೆಪಿ ನಾಯಕ ಹೇಳಿದ್ದಾರೆ.
“ವಂದೇ ಮಾತರಂ ನಿಲ್ಲಿಸಲು ಸೂಚಿಸಿದರು”
ಬಿಜೆಪಿ ನಾಯಕರು, ಸೋನಿಯಾ ಗಾಂಧಿ ಅವರು ‘ವಂದೇ ಮಾತರಂ’ನ ಪೂರ್ಣ ಗಾಯನಕ್ಕೆ ಆಕ್ಷೇಪ ವ್ಯಕ್ತಪಡಿಸಿ ಅದನ್ನು ನಿಲ್ಲಿಸುವಂತೆ ಸೂಚಿಸಿದ್ದರು ಎಂದು ಆರೋಪಿಸಿದ್ದಾರೆ. ಬಿಜೆಪಿ ನಾಯಕ ಅಮಿತ್ ಮಾಳವೀಯ ಸೇರಿದಂತೆ ಹಲವರು ಈ ವಿಡಿಯೊವನ್ನು ಹಂಚಿಕೊಂಡು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸೋನಿಯಾ ಗಾಂಧಿ ವಿರುದ್ಧ ದೂರು
ಇತ್ತ ‘ವಂದೇ ಮಾತರಂ’ ಗಾಯನ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧಿನಾಯಕಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಸೋನಿಯಾಗಾಂಧಿ ವಿರುದ್ಧ ಬಿಜೆಪಿ ನಾಯಕರು ದೂರು ಸಲ್ಲಿಸಿದ್ದಾರೆ. ಬಿಜೆಪಿ ನಾಯಕರು ಭಾನುವಾರ ಕರ್ನಾಟಕದ ಉರ್ವಾ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಔಪಚಾರಿಕ ದೂರು ದಾಖಲಿಸಿದ್ದಾರೆ. ಸೋನಿಯಾ ಗಾಂಧಿ ವಿರುದ್ಧ ದಾಖಲಾಗಿರುವ ಪೊಲೀಸ್ ದೂರು ವಿವಾದವನ್ನು ಮತ್ತಷ್ಟು ತೀವ್ರಗೊಳಿಸಿದೆ.
ಕಾಂಗ್ರೆಸ್ ಹೇಳಿದ್ದೇನು?
ಬಿಜೆಪಿ ಆರೋಪವನ್ನು ಕಾಂಗ್ರೆಸ್ ತಳ್ಳಿಹಾಕಿದೆ. ಸೋನಿಯಾ ಗಾಂಧಿ ಅವರು ‘ವಂದೇ ಮಾತರಂ’ ನಿಲ್ಲಿಸುವಂತೆ ಸೂಚಿಸಿರಲಿಲ್ಲ.. ದೀರ್ಘಕಾಲ ನಿಂತಿದ್ದ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕುರ್ಚಿ ತರುವಂತೆ ಅವರು ಸೂಚಿಸುತ್ತಿದ್ದರು ಎಂದು ಕಾಂಗ್ರೆಸ್ ಮೂಲಗಳು ಸ್ಪಷ್ಟಪಡಿಸಿವೆ.
ಹೀಗಾಗಿ ಬಿಜೆಪಿ ವಿಡಿಯೊವನ್ನು ತಪ್ಪಾಗಿ ವ್ಯಾಖ್ಯಾನಿಸುತ್ತಿದೆ ಎಂಬುದು ಕಾಂಗ್ರೆಸ್ನ ವಾದವಾಗಿದೆ. ವಿಡಿಯೊದಲ್ಲಿ ಸೋನಿಯಾ ಗಾಂಧಿ ಮತ್ತು ಖರ್ಗೆ ನಡುವೆ ನಡೆದ ಸಂಭಾಷಣೆ ಹಾಗೂ ಸನ್ನೆಗಳ ಅರ್ಥದ ಕುರಿತಂತೆ ಎರಡೂ ಪಕ್ಷಗಳು ವಿಭಿನ್ನ ವ್ಯಾಖ್ಯಾನ ನೀಡುತ್ತಿರುವುದರಿಂದ ವಿವಾದ ಮತ್ತಷ್ಟು ತೀವ್ರಗೊಂಡಿದೆ.