

ನವದೆಹಲಿ: ತಮಿಳುನಾಡು ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಲ್ಲಿ ದೊಡ್ಡ ಗೆಲುವು ಸಿಕ್ಕಿದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧಿಸುವಂತೆ ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ನೀಡಿದ್ದ ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.
ಈ ಸಂಬಂಧ ಮೇ 27 ರಂದು ಹೈಕೋರ್ಟ್ ನೀಡಿದ್ದ ನಿರ್ದೇಶನಗಳನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ನ್ಯಾಯ ಪೀಠವು ಮಧ್ಯಂತರ ಆದೇಶ ನೀಡಿದೆ.
ಹೈಕೋರ್ಟ್ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯ ವ್ಯಾಪ್ತಿ ಮೀರಿ, ರಾಜ್ಯಾದ್ಯಂತ ಜಾನುವಾರುಗಳ ಹತ್ಯೆಯನ್ನು ನಿಷೇಧಿಸುವ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ ಗೋಹತ್ಯೆ ನಿಷೇಧ ತಡೆಗೆ ನಿರ್ದೇಶಿಸಿದೆ ಎಂದು ವಾದಿಸಿ, ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.
ತಮಿಳುನಾಡಿನಲ್ಲಿ ಪ್ರಾಣಿವಧೆ ನಿಯಂತ್ರಿಸುವ ಕಾನೂನು ಚೌಕಟ್ಟನ್ನು ಮೀರಿ ಕಸಾಯಿಖಾನೆಗಳಲ್ಲೂ ಗೋಹತ್ಯೆಯನ್ನು ಪರಿಣಾಮಕಾರಿಯಾಗಿ ಹೈಕೋರ್ಟ್ ನಿಷೇಧಿಸಿದೆ ಎಂದು ಅರ್ಜಿಯಲ್ಲಿ ಹೇಳಲಾಗಿತ್ತು.
ತಮಿಳುನಾಡು ಪ್ರಾಣಿ ಸಂರಕ್ಷಣಾ ಕಾಯ್ದೆ, 1958, ತಮಿಳುನಾಡು ನಗರ ಸ್ಥಳೀಯ ಸಂಸ್ಥೆಗಳ ಕಾಯ್ದೆ, 1998, ತಮಿಳುನಾಡು ನಗರ ಸ್ಥಳೀಯ ಸಂಸ್ಥೆಗಳ ನಿಯಮಗಳು, 2023 ಮತ್ತು ಆಹಾರ ಸುರಕ್ಷತಾ ನಿಯಮಗಳು ಪ್ರಾಣಿಗಳ ವಧೆಯನ್ನು ನಿಯಂತ್ರಿಸುತ್ತವೆ.
ಆದರೆ ಸಂಪೂರ್ಣ ನಿಷೇಧವನ್ನು ವಿಧಿಸುವುದಿಲ್ಲ ಎಂದು ವಾದಿಸಿದ ರಾಜ್ಯ ಸರ್ಕಾರ, ಹೈಕೋರ್ಟ್ನ ನಿರ್ದೇಶನಕ್ಕೆ ಮಧ್ಯಂತರ ತಡೆಯಾಜ್ಞೆ ನೀಡುವಂತೆ ಕೋರಿತ್ತು.