

ನವದೆಹಲಿ: ದೇಶದ ಹಿತ, ಯುವಜನತೆ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ಬಿಜೆಪಿಗೆ ಯಾವುದೇ ಹುದ್ದೆಗಿಂತ ಮುಖ್ಯ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದು, ಈ ಮೂಲಕ ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, "ಮೋದಿ ಸರ್ಕಾರ ದೇಶದ ಯುವಜನರ ಭಾವನೆಗಳನ್ನು ಗೌರವಿಸುತ್ತದೆ. ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಅಗತ್ಯ ಸುಧಾರಣೆಗಳನ್ನು ಜಾರಿಗೆ ತರಲು ಬದ್ಧವಾಗಿದೆ," ಎಂದು ತಿಳಿಸಿದ್ದಾರೆ.
ಬಿಜೆಪಿಗೆ ರಾಷ್ಟ್ರ, ನಮ್ಮ ಯುವಜನತೆ ಮತ್ತು ವಿದ್ಯಾರ್ಥಿಗಳು ಯಾವುದೇ ಹುದ್ದೆಗಿಂತ ಹೆಚ್ಚಿನ ಮಹತ್ವ ಹೊಂದಿದ್ದಾರೆ ಎಂದು ಹೇಳಿದ್ದಾರೆ.
ಇದೇ ವೇಳೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವ ಪ್ರಧಾನಿ ಮೋದಿ ಅವರ ನಿರ್ಧಾರವನ್ನು ಶ್ಲಾಘಿಸಿದ ಅಮಿತ್ ಶಾ ಅವರು, ಸರ್ಕಾರದ ಕ್ರಮಗಳು ಪರೀಕ್ಷಾ ವ್ಯವಸ್ಥೆಯಲ್ಲಿ ಹೆಚ್ಚಿನ ಹೊಣೆಗಾರಿಕೆಯನ್ನು ಖಚಿತಪಡಿಸಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲು ಪ್ರಧಾನಿ ಮೋದಿ ಕೈಗೊಂಡಿರುವ ನಿರ್ಧಾರಗಳು ಶ್ಲಾಘನೀಯ. ಈ ಕ್ರಮಗಳಿಂದ ನೀಟ್ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಿದ ವಿದ್ಯಾರ್ಥಿಗಳಿಗೆ ಸಂಪೂರ್ಣ ನ್ಯಾಯ ದೊರೆಯಲಿದೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದರು.
ಬಳಿಕ ಧರ್ಮೇಂದ್ರ ಪ್ರಧಾನ್ ಅವರ ಸಚಿವಾವಧಿಯನ್ನು ಉಲ್ಲೇಖಿಸಿರುವ ಅವರು, ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಜಾರಿ, ಮಾತೃಭಾಷೆಗಳಲ್ಲಿ ಪರೀಕ್ಷೆಗಳ ವಿಸ್ತರಣೆ, ಪಿಎಂ ಶ್ರೀ ಶಾಲೆಗಳ ಬಲವರ್ಧನೆ, ಡಿಜಿಟಲ್ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿಗೆ ಉತ್ತೇಜನ ಹಾಗೂ ಕೈಗಾರಿಕೆ-ಶೈಕ್ಷಣಿಕ ಸಂಸ್ಥೆಗಳ ಸಮನ್ವಯ ಹೆಚ್ಚಿಸುವಲ್ಲಿ ಅವರು ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಪ್ರಶಂಸಿಸಿದರು.
ಪರೀಕ್ಷಾ ವ್ಯವಸ್ಥೆಯನ್ನು ಹೆಚ್ಚು ಸಮಗ್ರ ಮತ್ತು ವಿದ್ಯಾರ್ಥಿ ಕೇಂದ್ರಿತವಾಗಿಸಲು ಅವರು ಮಾಡಿದ ಪ್ರಯತ್ನಗಳು ಗಮನಾರ್ಹ. ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣದ ಸಂಕಲ್ಪಕ್ಕೆ ಅವರ ಸಚಿವಾವಧಿ ಸಾಕ್ಷಿಯಾಗಿದೆ ಎಂದು ಹೇಳಿದರು.