'ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಲು ಯಾರಿಗೂ ಅವಕಾಶವಿಲ್ಲ'; NEET ಪ್ರಶ್ನೆಪತ್ರಿಕೆ ಸೋರಿಕೆ ಆರೋಪಿಗಳ ವಿರುದ್ಧ ಕಠಿಣ ಕ್ರಮ: ಪ್ರಧಾನಿ ಮೋದಿ

ಸಭೆಯಲ್ಲಿ ಪ್ರಧಾನಮಂತ್ರಿಗಳು ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರಾಜಕೀಯ ಭೇದ ಮರೆತು ಒಟ್ಟಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
PM modi
ಪ್ರಧಾನಿ ಮೋದಿ
Updated on

ನವದೆಹಲಿ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, ಯುವಕರ ಭವಿಷ್ಯದೊಂದಿಗೆ ಯಾರೂ ಆಟವಾಡಲು ಅವಕಾಶ ನೀಡುವುದಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದ್ದಾರೆ.

ಮಂಗಳವಾರ ನಡೆದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಸಂಸದೀಯ ಪಕ್ಷದ 'ಮಂಗಲ್ ಮಿಲನ್' ಸಭೆಯಲ್ಲಿ ಪ್ರಧಾನಿ ಮೋದಿ ಅವರು ಈ ವಿಷಯ ಪ್ರಸ್ತಾಪಿಸಿದರು.

ಈ ಸಭೆ, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್‌ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ಸಾವಿರಾರು ವಿದ್ಯಾರ್ಥಿಗಳು 'ಸಂಸತ್ ಚಲೋ' ಪ್ರತಿಭಟನೆ ನಡೆಸಿದ ಮರುದಿನವೇ ನಡೆಯಿತು.

ಸಭೆಯಲ್ಲಿ ಪ್ರಧಾನಮಂತ್ರಿಗಳು ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರಾಜಕೀಯ ಭೇದ ಮರೆತು ಒಟ್ಟಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, ಪ್ರಶ್ನೆಪತ್ರಿಕೆ ಸೋರಿಕೆ ಬೆಳಕಿಗೆ ಬಂದ ತಕ್ಷಣವೇ ಸರ್ಕಾರ ಕ್ರಮ ಕೈಗೊಂಡಿದ್ದು, ಪ್ರಕರಣದಲ್ಲಿ 13 ಮಂದಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಪ್ರಧಾನಿ ಸಂಸದರಿಗೆ ತಿಳಿಸಿದರು ಎಂದು ಹೇಳಿದರು.

PM modi
'ಪ್ರಜಾಪ್ರಭುತ್ವದ ತಾಯಿ' ತನ್ನ ಯುವ ಮಕ್ಕಳನ್ನು ನಡೆಸಿಕೊಳ್ಳುವ ರೀತಿ ಇದಲ್ಲ: ಲಾಠಿ ಚಾರ್ಜ್ ಖಂಡಿಸಿ ಹುಟ್ಟುಹಬ್ಬ ಆಚರಿಸದಿರಲು ಖರ್ಗೆ ನಿರ್ಧಾರ

ವಿದ್ಯಾರ್ಥಿಗಳ ಭವಿಷ್ಯಕ್ಕೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳಲು ನೀಟ್ ಮರುಪರೀಕ್ಷೆಗೆ ಆದ್ಯತೆ ನೀಡಲಾಯಿತು. ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿ, ಫಲಿತಾಂಶವನ್ನೂ ಯಾವುದೇ ವಿಳಂಬವಿಲ್ಲದೆ ಪ್ರಕಟಿಸಲಾಯಿತು ಎಂದು ಪ್ರಧಾನಿ ತಿಳಿಸಿದ್ದಾರೆ ಎಂದು ರಿಜಿಜು ಹೇಳಿದರು.

ಇದೇ ರೀತಿಯ ಪ್ರಶ್ನೆಪತ್ರಿಕೆ ಸೋರಿಕೆಗಳು ಮರುಕಳಿಸದಂತೆ ಈಗಾಗಲೇ ಹಲವು ಕಠಿಣ ಕ್ರಮಗಳನ್ನು ಜಾರಿಗೆ ತರಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ಜಾಲದಲ್ಲಿ ಭಾಗಿಯಾಗಿರುವವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಅಲ್ಲದೆ, ಈ ಪ್ರಕರಣದ ತಪ್ಪಿತಸ್ಥರಿಗೆ ದೇಶದ ಅತ್ಯುತ್ತಮ ಕಾನೂನು ತಜ್ಞರ ನೆರವಿನಿಂದ ಅತ್ಯಂತ ಕಠಿಣ ಶಿಕ್ಷೆ ಆಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ಸೂಚಿಸಿದ್ದಾರೆ ಎಂದು ತಿಳಿಸಿದರು.

"ಯುವಕರ ಭವಿಷ್ಯದೊಂದಿಗೆ ಯಾರೂ ಆಟವಾಡದಂತೆ ಬಲವಾದ ಕ್ರಮ ಕೈಗೊಳ್ಳಲಾಗಿದೆ. ಭವಿಷ್ಯದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ನಡೆಯದಂತೆ ತಡೆಯಲು ಎಲ್ಲಾ ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರ ರಾಜಕೀಯ ಪಕ್ಷಭೇದ ಮರೆತು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಇದು ರಾಜಕೀಯ ವಿಷಯವಲ್ಲ, ರಾಷ್ಟ್ರದ ಹಿತಾಸಕ್ತಿಗೆ ಸಂಬಂಧಿಸಿದ ವಿಷಯ" ಎಂದು ಪ್ರಧಾನಿ ಮೋದಿ ಹೇಳಿದ್ದಾರೆ ಎಂದು ವಿವರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com