

ಮಧ್ಯಪ್ರದೇಶದ ಖಾಂಡ್ವಾದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿರುವುದನ್ನು ಖಂಡಿಸಿ ವಿಶಿಷ್ಟ ಪ್ರತಿಭಟನೆ ಮೂಲಕ ಸುದ್ದಿಯಾಗಿದ್ದಾರೆ.
ವ್ಯಕ್ತಿಯೊಬ್ಬರು ನಾಯಿ ವೇಷ ಧರಿಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆಗೆ ಆಗಮಿಸಿದ್ದು, ಇದನ್ನು ನೋಡಲು ಅಧಿಕಾರಿಗಳು ಹಾಗೂ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು ಕಂಡುಬಂತು.
ಈ ಪ್ರತಿಭಟನೆ ವಿಶಿಷ್ಟವಾಗಿರುವುದಷ್ಟೇ ಅಲ್ಲದೆ, ನಗರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಸಮಸ್ಯೆ ಹಾಗೂ ಸಾಮಾನ್ಯ ನಾಗರಿಕರ ಸುರಕ್ಷತೆ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸುವುದು ಆಡಳಿತ ಇಲಾಖೆಯ ಜವಾಬ್ದಾರಿಯಾಗಿದೆ. ಈ ಸಮಸ್ಯೆಗೆ ಶಾಶ್ವತ ಹಾಗೂ ಸೂಕ್ಷ್ಮತೆಯಿಂದ ಕೂಡಿದ ಪರಿಹಾರ ಕಂಡುಕೊಳ್ಳುವುದು ಅಗತ್ಯವಾಗಿದೆ ಎಂಬುದು ಸಂಘ-ಸಂಸ್ಥೆಗಳು, ಸಾಮಾನ್ಯ ನಾಗರಿಕರ ಆಗ್ರಹವಾಗಿದೆ.
ಖಾಂಡ್ವಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿಪಕ್ಷದ ನಾಯಕ ದೀಪಕ್ ಮುಲ್ಲು ರಾಥೋಡ್ ಹಾಗೂ ಇತರರು, ಕಳೆದ ನಾಲ್ಕು ವರ್ಷಗಳಲ್ಲಿ ಬೀದಿ ನಾಯಿಗಳ ಸಂತಾನಹರಣಕ್ಕಾಗಿ 40 ಲಕ್ಷ ರೂಪಾಯಿ ವೆಚ್ಚ ಮಾಡಿದ್ದರೂ 13,225 ನಾಯಿ ಕಡಿತ ಪ್ರಕರಣಗಳು ವರದಿಯಾಗಿರುವುದನ್ನು ಜಿಲ್ಲಾಧಿಕಾರಿಗಳ ಮುಂದೆ ಪ್ರಸ್ತಾಪಿಸಿದರು.
ದೆಹಲಿಯಿಂದ ಬಂದ ‘ಡಾಗ್ಗಿ ಬ್ರದರ್’ ಎಂಬ ವ್ಯಕ್ತಿ, ಸಂತಾನಹರಣ ಕಾರ್ಯಕ್ರಮದಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ದೂರು ಸಲ್ಲಿಸಿದರು. ಈ ಯೋಜನೆಯಲ್ಲಿ ಪಾರದರ್ಶಕತೆ ಕಾಪಾಡಬೇಕು ಹಾಗೂ ಬೀದಿ ನಾಯಿಗಳ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಆದರೆ ಕಾರ್ಯನಿರ್ವಾಹಕ ಎಂಜಿನಿಯರ್ ಸಂಜಯ್ ಶುಕ್ಲಾ ಸೇರಿದಂತೆ ಅಧಿಕಾರಿಗಳು ಅಕ್ರಮ ನಡೆದಿರುವ ಆರೋಪಗಳನ್ನು ತಳ್ಳಿಹಾಕಿದರು. ಶೀಘ್ರದಲ್ಲೇ ಸಂಬಂಧಿತ ಅಂಕಿಅಂಶಗಳನ್ನು ಹಂಚಿಕೊಳ್ಳುವುದಾಗಿ ಅವರು ಭರವಸೆ ನೀಡಿದರು.