

ನವದೆಹಲಿ: NEET ಮತ್ತು CBSE ಪರೀಕ್ಷೆಗಳಲ್ಲಿನ ಅಕ್ರಮಗಳು ಹಾಗೂ ಮೋದಿ ಸರ್ಕಾರದ ದಮನಕಾರಿ ಕ್ರಮದ ವಿರುದ್ಧ ನಾಳೆ ಸಂಜೆ ಮೊಂಬತ್ತಿ ಮೆರವಣಿಗೆ ಹಾಗೂ 'ಸತ್ಯಾಗ್ರಹ'ವನ್ನು ನಡೆಸುವಂತೆ ಕಾಂಗ್ರೆಸ್ ತನ್ನ ರಾಜ್ಯ ಘಟಕಗಳಿಗೆ ಸೂಚಿಸಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿರ್ದೇಶನದಂತೆ ತಮ್ಮ ವ್ಯಾಪ್ತಿಯಲ್ಲಿ ಬೃಹತ್ ಮೊಂಬತ್ತಿ ಮೆರವಣಿಗೆ ಹಾಗೂ 'ಸತ್ಯಾಗ್ರಹ'ವನ್ನು ಆಯೋಜಿಸಲು ನಿರ್ದೇಶಿಸುವಂತೆ ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೆ ಕಳುಹಿಸಲಾದ ಸುತ್ತೋಲೆಯಲ್ಲಿ ಪಕ್ಷದ ಸಂಘಟನಾ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ರಾಷ್ಟ್ರವ್ಯಾಪಿ ಪ್ರತಿಭಟನೆ ಮತ್ತು ನವದೆಹಲಿಯಲ್ಲಿ ನಡೆದ ಅಭೂತಪೂರ್ವ ಘಟನೆಗಳ ಮುಂದುವರಿಕೆಯಾಗಿ NEET ಮತ್ತು CBSE ಪರೀಕ್ಷಾ ಅಕ್ರಮಗಳು ಹಾಗೂ ನರೇಂದ್ರ ಮೋದಿ ಸರ್ಕಾರದಡಿಯ ದಮನಕಾರಿ ಕ್ರಮಗಳಿಗೆ ಪ್ರತಿಕ್ರಿಯೆಯಾಗಿ ಗಂಭೀರ ಮತ್ತು ನಿರ್ಣಾಯಕ ಕಾರ್ಯಕ್ರಮ ಆಯೋಜಿಸುವಂತೆ ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿಗಳಿಗೆ ಈ ಮೂಲಕ ಸೂಚಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಪ್ರತಿ ಮೆರವಣಿಗೆಯು ಮಹಾತ್ಮ ಗಾಂಧಿ ಅಥವಾ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯತ್ತ ಸಾಗಿ ಅಲ್ಲಿಯೇ ಕೊನೆಯಾಗಬೇಕು. ವ್ಯವಸ್ಥಿತ ವೈಫಲ್ಯಗಳಿಂದಾಗಿ ತಮ್ಮ ಭವಿಷ್ಯವು ಸಂಕಷ್ಟಕ್ಕೆ ಸಿಲುಕಿರುವ ದೇಶದ ವಿದ್ಯಾರ್ಥಿಗಳು ಮತ್ತು ಯುವಜನರೊಂದಿಗೆ ದೃಢವಾದ ಒಗ್ಗಟ್ಟನ್ನು ಪ್ರದರ್ಶಿಸಲು ಈ ಸತ್ಯಾಗ್ರಹವನ್ನು ನಡೆಸಲಾಗುವುದು ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.
ಪರೀಕ್ಷಾ ಪ್ರಕ್ರಿಯೆಯ ಪಾವಿತ್ರ್ಯತೆ ಸಂಪೂರ್ಣವಾಗಿ ಕುಸಿದಿರುವುದಕ್ಕೆ ಮತ್ತು ದೇಶದ ಯುವಜನರ ಭವಿಷ್ಯವನ್ನು ರಕ್ಷಿಸುವಲ್ಲಿ ವಿಫಲವಾಗಿರುವುದಕ್ಕೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣವೇ ರಾಜೀನಾಮೆ ನೀಡಬೇಕೆಂದು ನಾವು ಸ್ಪಷ್ಟವಾಗಿ ಒತ್ತಾಯಿಸಬೇಕು ಎಂದು ವೇಣುಗೋಪಾಲ್ ಹೇಳಿದ್ದಾರೆ.