

ನವದೆಹಲಿ: ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುತ್ತಿದ್ದು, ರಾಷ್ಟ್ರ ರಾಜಧಾನಿಯಲ್ಲಿ ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರದಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ರಾಷ್ಟ್ರರಾಜಧಾನಿಯಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಿದೆ.
ನೀಟ್ (NEET) ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ, ವಿದ್ಯಾರ್ಥಿಗಳ ಆತ್ಮಹತ್ಯೆ ಮತ್ತು ದೇಶದ ಪರೀಕ್ಷಾ ವ್ಯವಸ್ಥೆಗೆ ಸಂಬಂಧಿಸಿದ ತೀವ್ರ ಕಳವಳಗಳ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ, ಮುಂಗಾರು ಅಧಿವೇಶನದ ಮೊದಲ ದಿನವಾದ ಸೋಮವಾರದಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ಸಂಸತ್ ಚಲೋ ಮೆರವಣಿಗೆ ಆರಂಭಿಸಿತು.
ಅಧಿಕಾರಿಗಳು ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಕಲ್ಪಿಸಿದ್ದರೂ, ನವದೆಹಲಿಯ ಜಂತರ್ ಮಂತರ್ನಲ್ಲಿನ ಪ್ರತಿಭಟನಾ ಸ್ಥಳದಲ್ಲಿ ಶಬಾನಾ ಅಜ್ಮಿ ಸೇರಿದಂತೆ ಅನೇಕ ರಾಜಕೀಯ ನಾಯಕರು, ನಟರು ಮತ್ತು ಸಾಮಾನ್ಯ ಜನರು ಜಮಾಯಿಸಿದ್ದರು.
ಸಿಜೆಪಿ (CJP) ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಯ ಸ್ಥಳದಲ್ಲಿ ಆಜಾದ್ ಸಮಾಜ ಪಾರ್ಟಿ-ಕಾನ್ಶಿರಮ್ನ ಅಧ್ಯಕ್ಷ ಹಾಗೂ ಸಂಸದ ಚಂದ್ರಶೇಖರ್ ಆಜಾದ್ ಮತ್ತು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಮತ್ತಿತರರು ಸೇರಿದ್ದರು.
ಈ ವೇಳೆ ಪ್ರತಿಭಟನಾಕಾರರು ಮತ್ತು ಆರ್ಪಿಎಫ್ (RPF) ಸಿಬ್ಬಂದಿ ನಡುವೆ ಸಂಘರ್ಷ ನಡೆದಿದ್ದು, ಗುಂಪನ್ನು ನಿಯಂತ್ರಿಸಲು ಆರ್ಪಿಎಫ್ ಸಿಬ್ಬಂದಿ ಮತ್ತು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.