

ನವದೆಹಲಿ: ಕಳೆದೊಂದು ತಿಂಗಳಿನಿಂದ ನೀಟ್ (NEET) ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇದೇ ಮೊದಲ ಬಾರಿಗೆ ಮಾಜಿ ಬಿಜೆಪಿ ನಾಯಕ ಕೆ. ಅಣ್ಣಾಮಲೈ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.
ಹೌದು.. ಮಾಜಿ ಬಿಜೆಪಿ ನಾಯಕ ಕೆ. ಅಣ್ಣಾಮಲೈ ಅವರು ಬುಧವಾರ ಕೇಂದ್ರ ಸರ್ಕಾರದ ವಿರುದ್ಧ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದ್ದು, ಪ್ರಶ್ನೆಪತ್ರಿಕೆ ಮೂರು ಬಾರಿ ಸೋರಿಕೆಯಾಗಿದ್ದರೂ ಯಾರನ್ನೂ ಹೊಣೆಗಾರರನ್ನಾಗಿಸಿಲ್ಲ ಎಂದು ಆರೋಪಿಸಿದ್ದಾರೆ.
ಪ್ರಸ್ತುತ 'ವಿ ದ ಲೀಡರ್ಸ್' (We the Leaders) ಚಳವಳಿಯ ನೇತೃತ್ವ ವಹಿಸಿರುವ ಅಣ್ಣಾಮಲೈ, ಪ್ರತಿಭಟನೆಗಳು ಉಗ್ರ ಸ್ವರೂಪ ಪಡೆಯುವವರೆಗೆ ಕೇಂದ್ರ ಸರ್ಕಾರ ಅರ್ಥಪೂರ್ಣ ಸಂವಾದ ಆರಂಭಿಸದಿರುವುದಕ್ಕೆ ಕಾರಣವೇನು? ಎಂದು ಪ್ರಶ್ನಿಸಿದ್ದಾರೆ.
"ಪ್ರತಿಭಟನೆ ತೀವ್ರ ಹಂತ ತಲುಪುವವರೆಗೆ ಸರ್ಕಾರ ಏಕೆ ಕಾಯಿತು? ಅರ್ಥಪೂರ್ಣ ಸಂವಾದ ಆರಂಭಿಸಲು ಇಷ್ಟು ವಿಳಂಬ ಏಕೆ?" ಎಂದು ಅವರು ತಮ್ಮ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ.
ಕೇಂದ್ರ ಸರ್ಕಾರವು ಪ್ರತಿಭಟನಾಕಾರರೊಂದಿಗೆ ತಕ್ಷಣವೇ ರಚನಾತ್ಮಕ ಮಾತುಕತೆ ನಡೆಸಿ, ಪಾರದರ್ಶಕತೆ ಕಾಪಾಡಿ, ವಿದ್ಯಾರ್ಥಿಗಳ ಆತಂಕಗಳಿಗೆ ಶೀಘ್ರ ಹಾಗೂ ಸೂಕ್ತ ಪರಿಹಾರ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.
"ಯುವಜನರು ದೇಶದ ಸಂಸ್ಥೆಗಳ ಮೇಲೆ ಇಟ್ಟಿರುವ ನಂಬಿಕೆಯೇ ರಾಷ್ಟ್ರದ ಶಕ್ತಿ. ನಮ್ಮ ವಿದ್ಯಾರ್ಥಿಗಳು ಶಿಕ್ಷಣ ವ್ಯವಸ್ಥೆಯ ನ್ಯಾಯಸಮ್ಮತತೆ ಮತ್ತು ವಿಶ್ವಾಸಾರ್ಹತೆಯ ಮೇಲಿನ ನಂಬಿಕೆಯನ್ನು ಕಳೆದುಕೊಂಡರೆ, ಅದು ದೇಶದ ಭವಿಷ್ಯವನ್ನೇ ಅಪಾಯಕ್ಕೆ ತಳ್ಳಿದಂತಾಗುತ್ತದೆ," ಎಂದು ಅಣ್ಣಾಮಲೈ ಹೇಳಿದ್ದಾರೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಪಾರದರ್ಶಕ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.