

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ನೀಡಿದ ಭರವಸೆ ನೀಡಿದ್ದಾರೆ. ಆದರೆ ಇದರಿಂದ ಸಮಸ್ಯೆ ಪರಿಹಾರವಾಗುವುದಿಲ್ಲ ಎಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಗುರುವಾರ ಆಕ್ರೋಶ ವ್ಯಕ್ತಪಡಿಸಿದೆ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕು ಎಂದು ಪುನರುಚ್ಚರಿಸಿದೆ.
ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವವರಿಗೆ ತ್ವರಿತ ಮತ್ತು ಕಠಿಣ ಶಿಕ್ಷೆಯನ್ನು ಖಚಿತಪಡಿಸಿಕೊಳ್ಳಲು ಫಾಸ್ಟ್-ಟ್ರ್ಯಾಕ್ ಕೋರ್ಟ್ ಸ್ಥಾಪಿಸುವುದಾಗಿ ಪ್ರಧಾನಿ ಮೋದಿ ಅವರು ಇಂದು ಬೆಳಗ್ಗೆ ಎಕ್ಸ್ನಲ್ಲಿ ಪ್ರಕಟಿಸಿದ್ದರು. "ನಮ್ಮ ಯುವಕರ ಕಲ್ಯಾಣ ಮತ್ತು ಭವಿಷ್ಯಕ್ಕಿಂತ ಬೇರೇನೂ ಇಲ್ಲ" ಎಂದು ಮೋದಿ ಹೇಳಿದ್ದಾರೆ.
ಪ್ರಧಾನಿ ಮೋದಿಯವರ ಪೋಸ್ಟ್ಗೆ ಪ್ರತಿಕ್ರಿಯಿಸಿದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ, "ಹಾಯ್, ನನ್ನ ಹೆಸರು ಏನೂ ಅಲ್ಲ" ಎಂಬ ಶೀರ್ಷಿಕೆಯೊಂದಿಗೆ ಪ್ರಧಾನ್ ಅವರ ಚಿತ್ರವನ್ನು ಹಂಚಿಕೊಂಡಿದ್ದಾರೆ. ಆದರೆ ಸಿಜೆಪಿ "ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು" ಎಂದು ಪೋಸ್ಟ್ ಮಾಡಿದೆ.
ನೀಟ್ (NEET) ಪರೀಕ್ಷೆ ಅಕ್ರಮದ ನೈತಿಕ ಜವಾಬ್ದಾರಿಯನ್ನು ಕೇಂದ್ರ ಶಿಕ್ಷಣ ಸಚಿವರು ಹೊರಬೇಕು. ಸಚಿವರನ್ನು ವಜಾಗೊಳಿಸುವವರೆಗೆ ಅಥವಾ ರಾಜೀನಾಮೆ ನೀಡುವವರೆಗೆ ಜಂತರ್ ಮಂತರ್ನಲ್ಲಿ ಧರಣಿ ನಿಲ್ಲುವುದಿಲ್ಲ ಎಂದು ಸಿಜೆಪಿ ಮುಖಂಡರು ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಸರ್ಕಾರ ಕಾನೂನಾತ್ಮಕ ಕ್ರಮಗಳು ಹಾಗೂ ಕ್ಷಿಪ್ರ ನ್ಯಾಯಾಲಯಗಳ ಮೂಲಕ ವಿದ್ಯಾರ್ಥಿಗಳನ್ನು ಸಮಾಧಾನಪಡಿಸಲು ಯತ್ನಿಸುತ್ತಿದ್ದರೆ, ಪ್ರತಿಭಟನಾ ನಿರತ ಯುವಸಮುದಾಯ ಮತ್ತು ಸಿಜೆಪಿ ಸಚಿವರ ರಾಜೀನಾಮೆ ಹಾಗೂ ರಾಜಕೀಯ ಹೊಣೆಗಾರಿಕೆಗೆ ಪಟ್ಟು ಹಿಡಿದು ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿವೆ.
ಸಿಜೆಪಿ ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಅವರು ಪ್ರಧಾನಿಯವರ ಪ್ರತಿಕ್ರಿಯೆಯನ್ನು ಸ್ವಾಗತಿಸಿದ್ದಾರೆ. ಆದರೆ ಸುಮಾರು ಒಂದೂವರೆ ತಿಂಗಳ ಪ್ರತಿಭಟನೆಗಳ ನಂತರ ಕೊನೆಗೂ ಮೌನ ಮುರಿದ ಮೋದಿ ಅವರು ಪುನರಾವರ್ತಿತ ಪ್ರಶ್ನೆಪತ್ರಿಕೆ ಸೋರಿಕೆಯ ಹಿಂದಿನ ಮುಖ್ಯ ಪ್ರಶ್ನೆಗೆ ಉತ್ತರಿಸಿಲ್ಲ ಎಂದು ಹೇಳಿದ್ದಾರೆ.