ಮೇಕೆದಾಟು ಯೋಜನೆಗೆ ತಮಿಳುನಾಡು ಮತ್ತೆ ಅಡ್ಡಗಾಲು; ಪ್ರಧಾನಿ ಮೋದಿ ಮಧ್ಯ ಪ್ರವೇಶಿಸುವಂತೆ ಕೋರಿ ವಿಜಯ್ ಪತ್ರ

ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ಕೆಳಹರಿವಿನ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ ಎಂದು ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಹೇಳಿದ್ದೆ ತಡ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್, ಮೇಕೆದಾಟು ವಿಷಯದಲ್ಲಿ ಮಧ್ಯ ಪ್ರವೇಶಿಸುವಂತೆ ಕೋರಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.
vijay and modi
ಪ್ರಧಾನಿ ಮೋದಿ ಜೊತೆಗೆ ವಿಜಯ್ (ಸಾಂದರ್ಭಿಕ ಚಿತ್ರ)Online Desk
Updated on

ಚೆನ್ನೈ (ತಮಿಳುನಾಡು): ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ಕೆಳಹರಿವಿನ ರಾಜ್ಯಗಳ (ತಮಿಳುನಾಡು) ಒಪ್ಪಿಗೆ ಅಗತ್ಯವಿಲ್ಲ ಎಂದು ಸಂಸತ್ತಿನಲ್ಲಿ ಕೇಂದ್ರ ಸರ್ಕಾರದ ಜಲಶಕ್ತಿ ಖಾತೆ ರಾಜ್ಯ ಸಚಿವ ರಾಜ್ ಭೂಷಣ್ ಚೌಧರಿ ಅವರು ರಾಜ್ಯಸಭೆಯಲ್ಲಿ ಹೇಳಿದ್ದೆ ತಡ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು, ಮೇಕೆದಾಟು ವಿಷಯದಲ್ಲಿ ಮಧ್ಯ ಪ್ರವೇಶಿಸುವಂತೆ ಕೋರಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ತಮಿಳುನಾಡಿನ ಸಂಸದ ಡಾ. ಅನ್ಬುಮಣಿ ರಾಮದಾಸ್ ಅವರ ಪ್ರಶ್ನೆಗೆ ಉತ್ತರಿಸುವ ವೇಳೆ ರಾಜ್ಯಸಭೆಯಲ್ಲಿ ಜಲಶಕ್ತಿ ಖಾತೆ ರಾಜ್ಯ ಸಚಿವ ರಾಜ್ ಭೂಷಣ್ ಚೌಧರಿ ಅವರು, ಕರ್ನಾಟಕವು ತಮಿಳುನಾಡು, ಕೇರಳ ಹಾಗೂ ಪುದುಚೇರಿಯ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ತಿಳಿಸಿದ್ದರು.

ಮೇಕೆದಾಟು ಜಲಾಶಯ ನಿರ್ಮಿಸಲು ಸಾಧ್ಯವಿಲ್ಲ

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್, "ಮೇಕೆದಾಟು ಕುರಿತು ಕೇಂದ್ರ ಸರ್ಕಾರವು ರಾಜ್ಯಸಭೆಯಲ್ಲಿ ನೀಡಿದ ಹೇಳಿಕೆಯು ಅಂತರರಾಜ್ಯ ನದಿ ವಿವಾದಗಳನ್ನು ನಿಯಂತ್ರಿಸುವ ಕಾನೂನು ತತ್ವಗಳನ್ನು ಕಡೆಗಣಿಸಿದೆ ಮತ್ತು ಇದು ತಮಿಳುನಾಡಿಗೆ ತೀವ್ರ ನಿರಾಸೆ ತಂದಿದೆ" ಎಂದಿದ್ದಾರೆ. ಜೊತೆಗೆ, ಕಾವೇರಿ ನದಿಯ ಕೆಳಹರಿವಿನ ರಾಜ್ಯಗಳ ಒಪ್ಪಿಗೆಯಿಲ್ಲದೆ ಯಾವುದೇ ಹೊಸ ಅಣೆಕಟ್ಟು ಅಥವಾ ಜಲಾಶಯ ನಿರ್ಮಿಸಲು ಸಾಧ್ಯವಿಲ್ಲ ಎಂಬ 2018ರ ಸುಪ್ರೀಂ ಕೋರ್ಟ್ ತೀರ್ಪು ಮತ್ತು ಕಾವೇರಿ ನ್ಯಾಯಮಂಡಳಿ ಆದೇಶವನ್ನು ಸಹ ಉಲ್ಲೇಖಿಸಿದ್ದಾರೆ.

vijay and modi
ಮೇಕೆದಾಟು ಯೋಜನೆಗೆ ಸಿಕ್ಕಿತು ಕೇಂದ್ರದ ಬಲ; ಕರ್ನಾಟಕಕ್ಕೆ ಕಾನೂನುಬದ್ಧ ಹಕ್ಕಿದೆ, ತಮಿಳುನಾಡಿನ ಸಮ್ಮತಿ ಅಗತ್ಯವೇ ಇಲ್ಲ ಎಂದ ಜಲಶಕ್ತಿ ಸಚಿವಾಲಯ

ಮುಂದುವರೆದು, ಕೇಂದ್ರ ಸರ್ಕಾರವು ತಕ್ಷಣವೇ ರಾಜ್ಯಸಭೆಯಲ್ಲಿ ನೀಡಿದ ಉತ್ತರವನ್ನು ಹಿಂತೆಗೆದುಕೊಳ್ಳಬೇಕು ಎಂದು ಪ್ರಧಾನಿಗೆ ಮನವಿ ಮಾಡಿರುವ ವಿಜಯ್, "ನ್ಯಾಯಮಂಡಳಿಯ ನಿರ್ದೇಶನಗಳು ಮತ್ತು ಸುಪ್ರೀಂ ಕೋರ್ಟ್ ತೀರ್ಪುಗಳಿಗೆ ಸ್ಪಷ್ಟವಾಗಿ ಹೊಂದಿಕೆಯಾಗದ ಹೊರತು ಕರ್ನಾಟಕದ ಮೇಕೆದಾಟು ಯೋಜನೆಗೆ ಯಾವುದೇ ಶಾಸನಬದ್ಧ ಅಥವಾ ಆಡಳಿತಾತ್ಮಕ ಅನುಮೋದನೆಯನ್ನು ನೀಡಬಾರದು" ಎಂದು ಒತ್ತಾಯಿಸಿದ್ದಾರೆ.

ಏತನ್ಮಧ್ಯೆ, ಕರ್ನಾಟಕ ಸರ್ಕಾರವು ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಮತ್ತು ವಿದ್ಯುತ್ ಉತ್ಪಾದನೆಗಾಗಿ ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಬಳಿ ಸಮತೋಲನ ಜಲಾಶಯ ನಿರ್ಮಿಸಲು ಮುಂದಾಗಿದೆ. ಆದರೆ, ಇದರಿಂದ ತಮಿಳುನಾಡಿಗೆ ಹರಿಯುವ ನೀರಿನ ಪ್ರಮಾಣ ಕಡಿಮೆಯಾಗುತ್ತದೆ ಎಂದು ತಮಿಳುನಾಡು ಮೊದಲಿನಿಂದಲೂ ಈ ಯೋಜನೆಯನ್ನು ತೀವ್ರವಾಗಿ ವಿರೋಧಿಸುತ್ತಾ ಬಂದಿದೆ. ಇತ್ತೀಚೆಗಷ್ಟೇ ತಮಿಳುನಾಡು ವಿಧಾನಸಭೆಯಲ್ಲಿ ಮೇಕೆದಾಟು ಯೋಜನೆ ವಿರುದ್ಧ ವಿಜಯ್ ನೇತೃತ್ವದ ಸರ್ಕಾರವು ಸರ್ವಾನುಮತದ ನಿರ್ಣಯವನ್ನೂ ಅಂಗೀಕರಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com