

ಚಂಡೀಘಡ: ಪಂಜಾಬ್ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಮನೀಶ್ ತಿವಾರಿ ಅವರೊಂದಿಗೆ ನಡೆಸಿದ ಮಾತುಕತೆಯು ರಾಜಕೀಯ ವಲಯದಲ್ಲಿ ಅನೇಕ ಉಹಾಪೋಹಗಳಿಗೆ ಕಾರಣವಾಗಿದೆ.
ಚಂಡೀಗಢದಲ್ಲಿ ನಡೆದ Rallyಯಲ್ಲಿ ಪ್ರಧಾನಿ ಮೋದಿ ಅವರು ತಿವಾರಿ ಅವರಿಗೆ ಹ್ಯಾಂಡ್ ಶೇಕ್ ಮಾಡಿದ್ದು, ಸ್ವಲ್ಪ ಹೊತ್ತು ಮಾತನಾಡಿದ್ದಾರೆ. ಪಂಜಾಬ್ ಕಾಂಗ್ರೆಸ್ನಲ್ಲಿ ಚರಣ್ಜಿತ್ ಸಿಂಗ್ ಚನ್ನಿ ಮತ್ತು ಅಮರಿಂದರ್ ಸಿಂಗ್ ರಾಜಾ ವಾರಿಂಗ್ ನಡುವಿನ ಆಂತರಿಕ ತಿಕ್ಕಾಟದ ನಡುವೆ ಈ ಬೆಳವಣಿಗೆ ನಡೆದಿದೆ.
ಚಂಡೀಗಢದ ಸಂಸದರಾಗಿರುವ ತಿವಾರಿ, ಅಧಿಕೃತ ಶಿಷ್ಟಾಚಾರದ ಭಾಗವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆದಾಗ್ಯೂ, ಪ್ರಧಾನಿ ಜೊತೆಗಿನ ಅವರ ಮಾತುಕತೆಯು ಎಲ್ಲರ ಗಮನ ಸೆಳೆದಿದ್ದು, ರಾಜಕೀಯ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಈ ಭೇಟಿಯ ಫೋಟೋ, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿವೆ.
2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ತಮಗೆ ಯಾವುದೇ ಜವಾಬ್ದಾರಿಯನ್ನು ನೀಡದಿರುವುದಕ್ಕೆ ತಿವಾರಿ ಇತ್ತೀಚೆಗಷ್ಟೇ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೇ ಈ ಭೇಟಿಯು ಮಹತ್ವ ಪಡೆದುಕೊಂಡಿದೆ.
ಪ್ರಧಾನಿ ಮೋದಿ ಜೊತೆಗಿನ ಮಾತುಕತೆ ನಂತರ, ಬಿಜೆಪಿ ಕಾಂಗ್ರೆಸ್ ನಾಯಕನನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿರಬಹುದು ಎಂಬ ಊಹಾಪೋಹಗಳು ಹೆಚ್ಚಾಗಿವೆ. ಪ್ರಧಾನಿ ಮೋದಿ ಅವರು ತಿವಾರಿ ಅವರೊಂದಿಗೆ ಮಾತನಾಡಿದಾಗ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಕೂಡ ಅಲ್ಲಿ ಉಪಸ್ಥಿತರಿದ್ದರು.
2027ರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಂಜಾಬ್ ಕಾಂಗ್ರೆಸ್ ಘಟಕದಲ್ಲಿ ಹೆಚ್ಚುತ್ತಿರುವ ಆಂತರಿಕ ಕಿತ್ತಾಟ ಶಮನಗೊಳಿಸುವ ನಿಟ್ಟಿನಲ್ಲಿ ಗುರುವಾರ ನವದೆಹಲಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಹಿರಿಯ ನಾಯಕರ ಪ್ರಮುಖ ಸಭೆ ನಡೆಯಿತು.
ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರು ರಾಜ್ಯ ಘಟಕವನ್ನು ಒಟ್ಟಿಗೆ ಕೊಂಡೊಯ್ಯಲು ವಿಫಲರಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ, ಪಕ್ಷದ ನಾಯಕತ್ವಕ್ಕೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.