

ನವದೆಹಲಿ: ಸೋನಮ್ ವಾಂಗ್ಚುಕ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಶನಿವಾರ ಮುಂಜಾನೆ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಿದ ಬೆನ್ನಲ್ಲೇ, ಹೋರಾಟವನ್ನು ಮುಂದುವರಿಸುವುದಾಗಿ ಘೋಷಿಸಿರುವ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅನಿರ್ದಿಷ್ಟಾವಧಿಯ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಜಂತರ್ ಮಂತರ್ನಿಂದ ಹೊರಬಂದ ಇತ್ತೀಚಿನ ದೃಶ್ಯಗಳಲ್ಲಿ ಪ್ರತಿಭಟನಾಕಾರರು ವಾಂಗ್ಚುಕ್ ಅವರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸುತ್ತಿರುವುದು ಕಂಡುಬಂದಿದ್ದು, ಅಭಿಜೀತ್ ದೀಪ್ಕೆ ಅಧಿಕೃತವಾಗಿ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಘೋಷಣೆ ಮಾಡಿದ್ದಾರೆ. ಇದರಿಂದ ಪ್ರತಿಭಟನೆ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.
"ಅಭಿಜೀತ್ ದಿಪ್ಕೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಜುಲೈ 20 ರಂದು ನಡೆಯಲಿರುವ 'ಚಲೋ ಸಂಸದ್' ಮೆರವಣಿಗೆ ಯೋಜಿಸಿದಂತೆ ನಡೆಯಲಿದೆ" ಎಂದು ಸಿಜೆಪಿ X ನಲ್ಲಿ ಪೋಸ್ಟ್ನಲ್ಲಿ ತಿಳಿಸಿದೆ. "ನಾನು ಇದೀಗ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸುತ್ತಿದ್ದೇನೆ" ಎಂದು ತಮ್ಮ ಎಕ್ಸ್ ಖಾತೆ ಪೋಸ್ಟ್ ನಲ್ಲಿ ಅಭಿಜೀತ್ ತಿಳಿಸಿದ್ದಾರೆ.
ನಾನು ಇಂದಿನಿಂದ ನನ್ನ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸುತ್ತಿದ್ದೇನೆ. ಯಾರೂ ಹಿಂದೆ ಸರಿಯಬೇಡಿ ಎಂದು ನಾನು ಎಲ್ಲರಿಗೂ ಮನವಿ ಮಾಡುತ್ತೇನೆ. ಈ ಚಳುವಳಿ ದೊಡ್ಡದಾಗಿ ಬೆಳೆಯುತ್ತದೆ. ಅವರು ಗಂಭೀರ ತಪ್ಪು ಮಾಡಿದ್ದಾರೆ. ಎಲ್ಲರೂ ಜಂತರ್ ಮಂತರ್ಗೆ ಬರಬೇಕೆಂದು ನಾನು ಒತ್ತಾಯಿಸುತ್ತೇನೆ; ನಮ್ಮ ಚಳುವಳಿ ಇಲ್ಲಿಂದ ಮುಂದುವರಿಯುತ್ತದೆ ಮತ್ತು ಜುಲೈ 20 ರಂದು ನಿಗದಿಯಾಗಿರುವ ನಮ್ಮ ಮೆರವಣಿಗೆಯೊಂದಿಗೆ ನಾವು ಮುಂದುವರಿಯುತ್ತೇವೆ" ಎಂದು ದೀಪ್ಕೆ ಹೇಳಿದರು.
ಇದಕ್ಕೂ ಮೊದಲು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ‘ಕಾಕ್ರೋಚ್ ಜನತಾ ಪಾರ್ಟಿʼ ಕಾರ್ಯಕರ್ತರ ಪ್ರತಿಭಟನೆ ಹಾಗೂ ಘೋಷಣೆಗಳ ನಡುವೆಯೇ ಶನಿವಾರ ಮುಂಜಾನೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ದೆಹಲಿ ಪೊಲೀಸರು, 20 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸೋನಂ ವಾಂಗ್ಚುಕ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.
ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ, ದೆಹಲಿ ಹೈಕೋರ್ಟ್ ಆದೇಶ ಹಾಗೂ ತಜ್ಞ ವೈದ್ಯರ ಸಲಹೆಯಂತೆ ಈ ಕ್ರಮ ಕೈಗೊಳ್ಳಲಾಗಿದೆ. ಅಗತ್ಯ ವೈದ್ಯಕೀಯ ಆರೈಕೆಗಾಗಿ ಸೋನಂ ವಾಂಗ್ಚುಕ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ದೆಹಲಿ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.