

ನೋಯ್ಡಾ: ನವದೆಹಲಿಯ ಜಂತರ್ ಮಂತರ್ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಭಾಷೆಯನ್ನು ಬಳಸಿದ ಆರೋಪದ ಮೇಲೆ ಮಹಿಳೆಯೊಬ್ಬರ ವಿರುದ್ಧ ನೋಯ್ಡಾದ ಎಕ್ಸ್ಪ್ರೆಸ್ವೇ ಪೊಲೀಸ್ ಠಾಣೆಯಲ್ಲಿ 'ಜೀರೋ ಎಫ್ಐಆರ್' (Zero FIR) ದಾಖಲಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಘಾಜಿಯಾಬಾದ್ ನಿವಾಸಿ ಸ್ಮೃತಿ ಸಿಂಗ್ ಅವರು ನೋಯ್ಡಾದ ಸೆಕ್ಟರ್ 168ರ ನಿವಾಸಿ ರುಚಿಕಾ ಸಿಂಗ್ ವಿರುದ್ಧ ನೀಡಿದ ದೂರಿನ ಮೇರೆಗೆ ಈ ಎಫ್ಐಆರ್ ದಾಖಲಿಸಲಾಗಿದೆ.
ಎಫ್ಐಆರ್ ಪ್ರಕಾರ, ಜುಲೈ 23 ರಂದು ಜಂತರ್ ಮಂತರ್ನಲ್ಲಿ ಆರೋಪಿ ಪ್ರಧಾನಿಯ ವಿರುದ್ಧ "ಅವಹೇಳನಕಾರಿ ಮತ್ತು ಆಕ್ಷೇಪಾರ್ಹ" ಭಾಷೆಯನ್ನು ಬಳಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ಈ ಮೂಲಕ ಸಾಂವಿಧಾನಿಕ ಹುದ್ದೆಯ ಘನತೆಗೆ ಧಕ್ಕೆ ತರಲಾಗಿದೆ ಹಾಗೂ ದ್ವೇಷವನ್ನು ಹರಡುವ ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರುವ ಉದ್ದೇಶವನ್ನು ಹೊಂದಲಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ದೂರಿನ ಆಧಾರದ ಮೇಲೆ, ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS)ಯ ಸೆಕ್ಷನ್ 352 (ಶಾಂತಿ ಭಂಗವನ್ನು ಉಂಟುಮಾಡುವ ಉದ್ದೇಶಪೂರ್ವಕ ಅವಮಾನ), 353(1) (ಸಾರ್ವಜನಿಕ ಅಶಾಂತಿಗೆ ಕಾರಣವಾಗುವ ಹೇಳಿಕೆಗಳು) ಮತ್ತು 356(1) (ಮಾನನಷ್ಟ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚುವರಿ ಪೊಲೀಸ್ ಉಪ ಆಯುಕ್ತರು (ನೋಯ್ಡಾ) ಮನೀಶಾ ಸಿಂಗ್ ಪ್ರಕರಣ ದಾಖಲಾಗಿರುವುದನ್ನು ದೃಢಪಡಿಸಿದ್ದಾರೆ.
ಜಂತರ್ ಮಂತರ್ನಲ್ಲಿ ಭಾರತದ ಪ್ರಧಾನಿಯ ವಿರುದ್ಧ ಅವಹೇಳನಕಾರಿ ಭಾಷೆಯನ್ನು ಬಳಸಿದ್ದಾರೆ ಎಂದು ಆರೋಪಿಸಿ ಘಾಜಿಯಾಬಾದ್ ನಿವಾಸಿಯೊಬ್ಬರು ನೋಯ್ಡಾದ ಸೆಕ್ಟರ್ 168ರ ನಿವಾಸಿಯ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಇದು 'ಜೀರೋ ಎಫ್ಐಆರ್' ಆಗಿದ್ದು, ಮುಂದಿನ ತನಿಖೆಗಾಗಿ ನವದೆಹಲಿಗೆ ವರ್ಗಾಯಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.