

ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಸುಪ್ರೀಂ ಕೋರ್ಟ್ನಲ್ಲಿ ಖುದ್ದು ವಾದ ಮಂಡಿಸಿ ಹೊಸ ದಾಖಲೆ ನಿರ್ಮಿಸಿದರು.
ಕೇಂದ್ರ ಚುನಾವಣಾ ಆಯೋಗ, ಪಶ್ಚಿಮ ಬಂಗಾಳವನ್ನು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR) ಮೂಲಕ ಗುರಿಯಾಗಿಸಲಾಗುತ್ತಿದೆ ಮತ್ತು ಈ ವಿಚಾರದಲ್ಲಿ ತಮಗೆ ಎಲ್ಲೂ ನ್ಯಾಯ ಸಿಗದ ಹಿನ್ನಲೆಯಲ್ಲಿ ತಾವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವುದಾಗಿ ಮಮತಾ ಹೇಳಿದ್ದಾರೆ.
ನ್ಯಾಯಾಲಯ ಸಂಖ್ಯೆ 1 ರ ಮೊದಲ ಸಾಲಿನಲ್ಲಿ ಹಾಜರಿದ್ದ ಟಿಎಂಸಿ ಮುಖ್ಯಸ್ಥೆ, ಹಿರಿಯ ವಕೀಲ ಶ್ಯಾಮ್ ದಿವಾನ್ ಸೇರಿದಂತೆ ಅವರ ವಕೀಲರ ತಂಡದೊಂದಿಗೆ, ಸ್ವತಃ ಪ್ರಕರಣದಲ್ಲಿ ವಾದಿ ಮಂಡಿಸಿದರು. ಈ ಮೂಲಕ ಖುದ್ದು ಸುಪ್ರೀಂ ಕೋರ್ಟ್ ಗೆ ಹಾಜರಾಗಿ ವಾದ ಮಂಡಿಸಿದ ಮೊದಲ ಮುಖ್ಯಮಂತ್ರಿ ಎಂಬ ದಾಖಲೆ ನಿರ್ಮಿಸಿದರು.
ತಮಗೆ ವಾದ ಮಾಡಲು ಅವಕಾಶ ನೀಡಿದ್ದಕ್ಕಾಗಿ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ ಪೀಠಕ್ಕೆ ಧನ್ಯವಾದ ಹೇಳಿದ ಮಮತಾ, “ನ್ಯಾಯದಾನ ವಿಳಂಬವಾಗುತ್ತಿದೆ. ನ್ಯಾಯವು ಮುಚ್ಚಿದ ಬಾಗಿಲಗಳ ಹಿಂದೆ ಕಣ್ಣೀರಿಡುತ್ತಿದೆ. ನಮಗೆ ನ್ಯಾಯ ಸಿಗುವುದಿಲ್ಲವೆಂದು ಖಾತ್ರಿಯಾದಾಗ ಸುಪ್ರೀಮ್ ಕೋರ್ಟ್ ಮೆಟ್ಟಿಲೇರಿದ್ದೇವೆ. ನಾನು ಮುಖ್ಯ ವ್ಯಕ್ತಿಯೇನೂ ಅಲ್ಲ. ಆದರೆ ನನ್ನ ಜನರಿಗಾಗಿ ಹೋರಾಡುತ್ತಿದ್ದೇನೆಯೇ ವಿನಾ ನನ್ನ ಪಕ್ಷಕ್ಕಾಗಿ ಅಲ್ಲ” ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ಚುನಾವಣೆಗೂ ಮುನ್ನ ಪಶ್ಚಿಮ ಬಂಗಾಳವನ್ನು ಮಾತ್ರವೇ ಟಾರ್ಗೆಟ್ ಮಾಡಲಾಗುತ್ತಿದೆ. ಎರಡು ವರ್ಷಗಳ ಕಾಲಾವಕಾಶ ಹಿಡಿಯುವ ಪ್ರಕ್ರಿಯೆಯನ್ನು ಎರಡೇ ತಿಂಗಳಲ್ಲಿ ಮಾಡಲು ಬಯಸಿದ್ದರು. ಹಬ್ಬಹರಿದಿನಗಳು, ಸುಗ್ಗಿಯ ದಿನಗಳ ಕಾಲದಲ್ಲಿ ಜನಸಾಮಾನ್ಯರಿಗೆ ಕಿರುಕುಳ ಕೊಡುತ್ತಿದ್ದಾರೆ. ಈ ಎಸ್ಐಆರ್ ಪ್ರಕ್ರಿಯೆಯಲ್ಲಿ ನೂರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. 24 ವರ್ಷಗಳ ಕಾಲ ಮಾಡದೆ ಹೋದ ಕೆಲಸವನ್ನು ಮೂರು ತಿಂಗಳಲ್ಲಿ ಮಾಡಲು ಹೊರಟು, ಚುನಾವಣಾ ಆಯೋಗ ನೀಡಿರುವ ಕಿರುಕುಳದ ಕಾರಣ ಬಿ.ಎಲ್.ಒ.ಗಳು ಪ್ರಾಣಬಿಟ್ಟಿದ್ದಾರೆ. ಅಸ್ಸಾಂ ಅಥವಾ ಇತರೆ ಈಶಾನ್ಯ ರಾಜ್ಯಗಳನ್ನು ಯಾಕೆ ಈ ಎಸ್.ಐ.ಆರ್.ಗೆ ಗುರಿ ಮಾಡಿಲ್ಲ, ಕೇವಲ ಪಶ್ಚಿಮ ಬಂಗಾಳದ ಮೇಲೆ ಯಾಕೆ ಈ ದ್ವೇಷ ಸಾಧನೆ? ಎಂದು ಮಮತಾ ಪ್ರಶ್ನಿಸಿದರು.
ಚುನಾವಣಾ ಆಯೋಗ ಎಂಬುದು ವಾಟ್ಸ್ಯಾಪ್ ನಲ್ಲಿ ನಿರ್ದೇಶನಗಳನ್ನು ನೀಡುವ ವಾಟ್ಸ್ಯಾಪ್ ಆಯೋಗ ಆಗಿ ಹೋಗಿದೆ ಎಂದು ಮಮತಾ ವ್ಯಂಗ್ಯವಾಡಿದರು.
SIR ಪ್ರಕ್ರಿಯೆ ಮೂಲಕ ಸಣ್ಣ, ಸಣ್ಣ ತಪ್ಪುಗಳಿಗೂ ಮತದಾರರನ್ನು ತೆಗೆದು ಹಾಕಲಾಗುತ್ತಿದೆ ಎಂದು ಆರೋಪಿಸಿದ ಮಮತಾ, ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡುವುದನ್ನು ನಿಲ್ಲಿಸಲು ತುರ್ತು ನಿರ್ದೇಶನಗಳನ್ನು ನೀಡುವ ಅಗತ್ಯವಿದೆ ಎಂದರು.
ಮಮತಾ ವಾದವನ್ನು ಆಲಿಸಿದ ಸುಪ್ರೀಂ ಕೋರ್ಟ್, ಈ ಸಂಬಂಧ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿದೆ.
Advertisement