

ನವದೆಹಲಿ: ಅಚ್ಚರಿಯ ಬೆಳವಣಿಗೆಯಲ್ಲಿ, ಬೆಂಗಳೂರು ಸುರಂಗ ರಸ್ತೆ ಯೋಜನೆಗೆ ಅತಿ ಕಡಿಮೆ ಬಿಡ್ ಸಲ್ಲಿಸಿದ ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಗೌತಮ್ ಅದಾನಿ ಅವರು ಭಾನುವಾರ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ದಿಢೀರ್ ಭೇಟಿ ನೀಡಿ, ಯೋಜನೆ ಬಗ್ಗೆ ಮಹತ್ವದ ಚರ್ಚೆ ನಡೆಸಿದ್ದು, ತೀವ್ರ ಚರ್ಚೆಗೆ ಕಾರಣವಾಗಿದೆ.
ಕಾಂಗ್ರೆಸ್ ಹೈ ಕಮಾಂಡ್ ಅದಾನಿ ವಿರುದ್ಧ ನಿರಂತರ ರಾಜಕೀಯ ಟೀಕೆ, ವಾಗ್ದಾಳಿ ನಡೆಸುತ್ತಿದ್ದರೆ, ಇತ್ತ ಕರ್ನಾಟಕ ಸಿಎಂ ಅದಾನಿಯನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಹಿರಿಯ ನಾಯಕ ಪವನ್ ಖೇರಾ ಅವರು, ನಾವು ಯಾವುದೇ ನಿರ್ದಿಷ್ಟ ಉದ್ಯಮಿಯ ವಿರುದ್ಧವಿಲ್ಲ, ಆದರೆ ಯಾವುದೇ ಒಬ್ಬ ಉದ್ಯಮಿಗೆ ಸಂಪೂರ್ಣ ಏಕಸ್ವಾಮ್ಯ ಸಿಕ್ಕರೆ ಅದು ದೇಶದ ಹಿತದೃಷ್ಟಿಯಿಂದ ಒಳ್ಳೆಯದಲ್ಲ ಎನ್ನುವುದು ಕಾಂಗ್ರೆಸ್ ನಿಲುವು ಎಂದು ಅದಾನಿ-ಡಿಕೆಶಿ ಭೇಟಿಯನ್ನು ಸಮರ್ಥಿಸಿಕೊಂಡಿದ್ದಾರೆ.
ನಮ್ಮ ಹೋರಾಟ ಏಕಸ್ವಾಮ್ಯದ ವಿರುದ್ಧವೇ ಹೊರತು ಉದ್ಯಮಿಗಳ ವಿರುದ್ಧವಲ್ಲ ಪವನ್ ಖೇರಾ ಅವರು ಸ್ಪಷ್ಟಪಡಿಸಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಡಿ.ಕೆ.ಶಿವಕುಮಾರ್, ಗೌತಮ್ ಅದಾನಿ ಅವರಿಗೆ ಇಲ್ಲಿ ಹಲವು ಉದ್ಯಮಗಳಿವೆ. ನಾನು ಮೊದಲ ಬಾರಿ ಸಿಎಂ ಆಗಿರುವುದರಿಂದ ಸೌಜನ್ಯಯುತ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.
ಉದ್ಯಮಿ ಅದಾನಿ ಅವರು ಬೆಂಗಳೂರಿನ ಉದ್ದೇಶಿತ ಸುರಂಗ ಮಾರ್ಗ ಯೋಜನೆ ಬಗ್ಗೆ ಸಿಎಂ ಶಿವಕುಮಾರ್ ಜತೆ ಸಮಾಲೋಚನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ನಡುವೆ ಸುಮಾರು 17 ಕಿ.ಮೀ. ಉದ್ದದ ಸುರಂಗ ರಸ್ತೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಇದರ ಟೆಂಡರ್ ಪ್ರಕ್ರಿಯೆಯಲ್ಲಿ ಅದಾನಿ ಎಂಟರ್ಪ್ರೈಸಸ್ ಲಿಮಿಟೆಡ್ ಸಂಸ್ಥೆಯು 22,267 ಕೋಟಿ ರೂ. ಮೊತ್ತವನ್ನು ನಮೂದಿಸಿ ಅತಿ ಕಡಿಮೆ ಬಿಡ್ ಸಲ್ಲಿಸಿದ ಸಂಸ್ಥೆಯಾಗಿ ಹೊರಹೊಮ್ಮಿದೆ. ಈ ಸಂಬಂಧ ಚರ್ಚೆ ನಡೆದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.