

ಗಂಡೇರ್ಬಲ್ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಗಂಡೇರ್ಬಲ್ ಜಿಲ್ಲೆಯ ಕಂಗನ್ ಪ್ರದೇಶದಲ್ಲಿ ಮಂಗಳವಾರ ವೇಗವಾಗಿ ಬಂದ ಬಸ್ ರಸ್ತೆಯಿಂದ ಜಾರಿ ಬಿದ್ದ ಪರಿಣಾಮ ಕನಿಷ್ಠ 39 ಅಮರನಾಥ ಯಾತ್ರಿಕರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಆ ಕುರಿತ ವರದಿ ಇಲ್ಲಿದೆ:
ಏನಿದು ಘಟನೆ?
ಮಂಗಳವಾರ ಮುಂಜಾನೆ, ಜಮ್ಮು ಮತ್ತು ಕಾಶ್ಮೀರದ ಗಂಡೇರ್ಬಲ್ ಜಿಲ್ಲೆಯ ಕಂಗನ್ ಪ್ರದೇಶದ ಹರಿಗನ್ವಾನ್ ಎಂಬಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ದೆಹಲಿ ಮೂಲದ ಅಮರನಾಥ ಯಾತ್ರಾರ್ಥಿಗಳಿದ್ದ ಬಸ್ ನಿಯಂತ್ರಣ ತಪ್ಪಿ ರಸ್ತೆಯಿಂದ ಜಾರಿ ಬಿದ್ದಿದೆ.
ಮುಂದುವರೆದು, ಬಾಲ್ಟಾಲ್ ಬೇಸ್ ಕ್ಯಾಂಪ್ನಿಂದ ಹಿಂತಿರುಗುತ್ತಿದ್ದ ಬಸ್ನ ಚಾಲಕ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡಿದ್ದರಿಂದ ವಾಹನವು ರಸ್ತೆಯಿಂದ ಜಾರಿ ಪಕ್ಕದ ಕಂದಕಕ್ಕೆ ಉರುಳಿ, ಅಲ್ಲಿನ ಮನೆಯೊಂದರ ಮೇಲ್ಛಾವಣಿಯ ಮೇಲೆ ಬಿದ್ದಿದೆ. ಇದರ ಪರಿಣಾಮ 50 ಯಾತ್ರಾರ್ಥಿಗಳ ಪೈಕಿ ಕನಿಷ್ಠ 39 ಯಾತ್ರಿಕರು ಗಾಯಗೊಂಡಿದ್ದು, 7 ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಇನ್ನು, ಅಪಘಾತದ ನಂತರ ರಕ್ಷಣಾ ಪಡೆಗಳು ಸ್ಥಳೀಯರೊಂದಿಗೆ ಸೇರಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಅದರಂತೆ, ಗಾಯಗೊಂಡ ಎಲ್ಲರನ್ನು ಮೊದಲು ಕಂಗನ್ನ ಉಪ-ಜಿಲ್ಲಾ ಆಸ್ಪತ್ರೆಗೆ (SDH) ದಾಖಲಿಸಲಾಯಿತು. ಜೊತೆಗೆ ಗಂಭೀರವಾಗಿ ಗಾಯಗೊಂಡಿರುವ 7 ಯಾತ್ರಿಕರು ಹಾಗೂ ಬಸ್ ಚಾಲಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಶ್ರೀನಗರದ ಶೇರ್-ಇ-ಕಾಶ್ಮೀರ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಏತನ್ಮಧ್ಯೆ, ಘಟನೆ ಸಂಬಂಧ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು, "ಗಂದರ್ಬಾಲ್ ಜಿಲ್ಲಾಧಿಕಾರಿ ಮತ್ತು ವೈದ್ಯಕೀಯ ಅಧಿಕಾರಿಗಳೊಂದಿಗೆ ಮಾತನಾಡಿ, ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಸೇವೆ ಒದಗಿಸುವಂತೆ ಸೂಚಿಸಿರುವುದಾಗಿ" ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.