ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣ; ತನಿಖೆಯ ಸ್ಥಿತಿಗತಿ ವರದಿ ಸಲ್ಲಿಸುವಂತೆ SITಗೆ 'ಸುಪ್ರೀಂ' ನಿರ್ದೇಶನ

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್‌ಮಲ್ಯ ಬಾಗ್ಚಿ ಮತ್ತು ವಿ ಮೋಹನ ಅವರಿದ್ದ ಪೀಠವು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ನೋಟಿಸ್ ಜಾರಿ ಮಾಡಿದೆ.
Ayodhya Ram Mandir
ಅಯೋಧ್ಯೆಯ ರಾಮ ಮಂದಿರPhoto | ANI
Updated on

ನವದೆಹಲಿ: ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗದ ಆರೋಪಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ನಡೆದಿರುವ ತನಿಖೆಯ ಸ್ಥಿತಿಗತಿ ವರದಿ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸುಪ್ರೀಂ ಕೋರ್ಟ್ ಸೋಮವಾರ ಸೂಚಿಸಿದೆ.

ಅಯೋಧ್ಯೆ ರಾಮಮಂದಿರ ದೇಣಿಗೆ ದುರುಪಯೋಗ ಆರೋಪಗಳ ಕುರಿತು ಸಿಬಿಐ ತನಿಖೆ ಕೋರಿ ಮತ್ತು ನ್ಯಾಯಯುತ ಮತ್ತು ಕಾಲಮಿತಿಯಲ್ಲಿ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್‌ಮಲ್ಯ ಬಾಗ್ಚಿ ಮತ್ತು ವಿ ಮೋಹನ ಅವರಿದ್ದ ಪೀಠವು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ನೋಟಿಸ್ ಜಾರಿ ಮಾಡಿದೆ.

ಮೂವರು ಅರ್ಜಿದಾರರಲ್ಲಿ ಒಬ್ಬರಾದ ನರೇಂದ್ರ ಕುಮಾರ್ ಗೋಸ್ವಾಮಿ, ಈ ವಿಷಯದ ಬಗ್ಗೆ ಸಿಬಿಐ ತನಿಖೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ರಾಮ ಮಂದಿರದ ಹಣಕಾಸಿನ ವ್ಯವಹಾರಗಳನ್ನು ನಿರ್ವಹಿಸುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಹಣಕಾಸಿನ ಲೆಕ್ಕಪರಿಶೋಧನೆಯನ್ನು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ನೇತೃತ್ವದಲ್ಲಿ ನಡೆಸಬೇಕೆಂದು ಅವರು ಕೋರಿದ್ದಾರೆ.

ಇದೇ ರೀತಿಯ ಕ್ರಮಗಳನ್ನು ಕೋರಿ ಅಜಯ್ ಕುಮಾರ್ ರೈ ಮತ್ತು ದಿನೇಶ್ ಕುಮಾರ್ ಯಾದವ್ ಎನ್ನುವವರು ಎರಡನೇ ಅರ್ಜಿಯನ್ನು ಸಲ್ಲಿಸಿದ್ದಾರೆ.

ಆರ್‌ಜೆಡಿ ಸಂಸದ ಸುಧಾಕರ್ ಸಿಂಗ್ ಅವರು ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ಕೋರುವ ಮೂರನೇ ಅರ್ಜಿಯನ್ನು ಸಲ್ಲಿಸಿದ್ದಾರೆ. ದೇವಾಲಯದ ಟ್ರಸ್ಟ್‌ನ ಹಣದ ವಹಿವಾಟುಗಳನ್ನು ವಿವರವಾಗಿ ಪರಿಶೀಲಿಸಲು ಮತ್ತು ಯಾವುದೇ ಸಂಭವನೀಯ ಅಕ್ರಮಗಳನ್ನು ಗುರುತಿಸಲು ಅದರ ಎಲ್ಲ ಹಣಕಾಸು ದಾಖಲೆಗಳ ವಿಧಿವಿಜ್ಞಾನ ಲೆಕ್ಕಪರಿಶೋಧನೆಯನ್ನು ಸಹ ಅವರು ಕೋರಿದ್ದಾರೆ.

Ayodhya Ram Mandir
ರಾಮ ಮಂದಿರ ದೇಣಿಗೆ ಅಕ್ರಮ ಆರೋಪ: SIT ತನಿಖೆಯಿಂದಲೇ ಸತ್ಯ ಹೊರಬರಲಿದೆ- RSS

ಈ ಹಿಂದೆ, ನ್ಯಾಯಮೂರ್ತಿ ಬಿವಿ ನಾಗರತ್ನ ನೇತೃತ್ವದ ಸುಪ್ರೀಂ ಕೋರ್ಟ್‌ನ ಭಾಗಶಃ ಕೆಲಸದ ದಿನದ ಪೀಠವು ಪ್ರಕರಣವನ್ನು ತಕ್ಷಣ ವಿಚಾರಣೆಗೆ ಒಳಪಡಿಸಲಿಲ್ಲ. ಬದಲಾಗಿ, ಅರ್ಜಿದಾರರಲ್ಲಿ ಒಬ್ಬರಿಗೆ ತುರ್ತು ವಿಚಾರಣೆಯನ್ನು ಬಯಸಿದರೆ ನಂತರದ ದಿನಾಂಕದಂದು ಪ್ರಕರಣವನ್ನು ಔಪಚಾರಿಕವಾಗಿ ವಿನಂತಿಸುವಂತೆ ಪೀಠವು ತಿಳಿಸಿದೆ.

ದೇವಾಲಯದ ಟ್ರಸ್ಟ್‌ನ ವ್ಯವಹಾರಗಳು ಮತ್ತು ಆಡಳಿತಕ್ಕೆ ಸಂಬಂಧಿಸಿದ ಆರ್ಥಿಕ ಅಕ್ರಮಗಳು ಮತ್ತು ಇತರ ಅಕ್ರಮಗಳ ಬಗ್ಗೆ ಸಿಬಿಐ ನೇತೃತ್ವದ ಬಹು-ಶಿಸ್ತಿನ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸಬೇಕೆಂದು ಪ್ರಾಕ್ಟೀಸಿಂಗ್ ವಕೀಲರಾದ ಅಜಯ್ ಕುಮಾರ್ ರೈ ಮತ್ತು ದಿನೇಶ್ ಕುಮಾರ್ ಯಾದವ್ ಸಲ್ಲಿಸಿದ ಅರ್ಜಿಯಲ್ಲಿ ಹೇಳಲಾಗಿದೆ.

ಉತ್ತರ ಪ್ರದೇಶ ಸರ್ಕಾರ ರಚಿಸಿದ ಎಸ್‌ಐಟಿ, ಎಫ್‌ಐಆರ್ ಅಥವಾ ಯಾವುದೇ ನಿಯಮಿತ ಕ್ರಿಮಿನಲ್ ಪ್ರಕರಣವನ್ನು ದಾಖಲಿಸದೆಯೇ ಈ ವಿಷಯದ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದೆ ಎಂದು ಅದು ಹೇಳಿದೆ.

ರಾಮ ಮಂದಿರಕ್ಕೆ ಭಕ್ತರು ಕೊಟ್ಟ ಕಾಣಿಕೆ, ಚಿನ್ನದ ಆಭರಣಗಳು, ಬೆಳ್ಳಿ ಇಟ್ಟಿಗೆ ಕಳುವಾಗಿವೆ ಎಂಬ ಆರೋಪಗಳು ಕೇಳಿಬಂದ ನಂತರ, ಜೂನ್ 13 ರಂದು ದೇವಾಲಯ ಟ್ರಸ್ಟ್‌ನ ಕೋರಿಕೆಯ ಮೇರೆಗೆ ಉತ್ತರ ಪ್ರದೇಶ ಸರ್ಕಾರವು ಎಸ್‌ಐಟಿ ರಚಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com