

ನವದೆಹಲಿ: ಅಮೆರಿಕ ಹಾಗೂ ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಹತರಾದ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆ ಬರೋಬ್ಬರಿ 100 ದಿನದ ಬಳಿಕ ನಡೆಯುತ್ತಿದ್ದು, ಈ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಅಧ್ಯಕ್ಷರಿಗೆ ಇರಾನ್ ಆಹ್ವಾನ ನೀಡಿದೆ.
ಮುಂದಿನ ವಾರ ನಡೆಯಲಿರುವ ಖಮೇನಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕರಾದ ಸಲ್ಮಾನ್ ಖುರ್ಷಿದ್, ಪವನ್ ಖೇರಾ ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಆಹ್ವಾನಿಸಿದೆ.
ಜುಲೈ 5 ರಿಂದ 9 ರವರೆಗೆ ಅಂತ್ಯಕ್ರಿಯೆಯ ವಿಧಿವಿಧಾನಗಳು ನಡೆಯಲಿವೆ.
"ಕಾಂಗ್ರೆಸ್ ಅಧ್ಯಕ್ಷರು, ಇರಾನ್ಗೆ ಪಕ್ಷದ ನಿಯೋಗವನ್ನು ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿದ್ದಾರೆ" ಎಂದು ಕಾಂಗ್ರೆಸ್ನ ವಿದೇಶಾಂಗ ವ್ಯವಹಾರಗಳ ವಿಭಾಗದ ಮುಖ್ಯಸ್ಥರಾಗಿರುವ ಖುರ್ಷಿದ್ ಅವರು ಹೇಳಿದ್ದಾರೆ.
ಕಳೆದ ಮೂರು ದಶಕಗಳಿಂದ ಇರಾನ್ ಅನ್ನು ಆಳಿದ ಖಮೇನಿ, ಫೆಬ್ರವರಿ 28 ರಂದು ಟೆಹ್ರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲಿ ನಡೆಸಿದ ವೈಮಾನಿಕ ದಾಳಿಯ ಮೊದಲ ದಿನ ಹತ್ಯೆಯಾಗಿದ್ದರು.
ಕಳೆದ ಮಾರ್ಚ್ ತಿಂಗಳಲ್ಲಿ ನಡೆಯಬೇಕಿದ್ದ ಖಮೇನಿ ಅಂತ್ಯಕ್ರಿಯೆಯನ್ನು ಸಂಘರ್ಷದಿಂದಾಗಿ ಮುಂದೂಡಲಾಗಿತ್ತು. ಇದೀಗ ಜುಲೈ 5ರಿಂದ ಜುಲೈ 9ರ ವರೆಗೆ ಅಂತ್ಯಕ್ರಿಯೆಯ ವಿಧಿವಿಧಾನಗಳು ನಡೆಯಲಿದ್ದು, ಇರಾನ್ ಸೇರಿದಂತೆ ವಿವಿಧ ನಗರಗಳಲ್ಲಿ ಬೃಹತ್ ಮೆರವಣಿಗೆ ನಡೆಯಲಿದೆ. ಈ ವೇಳೆ 1 ಕೋಟಿಗೂ ಅಧಿಕ ಜನ ಭಾಗಿಯಾಗುವ ನಿರೀಕ್ಷೆಯಿದೆ.