

ಸಿಕ್ಕಿಂನ ನಾಮ್ಚಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಎನ್ಎಚ್ಪಿಸಿ ತೀಸ್ತಾ ಸ್ಟೇಜ್ VI ಜಲವಿದ್ಯುತ್ ಯೋಜನೆಯ ಸುರಂಗ ಕುಸಿತ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ರಕ್ಷಣಾ ಸಿಬ್ಬಂದಿ ಅವಶೇಷಗಳ ಅಡಿಯಿಂದ ಮತ್ತಷ್ಟು ಮೃತದೇಹಗಳನ್ನು ಹೊರತೆಗೆದಿದ್ದಾರೆ.
ಸೋಮವಾರ ಮೀಥೇನ್ ಅನಿಲದಿಂದ ಉಂಟಾಗಿದೆ ಎಂದು ಶಂಕಿಸಲಾದ ಸ್ಫೋಟದ ನಂತರ ಸುರಂಗ ಕುಸಿದಾಗ ಇಪ್ಪತ್ತೈದು ಕಾರ್ಮಿಕರು ಅದರೊಳಗೆ ಸಿಲುಕಿದ್ದರು. ಉಳಿದ ಮೂವರು ಕಾರ್ಮಿಕರನ್ನು ಪತ್ತೆಹಚ್ಚಲು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ವಿಶೇಷ ಸಿಬ್ಬಂದಿ ಸೇರಿದಂತೆ ರಕ್ಷಣಾ ತಂಡಗಳು ನಾಪತ್ತೆಯಾದವರನ್ನು ಪತ್ತೆಹಚ್ಚಲು ಶೋಧ ಕಾರ್ಯ ಮುಂದುವರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿಕ್ಕಿಂ ಸರ್ಕಾರ, ಜಿಲ್ಲಾಡಳಿತ ಮತ್ತು ಎಲ್ಲಾ ಸಂಬಂಧಪಟ್ಟ ಸಂಸ್ಥೆಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ರಕ್ಷಣಾ ತಂಡಗಳು ಮತ್ತು ಪೀಡಿತ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುತ್ತಿವೆ ಎಂದು ರಾಜ್ಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪತ್ತೆಯಾಗಿರುವ ಎಂಟು ಶವಗಳನ್ನು ಕುಟುಂಬಸ್ಥರು ಗುರುತಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬುಧವಾರದವರೆಗೆ ಪತ್ತೆಯಾದ ಮೃತದೇಹಗಳಲ್ಲಿ 8 ಕಾರ್ಮಿಕರ ಗುರುತು ಪತ್ತೆಹಚ್ಚಲಾಗಿದೆ. ಮೃತರ ಪೈಕಿ ನಾಲ್ವರು ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯವರಾಗಿದ್ದರೆ, ಪಂಜಾಬ್, ಉತ್ತರಾಖಂಡ, ಅಸ್ಸಾಂ ಮತ್ತು ಸಿಕ್ಕಿಂನ ತಲಾ ಒಬ್ಬೊಬ್ಬರು ಸೇರಿದ್ದಾರೆ. ಜಾರ್ಖಂಡ್ನ ಖುಂಟಿ, ಹಜಾರಿಬಾಗ್ ಮತ್ತು ಪಶ್ಚಿಮ ಸಿಂಗ್ಭೂಮ್ ಜಿಲ್ಲೆಗಳ ಕನಿಷ್ಠ ನಾಲ್ಕು ಕಾರ್ಮಿಕರು ಈ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.