

ಮುಂಬೈ: ಮಹಾರಾಷ್ಟ್ರದಲ್ಲಿ ಮುಂಗಾರು ಅಬ್ಬರ ಮುಂದುವರೆದಿದ್ದು ವಾಣಿಜ್ಯ ನಗರಿ ಮುಂಬೈನಲ್ಲಿ ಭಾರಿ ಮಳೆಗೆ ನಾನಾ ಅವಾಂತರಗಳು ಸೃಷ್ಟಿಯಾಗಿವೆ.
ಭಾರೀ ಮಳೆಯ ನಡುವೆಯೇ ಮುಂಬೈನ ಕುರ್ಲಾ ಪ್ರದೇಶದಲ್ಲಿ ಅಂಗಡಿಯೊಂದರ ಮೇಲೆ ಮರ ಉರುಳಿ ಬಿದ್ದ ಪರಿಣಾಮ 63 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಕಳೆದ ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಮುಂಗಾರಿಗೆ ಸಂಬಂಧಿಸಿದಂತೆ ನಗರದಲ್ಲಿ ಸಂಭವಿಸಿರುವ ಮೂರನೇ ಸಾವಿನ ಘಟನೆ ಇದಾಗಿದೆ ಎಂದು ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಅಧಿಕಾರಿಗಳು ತಿಳಿಸಿದ್ದಾರೆ.
ಭಾನುವಾರ ಮಧ್ಯಾಹ್ನ ಸುಮಾರು 12.40 ಗಂಟೆಗೆ, ಕುರ್ಲಾ ಪಶ್ಚಿಮದ ನೌಪಾಡಾ ಪ್ರದೇಶದಲ್ಲಿರುವ ಹಿಂದಿ ಬಿಎಂಸಿ ಶಾಲೆ ಸಮೀಪ ಈ ದುರ್ಘಟನೆ ಸಂಭವಿಸಿದೆ.
ಮೃತರನ್ನು ಯೂನಸ್ ಕುಂದಾವಾಲಾ (63) ಎಂದು ಗುರುತಿಸಲಾಗಿದೆ. ಅವಶೇಷಗಳಡಿ ಸಿಲುಕಿದ್ದ ಅವರನ್ನು ರಕ್ಷಿಸಿ ಫೌಜಿಯಾ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರು ಅವರನ್ನು ಆಸ್ಪತ್ರೆಗೆ ತಲುಪುವ ಮೊದಲೇ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ, ಪೊಲೀಸರು, ಬೆಸ್ಟ್ (BEST) ಸಿಬ್ಬಂದಿ ಹಾಗೂ ಬಿಎಂಸಿ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಮತ್ತು ಅವಶೇಷ ತೆರವು ಕಾರ್ಯ ನಡೆಸಿದರು.
ಕೆಲವೇ ದಿನಗಳ ಹಿಂದೆ, ಜೂನ್ 30ರಂದು ಮುಂಬೈನ ಚೆಂಬೂರ್ ಪ್ರದೇಶದಲ್ಲಿ ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದ ಪರಿಣಾಮ 11 ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು.
ನಿರಂತರ ಭಾರೀ ಮಳೆಯ ನಡುವೆ ಕಳೆದ ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಮುಂಬೈನಲ್ಲಿ ಮರ ಉರುಳಿ ಬಿದ್ದ ಪರಿಣಾಮ ಸಂಭವಿಸಿರುವ ಮೂರನೇ ಮಾರಣಾಂತಿಕ ಘಟನೆ ಇದಾಗಿದೆ.