

ವಾರಾಣಸಿ: ಉತ್ತರ ಪ್ರದೇಶದ ವಾರಣಾಸಿ ವಿಮಾನ ನಿಲ್ದಾಣದಲ್ಲಿ ಗುಂಡಿನ ಸದ್ದು ಮೊಳಗಿದ್ದು, ಈ ಘಟನೆಯಲ್ಲಿ ಭದ್ರತಾ ಸಿಬ್ಬಂದಿ ಸೇರಿ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಹೌದು.. ಉತ್ತರ ಪ್ರದೇಶದ ವಾರಾಣಸಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಗ್ಗೆ ಪ್ರಯಾಣಿಕನೊಬ್ಬನ ಲೈಸೆನ್ಸ್ ಹೊಂದಿರುವ ಪಿಸ್ತೂಲ್ ಭದ್ರತಾ ತಪಾಸಣೆ ವೇಳೆ ಆಕಸ್ಮಿಕವಾಗಿ ಸಿಡಿದ ಪರಿಣಾಮ ಮಹಿಳಾ ಭದ್ರತಾ ಸಿಬ್ಬಂದಿ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂಲಗಳ ಪ್ರಕಾರ ಅಜಂಗಢ ಜಿಲ್ಲೆಯ ನಿವಾಸಿ ಕಮಲೇಶ್ ರೈ ಅವರು ಪತ್ನಿಯೊಂದಿಗೆ ಮುಂಬೈಗೆ ತೆರಳಲು ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ IX1810 ಏರಲು ಲಾಲ್ ಬಹದ್ದೂರ್ ಶಾಸ್ತ್ರಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಅವರ ಬಳಿ ಲೈಸೆನ್ಸ್ ಹೊಂದಿರುವ ಪಿಸ್ತೂಲ್ ಇತ್ತು ಎಂದು ಗೋಮತಿ ಝೋನ್ ಡಿಸಿಪಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಭದ್ರತಾ ತಪಾಸಣೆ ವೇಳೆ ಪಿಸ್ತೂಲ್ ಮತ್ತು ಅದರ ಗುಂಡುಗಳನ್ನು ಪರಿಶೀಲಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಗುಂಡು ಹಾರಿದೆ. ಈ ವೇಳೆ ಗುಂಡು ತಗುಲಿ ಮಹಿಳಾ ಭದ್ರತಾ ಸಿಬ್ಬಂದಿಯ ಕಾಲಿಗೆ ಗಾಯವಾಗಿದ್ದು, ಸಮೀಪದಲ್ಲಿದ್ದ ಮತ್ತೊಬ್ಬ ವ್ಯಕ್ತಿಯ ಹೆಬ್ಬೆರಳಿಗೂ ಗುಂಡು ತಗುಲಿದೆ. ಇಬ್ಬರನ್ನೂ ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ
ಘಟನೆ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಗೋಮತಿ ಝೋನ್ ಡಿಸಿಪಿ, ಪಿಂದ್ರಾ ಎಸಿಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಇತರ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು.
ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಲಾಗುತ್ತಿದ್ದು, ಘಟನೆಗೆ ಸಂಬಂಧಿಸಿದ ಅಗತ್ಯ ಮಾಹಿತಿಗಳನ್ನು ಅಧಿಕಾರಿಗಳು ಕಲೆಹಾಕುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.