

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಟೈಫಾಯ್ಡ್ ದೃಢಪಟ್ಟಿದ್ದರೂ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಶನಿವಾರ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಸಂದೇಶ ಹಂಚಿಕೊಂಡಿರುವ ದೀಪ್ಕೆ, ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದೇನೆ. ವೈದ್ಯಕೀಯ ಪರೀಕ್ಷೆಯಲ್ಲಿ ಟೈಫಾಯ್ಡ್ ದೃಢಪಟ್ಟಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಆದಾಗ್ಯೂ, ದೇಶದಾದ್ಯಂತ ಶಾಂತಿಯುತವಾಗಿ ಪ್ರತಿಭಟನೆ ಮುಂದುವರಿಸಿರುವ ಸಿಜೆಪಿ ಕಾರ್ಯಕರ್ತರಿಗೆ ಅವರು ಧನ್ಯವಾದ ಅರ್ಪಿಸಿದ್ದು, ಈ ಹೋರಾಟ ತನ್ನ ಗುರಿಯನ್ನು ಖಂಡಿತ ತಲುಪಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
"ಕಳೆದ ಕೆಲವು ದಿನಗಳಿಂದ ನಾನು ಅನಾರೋಗ್ಯದಿಂದ ಬಳಲುತ್ತಿದ್ದೇನೆ. ಈಗ ಪರೀಕ್ಷಾ ವರದಿಗಳು ಬಂದಿದ್ದು, ನನಗೆ ಟೈಫಾಯ್ಡ್ ದೃಢಪಟ್ಟಿದೆ. ತಮಗೆ ಪ್ರಸ್ತುತ ಚಿಕಿತ್ಸೆ ನಡೆಯುತ್ತಿದ್ದು, ಪ್ರತಿದಿನ ಐವಿ ಡ್ರಿಪ್ ನೀಡಲಾಗುತ್ತಿದೆ ಎಂದು ದೀಪ್ಕೆ ಹೇಳಿದ್ದಾರೆ.
"ನನ್ನ ಚಿಕಿತ್ಸೆ ಮುಂದುವರಿದಿದೆ. ಪ್ರತಿದಿನ ಐವಿ ಡ್ರಿಪ್ ಪಡೆಯುತ್ತಿದ್ದೇನೆ. ಆದರೆ ದೇಶದಾದ್ಯಂತ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ಎಲ್ಲ 'ಕಾಕ್ರೋಚ್'ಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ," ಎಂದು ಅವರು ಹೇಳಿದ್ದಾರೆ.
ಹೋರಾಟವನ್ನು ರಾಷ್ಟ್ರವ್ಯಾಪಿಯಾಗಿ ವಿಸ್ತರಿಸಿರುವ ಬೆಂಬಲಿಗರನ್ನು ಅಭಿನಂದಿಸಿದ ದೀಪ್ಕೆ, ಇದೇ ರೀತಿಯ ಶಾಂತಿಯುತ ಹೋರಾಟ ಮುಂದುವರಿದರೆ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಪಡೆಯುವಲ್ಲಿ ಯಶಸ್ವಿಯಾಗುತ್ತೇವೆ. ಈ ಹೋರಾಟವನ್ನು ಇಷ್ಟೊಂದು ದೊಡ್ಡ ಯಶಸ್ಸಾಗಿಸಿದ ನಿಮಗೆಲ್ಲ ಅಭಿನಂದನೆಗಳು. ಇದೇ ರೀತಿಯಲ್ಲಿ ಪ್ರತಿಭಟನೆ ಮುಂದುವರಿಸಿದರೆ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಪಡೆಯುವುದು ಖಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಸಿಜೆಪಿ ಆರಂಭಿಸಿರುವ ಈ ಹೋರಾಟದಲ್ಲಿ ಪರೀಕ್ಷಾ ವ್ಯವಸ್ಥೆಯಲ್ಲಿ ಜವಾಬ್ದಾರಿತ್ವ, ನೇಮಕಾತಿ ಮತ್ತು ಪ್ರವೇಶ ಪರೀಕ್ಷೆಗಳಲ್ಲಿ ಸುಧಾರಣೆ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಲಾಗುತ್ತಿದೆ.
ವಾಂಗ್ಚುಕ್ ಉಪವಾಸ ಅಂತ್ಯ
ಈ ಪ್ರತಿಭಟನೆಗೆ ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಸೇರಿದಂತೆ ಹಲವು ಸಾರ್ವಜನಿಕ ವ್ಯಕ್ತಿಗಳು ಬೆಂಬಲ ವ್ಯಕ್ತಪಡಿಸಿದ್ದರು. ವಾಂಗ್ಚುಕ್ ಜೂನ್ 28ರಂದು ಜಂತರ್ ಮಂತರ್ನಲ್ಲಿ ನಡೆಯುತ್ತಿದ್ದ ಪ್ರತಿಭಟನೆಗೆ ಸೇರಿ 26 ದಿನಗಳ ಉಪವಾಸ ಸತ್ಯಾಗ್ರಹ ನಡೆಸಿದ್ದರು.
ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ಯಾವುದೇ ಪ್ರಕರಣ ದಾಖಲಿಸುವುದಿಲ್ಲ, ಪರೀಕ್ಷಾ ಸುಧಾರಣೆ ಮತ್ತು ಜವಾಬ್ದಾರಿತ್ವದ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸಲಾಗುವುದು ಹಾಗೂ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ನೀಡುವ ವಿಚಾರವನ್ನು ಸಕಾರಾತ್ಮಕವಾಗಿ ಪರಿಗಣಿಸಲಾಗುವುದು ಎಂಬ ಲಿಖಿತ ಭರವಸೆಯನ್ನು ಕೇಂದ್ರ ಸರ್ಕಾರ ನೀಡಿದ ಬಳಿಕ ವಾಂಗ್ಚುಕ್ ಈ ವಾರ ತಮ್ಮ ಉಪವಾಸವನ್ನು ಅಂತ್ಯಗೊಳಿಸಿದ್ದರು.
ಆದರೆ, ವಾಂಗ್ಚುಕ್ ಉಪವಾಸ ಅಂತ್ಯಗೊಳಿಸಿದರೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೆ ಜಂತರ್ ಮಂತರ್ನಲ್ಲಿ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆ ಮುಂದುವರಿಯಲಿದೆ ಎಂದು ಪಕ್ಷ ಸ್ಪಷ್ಟಪಡಿಸಿದೆ.