

ಕೋಲ್ಕತ್ತಾ: ಟಿಎಂಸಿಪಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ವೇಳೆ ಕಲ್ಕತ್ತಾ ಹೈಕೋರ್ಟ್ ವಿಧಿಸಿದ್ದ ಷರತ್ತುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ವಿರುದ್ಧ ಕೋಲ್ಕತ್ತಾ ಪೊಲೀಸರು ಶನಿವಾರ ಸ್ವಯಂಪ್ರೇರಿತವಾಗಿ ಎಫ್ಐಆರ್ ದಾಖಲಿಸಿದ್ದಾರೆ.
ಮಮತಾ ಬ್ಯಾನರ್ಜಿ ಹಾಗೂ ತೃಣಮೂಲ ಛತ್ರ ಪರಿಷತ್(ಟಿಎಂಸಿಪಿ) ಸಭೆಯ ಆಯೋಜಕರ ವಿರುದ್ಧ ಹೇಸ್ಟಿಂಗ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
"ಮಾಜಿ ಮುಖ್ಯಮಂತ್ರಿಗಳು ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಉಲ್ಲಂಘನೆಯಲ್ಲಿ ಭಾಗಿಯಾಗಿರುವ ಎಲ್ಲರ ಪಾತ್ರವನ್ನು ತನಿಖೆಯ ಸಮಯದಲ್ಲಿ ಪರಿಶೀಲಿಸಲಾಗುವುದು" ಎಂದು ಅವರು ಹೇಳಿದ್ದಾರೆ.
ಶುಕ್ರವಾರ ಸೆಂಟ್ರಲ್ ಕೋಲ್ಕತ್ತಾದ ಕ್ಯಾಥೆಡ್ರಲ್ ರಸ್ತೆಯಲ್ಲಿ TMCP ಸಭೆ ನಡೆಸಲು ನ್ಯಾಯಾಲಯ ವಿಧಿಸಿರುವ ಷರತ್ತುಗಳನ್ನು ಪರಿಶೀಲಿಸಿದ ನಂತರ ಈ ಪ್ರಕರಣ ದಾಖಲಿಸಲಾಗಿದೆ.
ಸಭೆಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ತಮ್ಮ ಬೆಂಬಲಿಗರ ವಿರುದ್ಧ "ಬಿಜೆಪಿಯ ಆಜ್ಞೆಯ ಮೇರೆಗೆ ನಡೆಸಲಾಗುತ್ತಿರುವ ಪೊಲೀಸ್ ದೌರ್ಜನ್ಯ" ವನ್ನು ತಡೆಯುವುದಾಗಿ ಪ್ರತಿಜ್ಞೆ ಮಾಡಿದ್ದರು.