

ನವದೆಹಲಿ: ನವದೆಹಲಿಯಲ್ಲಿ ನಡೆದ ಕಾಕ್ರೋಚ್ ಜನತಾ ಪಕ್ಷ(ಸಿಜೆಪಿ)ದ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರು ನಡೆಸಿದ ಲಾಠಿ ಚಾರ್ಜ್ ವೇಳೆ ಗಾಯಗೊಂಡಿದ್ದ ಯುವತಿಗೆ ರಾಮ್ ಮನೋಹರ್ ಲೋಹಿಯಾ(ಆರ್ಎಂಎಲ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೆಂಟಿಲೇಟರ್ ಬೆಂಬಲ ನೀಡಲಾಗಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ ಸೋಮವಾರ "ಸಂಸತ್ ಚಲೋ" ಪ್ರತಿಭಟನಾ ಮೆರವಣಿಗೆ ನಡೆಸಿತು.
"ಸಿಜೆಪಿ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರು ನಡೆಸಿದ ಲಾಠಿ ಚಾರ್ಜ್ ವೇಳೆ ಗಾಯಗೊಂಡಿದ್ದ ಯುವತಿ ಆರ್ಎಂಎಲ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ನಲ್ಲಿದ್ದಾರೆ" ಎಂದು ಮೂಲಗಳು ಹೆಚ್ಚಿನ ವಿವರಗಳನ್ನು ನೀಡದೆ ತಿಳಿಸಿವೆ.
ಸೋಮವಾರ ದೆಹಲಿ ಪೊಲೀಸರು ಒಂದು ಹೇಳಿಕೆಯಲ್ಲಿ, ಪ್ರತಿಭಟನೆಯ ಸಮಯದಲ್ಲಿ 118ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಹೇಳಿಕೊಂಡಿದ್ದರು. ಅಲ್ಲದೆ 60 ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ ಎಂದಿದ್ದರು.
ನೀಟ್ (NEET) ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ, ವಿದ್ಯಾರ್ಥಿಗಳ ಆತ್ಮಹತ್ಯೆ ಮತ್ತು ದೇಶದ ಪರೀಕ್ಷಾ ವ್ಯವಸ್ಥೆಗೆ ಸಂಬಂಧಿಸಿದ ತೀವ್ರ ಕಳವಳಗಳ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ, ಮುಂಗಾರು ಅಧಿವೇಶನದ ಮೊದಲ ದಿನವಾದ ಸೋಮವಾರ ಸಿಜೆಪಿ ಸಂಸತ್ ಚಲೋ ಮೆರವಣಿಗೆ ಆರಂಭಿಸಿದೆ.