

ನವದೆಹಲಿ: ದೆಹಲಿಯ ಜಂತರ್ ಮಂತರ್ ಮೈದಾನದಲ್ಲಿ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆ ವಿಚಾರ ಇಂದು ಸಂಸತ್ ನಲ್ಲೂ ಮಾರ್ಧನಿಸಿದ್ದು, ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷದ ಸದಸ್ಯರು ಈ ಕುರಿತು ಚರ್ಚೆಗೆ ಒತ್ತಾಯಿಸಿದರು.
ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಇಂದು ಸಂಸತ್ ನಲ್ಲೂ ಭಾರಿ ಸದ್ದು ಮಾಡಿದ್ದು, ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವೇ ಭಾರೀ ಗದ್ದಲಕ್ಕೆ ಸಾಕ್ಷಿಯಾಯಿತು.
ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆಗೆ ಆಗ್ರಹಿಸಿದ ಪರಿಣಾಮ ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪಗಳು ಪದೇ ಪದೇ ಅಡಚಣೆಗೆ ಒಳಗಾಗಿ, ಅಂತಿಮವಾಗಿ ಮಂಗಳವಾರದವರೆಗೆ ಮುಂದೂಡಲಾಯಿತು.
ಮೊದಲ ದಿನವೇ ಗದ್ದಲ
ಮುಂಗಾರು ಅಧಿವೇಶನದ ಮೊದಲ ದಿನವೇ ಪ್ರತಿಪಕ್ಷ ಸದಸ್ಯರು ಪರೀಕ್ಷಾ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ, ಶಿಕ್ಷಣ ವ್ಯವಸ್ಥೆಯಲ್ಲಿನ ಲೋಪಗಳು ಹಾಗೂ ಇತರ ಸಾರ್ವಜನಿಕ ಮಹತ್ವದ ವಿಷಯಗಳ ಕುರಿತು ತುರ್ತು ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯಿಸಿದರು. ಆದರೆ ಈ ಕುರಿತು ಸರ್ಕಾರದಿಂದ ಸ್ಪಷ್ಟ ಭರವಸೆ ಸಿಗದ ಹಿನ್ನೆಲೆಯಲ್ಲಿ ಪ್ರತಿಪಕ್ಷ ಸದಸ್ಯರು ಸದನದ ಮಧ್ಯಭಾಗಕ್ಕೆ ಧಾವಿಸಿ ಘೋಷಣೆಗಳನ್ನು ಕೂಗಿದರು.
ಲೋಕಸಭೆಯಲ್ಲಿ ಗದ್ದಲ ಹೆಚ್ಚಾದ ಕಾರಣ ಸಭಾಧ್ಯಕ್ಷರು ಕಲಾಪವನ್ನು ಮೊದಲು ಕೆಲಕಾಲ ಮುಂದೂಡಿದರು. ಬಳಿಕ ಸದನ ಮತ್ತೆ ಸಭೆ ಸೇರಿದರೂ ಪರಿಸ್ಥಿತಿ ಸುಧಾರಿಸದ ಕಾರಣ ದಿನಪೂರ್ತಿ ಕಲಾಪವನ್ನು ಸ್ಥಗಿತಗೊಳಿಸಿ ಮಂಗಳವಾರದವರೆಗೆ ಮುಂದೂಡಲಾಯಿತು.
ಇದೇ ಪರಿಸ್ಥಿತಿ ರಾಜ್ಯಸಭೆಯಲ್ಲೂ ಕಂಡುಬಂದಿತು. ಪ್ರತಿಪಕ್ಷ ಸದಸ್ಯರು ವಿವಿಧ ವಿಷಯಗಳ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ರಾಜ್ಯಸಭೆಯ ಕಲಾಪವೂ ಹಲವು ಬಾರಿ ಮುಂದೂಡಿಕೆಯಾಗಿ, ಅಂತಿಮವಾಗಿ ಮಂಗಳವಾರಕ್ಕೆ ಮುಂದೂಡಲಾಯಿತು.
ಪ್ರತಿಪಕ್ಷಗಳು ಪರೀಕ್ಷಾ ಅಕ್ರಮಗಳ ಕುರಿತು ಸಮಗ್ರ ಚರ್ಚೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತಿದ್ದರೆ, ಸರ್ಕಾರ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ಮುಂಗಾರು ಅಧಿವೇಶನದ ಮೊದಲ ದಿನವೇ ಸಂಸತ್ತು ತೀವ್ರ ರಾಜಕೀಯ ವಾಗ್ವಾದಕ್ಕೆ ಸಾಕ್ಷಿಯಾಗಿದ್ದು, ಮುಂದಿನ ದಿನಗಳಲ್ಲಿ ಈ ವಿಷಯ ಮತ್ತಷ್ಟು ಚರ್ಚೆಗೆ ಗ್ರಾಸವಾಗುವ ಸಾಧ್ಯತೆ ಇದೆ.
ಅಭಿಜೀತ್ ದೀಪ್ಕೆ ಬಂಧಿಸಿಲ್ಲ ಎಂದ ದೆಹಲಿ ಪೊಲೀಸ್
ಇತ್ತ ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ವಿರುದ್ಧ ಜಂತರ್ ಮಂತರ್ನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ವೇಳೆ ಅಭಿಜೀತ್ ದೀಪ್ಕೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಸಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಸಿತ್ತು. ಈ ಆರೋಪಗಳು ವ್ಯಾಪಕ ಚರ್ಚೆಗೆ ಕಾರಣವಾಗಿದ್ದವು.
ಆದರೆ ಈ ಕುರಿತು ಸ್ಪಷ್ಟನೆ ನೀಡಿರುವ ದೆಹಲಿ ಪೊಲೀಸರು, ಅಭಿಜೀತ್ ದೀಪ್ಕೆ ಅವರನ್ನು ಬಂಧಿಸಿಲ್ಲ ಹಾಗೂ ಅವರ ವಿರುದ್ಧ ಯಾವುದೇ ಬಂಧನ ಕ್ರಮ ಕೈಗೊಳ್ಳಲಾಗಿಲ್ಲ ಎಂದು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಬಂಧನದ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ಸಾರ್ವಜನಿಕರು ಇಂತಹ ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.
ಇದೇ ವೇಳೆ, ಜಂತರ್ ಮಂತರ್ನಿಂದ ಸಂಸತ್ ಭವನದತ್ತ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದರು. ಹೊಸ ದೆಹಲಿ ಜಿಲ್ಲೆಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 163 ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದ ಹಿನ್ನೆಲೆಯಲ್ಲಿ ಪೊಲೀಸರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಂಡರು. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಸೌಮ್ಯ ಲಾಠಿ ಚಾರ್ಜ್ ನಡೆಸಿದ್ದು, ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.