

ನವದೆಹಲಿ: ಸಂಸತ್ ಚಲೋ ನಡೆಸುತ್ತಿದ್ದ 'ಕಾಕ್ರೋಚ್ ಜನತಾ ಪಾರ್ಟಿ' ಪ್ರತಿಭಟನಾಕಾರರ ಮೇಲಿನ ಬಲ ಪ್ರಯೋಗದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮೇಲೆ ಮತ್ತಷ್ಟು ಹೇರುವ ಉದ್ದೇಶದಿಂದ ಕಾಂಗ್ರೆಸ್ ಮಂಗಳವಾರ ಪ್ರಧಾನಿ ನಿವಾಸದ ಹೊರಗಡೆ ತೀವ್ರ ಪ್ರತಿಭಟನೆ ನಡೆಸಿತು.
ಪ್ರತಿಭಟನೆ ಹಿಂಪಡೆಯಲು ನಿರಾಕರಿಸಿದ ಕಾಂಗ್ರೆಸ್ ನಾಯಕರಾದ ರಾಹುಲ್ , ಪ್ರಿಯಾಂಕಾ ಗಾಂಧಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಹುಲ್ ಗಾಂಧಿ ಪ್ರಧಾನಿ ನಿವಾಸದ ಹೊರಗೆ ರಾತ್ರಿಯಿಡೀ ಪ್ರತಿಭಟನೆ ಮುಂದುವರೆಸಲು ನಿರ್ಧರಿಸಿದ್ದಾರೆ ಎನ್ನಲಾಗಿತ್ತು. ಆದರೆ ಸಂಜೆ 6.40ರ ಸುಮಾರಿಗೆ ಅಲ್ಲಿಗೆ ಬಂದ ಪೊಲೀಸರು ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆಯುವ ಮೂಲಕ ಪ್ರತಿಭಟನಾ ಸ್ಥಳವನ್ನು ತೆರವುಗೊಳಿಸಿದರು. ಈ ವೇಳೆ ರಸ್ತೆಯಲ್ಲೇ ಕುಳಿತ ರಾಹುಲ್ ಗಾಂಧಿ, ಇಲ್ಲಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದರು.
ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವಿನ ವಾಗ್ವಾದದಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.ಆದರೆ ರಾಹುಲ್ ಗಾಂಧಿ ಅವರನ್ನು ಸುತ್ತುವರೆದ 10 ಮಂದಿ ಪೊಲೀಸ್ ಸಿಬ್ಬಂದಿ, ಅವರನ್ನು ವಶಕ್ಕೆ ಪಡೆದು ಅಲ್ಲಿಂದ ಸ್ಥಳಾಂತರಿಸಿ ಬಸ್ನಲ್ಲಿ ಕರೆದೊಯ್ದರು.
ಇದಕ್ಕೂ ಮುನ್ನಾ ಮಾತನಾಡಿದ ರಾಹುಲ್ ಗಾಂಧಿ ಪ್ರಧಾನಿಯವರ ನಿವಾಸದ ಹೊರಗೆ ತಮ್ಮೊಂದಿಗೆ ಸೇರಿಕೊಳ್ಳುವಂತೆ ಜನರಿಗೆ ಕರೆ ನೀಡಿದರು.
ವಿದ್ಯಾರ್ಥಿಗಳ ಮೇಲಿನ ದಾಳಿಯು ಪ್ರತಿಯೊಂದು ಭಾರತೀಯ ಕುಟುಂಬದ ಮೇಲಿನ ದಾಳಿಯಾಗಿದೆ. ಯಾವುದೇ ಉತ್ತರ ನೀಡದೆ ಅಥವಾ ಯಾವುದೇ ಪರಿಣಾಮಗಳನ್ನು ಎದುರಿಸದೆ ತಾವು ಪಾರಾಗಬಹುದು ಎಂದು ಪ್ರಧಾನಿ ಮೋದಿ ಭಾವಿಸಿದ್ದಾರೆ. ಆದರೆ ಅದು ಸಾಧ್ಯವಿಲ್ಲ; ಈ ಬಾರಿ ಖಂಡಿತವಾಗಿಯೂ ಸಾಧ್ಯವಿಲ್ಲ. ನಮ್ಮ ವಿದ್ಯಾರ್ಥಿಗಳಿಗೆ ನ್ಯಾಯ ಸಿಗಬೇಕು ಎಂದು ನಂಬುವ ಪ್ರತಿಯೊಬ್ಬ ದೇಶಭಕ್ತ ಭಾರತೀಯನಿಗೂ ನಾನು ಮನವಿ ಮಾಡುತ್ತೇನೆ - ಪ್ರಧಾನಿಯವರ ನಿವಾಸದ ಮುಂದೆ ನಡೆಯುತ್ತಿರುವ ಧರಣಿಯಲ್ಲಿ ನಮ್ಮೊಂದಿಗೆ ಕೈಜೋಡಿಸಿ. ಭಾರತದ ವಿದ್ಯಾರ್ಥಿಗಳ ಧ್ವನಿಯನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ," ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹೇಳಿಕೊಂಡಿದ್ದರು.
ಕಾಂಗ್ರೆಸ್ ಮತ್ತು ಕೇಂದ್ರ ಸರ್ಕಾರದ ನಡುವಿನ ಈ ಹೈಡ್ರಾಮ ಮಂಗಳವಾರ ಮಧ್ಯಾಹ್ನ ಆರಂಭವಾಯಿತು. ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್, ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಖರ್ಗೆ ನಿವಾಸದಿಂದ ಒಂದು ಕಿಲೋ ಮೀಟರ್ ದೂರದಲ್ಲಿರುವ '7, ಲೋಕ ಕಲ್ಯಾಣ ಮಾರ್ಗ'ದಲ್ಲಿರುವ ಪ್ರಧಾನಿಯವರ ನಿವಾಸದತ್ತ ಮೆರವಣಿಗೆ ನಡೆಸಿದರು. ಇದೊಂದು ಅಭೂತಪೂರ್ವ ಬೆಳವಣಿಗೆಯಾಗಿದ್ದು, ನಂತರ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ರಾಹುಲ್ ಗಾಂಧಿ ಅವರೊಂದಿಗೆ ಮಾತನಾಡಿದರು. ಆದರೆ, ಪ್ರತಿಭಟನೆ ಅಂತ್ಯಗೊಳಿಸಲು ರಾಹುಲ್ ಗಾಂಧಿ ನಿರಾಕರಿಸಿದರು.