

ಶಿಲ್ಲಾಂಗ್: ಮೇಘಾಲಯದ ಪೂರ್ವ ಜೈಂಟಿಯಾ ಹಿಲ್ಸ್ ಜಿಲ್ಲೆಯ "ಅಕ್ರಮ" ಕಲ್ಲಿದ್ದಲು ಗಣಿಯಲ್ಲಿ ಗುರುವಾರ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 16 ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನ ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ ಐ ನೊಂಗ್ರಾಂಗ್ ಅವರು ತಿಳಿಸಿದ್ದಾರೆ.
ಇಂದು ಬೆಳಗ್ಗೆ ಥಾಂಗ್ಸ್ಕು ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ರಕ್ಷಣಾ ತಂಡಗಳು ಶೋಧ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಅವರು ಹೇಳಿದ್ದಾರೆ.
"ನಾವು ಇಲ್ಲಿಯವರೆಗೆ 16 ಶವಗಳನ್ನು ವಶಪಡಿಸಿಕೊಂಡಿದ್ದೇವೆ. ಸ್ಫೋಟದ ಸಮಯದಲ್ಲಿ ಗಣಿಯಲ್ಲಿದ್ದ ಕಾರ್ಮಿಕರ ನಿಖರ ಸಂಖ್ಯೆ ಇನ್ನೂ ಖಚಿತಪಡಿಸಲಾಗಿಲ್ಲ. ಹೀಗಾಗಿ ಹೆಚ್ಚಿನ ಜನ ಸಿಕ್ಕಿಬಿದ್ದಿರುವ ಶಂಕೆ ಇದೆ" ಎಂದು ಅವರು ತಿಳಿಸಿದ್ದಾರೆ.
ಸ್ಫೋಟದಲ್ಲಿ ಗಾಯಗೊಂಡ ಒಬ್ಬ ವ್ಯಕ್ತಿಯನ್ನು ಆರಂಭದಲ್ಲಿ ಸುಟ್ಂಗಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ನಂತರ ಉತ್ತಮ ಚಿಕಿತ್ಸೆಗಾಗಿ ಶಿಲ್ಲಾಂಗ್ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಪೂರ್ವ ಜೈಂಟಿಯಾ ಹಿಲ್ಸ್ ಪೊಲೀಸ್ ವರಿಷ್ಠಾಧಿಕಾರಿ ವಿಕಾಶ್ ಕುಮಾರ್ ಹೇಳಿದ್ದಾರೆ.
ಕಲ್ಲಿದ್ದಲು ಗಣಿಗಾರಿಕೆ ಚಟುವಟಿಕೆ ನಡೆಯುತ್ತಿದ್ದ ಸಮಯದಲ್ಲಿ ಸ್ಫೋಟ ಸಂಭವಿಸಿದೆ. ಗಣಿ ಕಾನೂನುಬಾಹಿರವಾಗಿ ಕಾರ್ಯನಿರ್ವಹಿಸುತ್ತಿತ್ತು ಎಂದು ಅವರು ತಿಳಿಸಿದ್ದಾರೆ.
ಗಣಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದೆಯೇ ಎಂದು ಕೇಳಿದಾಗ, ಕುಮಾರ್, "ಹೌದು, ಅದು ಹಾಗೆ ತೋರುತ್ತದೆ" ಎಂದು ಹೇಳಿದರು. ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ, ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದರು.
Advertisement