

ಚಂಡೀಗಢ: ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್'ಗೆ ಮತ್ತೆ 40 ದಿನಗಳ ಪೆರೋಲ್ ನೀಡಲಾಗಿದೆ.
ಈ ಮೂಲಕ ಗುರ್ಮಿತ್ ಅವರಿಗೆ 15ನೇ ಬಾರಿ ಪೆರೋಲ್ ನೀಡಲಾಗಿದೆ. ರೋಹ್ಟಕ್ ವಿಭಾಗೀಯ ಆಯುಕ್ತರು ಗುರ್ಮೀತ್ ರಾಮ್ ರಹೀಮ್ ಸಿಂಗ್'ಗೆ 40 ದಿನಗಳ ಪೆರೋಲ್ ಅನ್ನು ಅನುಮೋದಿಸಿದ್ದಾರೆ. ಭಾನುವಾರ ಅಥವಾ ಸೋಮವಾರ ಅವರನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.
ತಮ್ಮ ಇಬ್ಬರು ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ಸಿರ್ಸಾ ಮೂಲದ ರಾಮ್ ರಹೀಮ್ ಸಿಂಗ್ ಹರಿಯಾಣದ ರೋಹ್ಟಕ್ನ ಸುನಾರಿಯಾ ಜೈಲು ವಾಸ ಅನುಭವಿಸುತ್ತಿದ್ದಾರೆ.
ಇದಲ್ಲದೆ, ಪತ್ರಕರ್ತ ರಾಮ್ ಚಂದರ್ ಛತ್ರಪತಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಇದರ ಶಿಕ್ಷೆ ಪ್ರಸ್ತುತ ಶಿಕ್ಷೆಯ ಅವಧಿ ಮುಗಿದ ನಂತರ ಪ್ರಾರಂಭವಾಗಲಿದೆ.
ಸಿರ್ಸಾ ಡೇರಾ ಸಚ್ಚಾ ಸೌದಾ ಪಂಥವು ಹರಿಯಾಣ, ಪಂಜಾಬ್, ರಾಜಸ್ಥಾನ ಮತ್ತು ಇತರ ರಾಜ್ಯಗಳಲ್ಲಿ ಅಪಾರ ಸಂಖ್ಯೆಯ ಅನುಯಾಯಿಗಳನ್ನು ಹೊಂದಿದೆ. ಹರಿಯಾಣದ ಸಿರ್ಸಾ, ಫತೇಹಾಬಾದ್, ಕುರುಕ್ಷೇತ್ರ, ಕೈತಾಲ್ ಮತ್ತು ಹಿಸಾರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಡೇರಾ ಸೌದಾ ಪಂಥವು ಸಾಕಷ್ಟು ಸಂಖ್ಯೆಯ ಅನುಯಾಯಿಗಳನ್ನು ಹೊಂದಿದೆ.
Advertisement