

ನವದೆಹಲಿ: ಜುಲೈ 20 ರಂದು ನಡೆದ 'ಸಂಸದ್ ಚಲೋ' ಪ್ರತಿಭಟನಾ ಮೆರವಣಿಗೆ ವೇಳೆ ಅಟ್ಟಾಡಿಸಿ ಹೊಡೆದಿದ್ದಾರೆ ಎನ್ನಲಾದ ಪೊಲೀಸ್ ಸಿಬ್ಬಂದಿ ಗುರುತಿಸಲು ಪ್ರತಿಭಟನಾಕಾರರಿಂದ ಫೋಟೋಗಳು ಮತ್ತು ವೀಡಿಯೊಗಳನ್ನು ಸಂಗ್ರಹಿಸುವ ವಿಶೇಷ ವೆಬ್ಸೈಟ್ ಅನ್ನು ಪ್ರಾರಂಭಿಸುವುದಾಗಿ 'ಕಾಕ್ರೋಚ್ ಜನತಾ ಪಾರ್ಟಿ' (CJP) ಶುಕ್ರವಾರ ಘೋಷಿಸಿದೆ.
ಅಲ್ಲದೆ, ಈ ಅಧಿಕಾರಿಗಳ ವಿರುದ್ಧ ಎಫ್ಐಆರ್ (FIR) ದಾಖಲಿಸಲು ಮತ್ತು ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿರುವುದಾಗಿ ತಿಳಿಸಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ CJP ವಕ್ತಾರ ಸೌರವ್ ದಾಸ್, ಕಾರ್ಯಾಚರಣೆಯ ವೇಳೆ ಪೊಲೀಸರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಮತ್ತು ಮಹಿಳಾ ಪ್ರತಿಭಟನಾಕಾರರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದರು.
ನಾವು ಮೊದಲೇ ಘೋಷಿಸಿದಂತೆ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ, ಅವರನ್ನು ಗಾಯಗೊಳಿಸಿದ ಮತ್ತು ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಪ್ರತಿಯೊಬ್ಬ ಅಧಿಕಾರಿಗೆ ಎಚ್ಚರಿಕೆ ನೀಡಲಾಗಿದೆ. ನಾವು ಸುಮ್ಮನಿರುವುದಿಲ್ಲ. ಎಲ್ಲವನ್ನೂ ನೆನಪಿನಲ್ಲಿಟ್ಟುಕೊಳ್ಳುತ್ತೇವೆ ಎಂದು ಹೇಳಿದರು. ಅಲ್ಲದೇ, ದಮನಕಾರಿ ಕ್ರಮದಲ್ಲಿ ಭಾಗಿಯಾದ ಪೊಲೀಸರ ಫೋಟೋಗಳು ಮತ್ತು ವೀಡಿಯೊಗಳನ್ನು ಅಪ್ಲೋಡ್ ಮಾಡುವಂತೆ ಅವರು ಪ್ರತಿಭಟನಾಕಾರರಿಗೆ ಮನವಿ ಮಾಡಿದರು.
ನಾವು ಒಂದು ವೆಬ್ಸೈಟ್ ಅನ್ನು ಪ್ರಾರಂಭಿಸುತ್ತಿದ್ದೇವೆ. ತಮ್ಮ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿಗಳ ಯಾವುದೇ ವೀಡಿಯೊಗಳು ಅಥವಾ ಫೋಟೋ ಇರುವ ಎಲ್ಲಾ ಪ್ರತಿಭಟನಾಕಾರರು ಅವುಗಳನ್ನು ಅಪ್ಲೋಡ್ ಮಾಡುವಂತೆ ಕೋರುತ್ತೇವೆ. CJP ತಂಡವು ಆ ಮಾಹಿತಿಯನ್ನು ಪರಿಶೀಲಿಸಿ ಪ್ರತಿಯೊಬ್ಬ ಪೊಲೀಸ್ ಅಧಿಕಾರಿಯನ್ನು ಗುರುತಿಸುತ್ತದೆ. ಅವರ ವಿರುದ್ಧ ಎಫ್ಐಆರ್ ದಾಖಲಾಗಬೇಕು. ಗುರುತಿಸಲಾದ ಅಧಿಕಾರಿಗಳ ವಿರುದ್ಧ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸದಿದ್ದರೆ, ಪಕ್ಷವು ನ್ಯಾಯಾಲಯದ ಮೊರೆ ಹೋಗುತ್ತದೆ ಎಂದು ದಾಸ್ ತಿಳಿಸಿದರು.
ದೇಶಾದ್ಯಂತ ವಕೀಲರು ನಮಗೆ ಸಹಾಯ ಮಾಡುತ್ತಿದ್ದಾರೆ. ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ನಿರ್ದೇಶಿಸುವ ನ್ಯಾಯಾಲಯದ ಆದೇಶಗಳನ್ನು ನಾವು ಪಡೆಯುತ್ತೇವೆ. ಸೂಕ್ತ ಸಮಯ ಬಂದಾಗ, ಅವರೆಲ್ಲರೂ ಜೈಲಿಗೆ ಹೋಗುವಂತೆ ಮಾಡುತ್ತೇವೆ. ಇದು ನಮ್ಮ ಭರವಸೆ ಎಂದು ಅವರು ಹೇಳಿದರು.
ಇದೇ ವೇಳೆ ತೃಣಮೂಲ ಕಾಂಗ್ರೆಸ್ನ ರಾಜ್ಯಸಭಾ ಸಂಸದ ಸಾಕೇತ್ ಗೋಖಲೆ ಕೂಡ ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರಿಗೆ, ಜುಲೈ 20ರ ಪೊಲೀಸ್ ಕ್ರಮಕ್ಕೆ ಸಂಬಂಧಿಸಿದ ಪೋಟೋಗಳು, ವಿಡಿಯೋಗಳು ಮತ್ತು ಇತರ ಸಾಕ್ಷ್ಯಗಳನ್ನು ಸಲ್ಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ.