

ಗುರುಗ್ರಾಮ: ಹರಿಯಾಣದ ನೂಹ್ ಜಿಲ್ಲೆಯಲ್ಲಿ ಅತಿ ವೇಗವಾಗಿ ಚಲಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಟೈಲ್ಸ್ ಶೋರೂಂಗೆ ನುಗ್ಗಿದ ಪರಿಣಾಮ ಓರ್ವ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.
ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬುಧವಾರ ಸಂಜೆ ತೌರು ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ ಛರೋಡಾ ಬಸ್ ನಿಲ್ದಾಣದ ಸಮೀಪದ ನೂಹ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.
ಪೊಲೀಸರ ಪ್ರಕಾರ, ನಿಯಂತ್ರಣ ತಪ್ಪಿದ ಕಾರು ಮೊದಲು ಪಿಕಪ್ ವಾಹನ, ಬೈಕ್ ಹಾಗೂ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ರಸ್ತೆ ಬದಿಯಲ್ಲಿದ್ದ ಟೈಲ್ಸ್ ಶೋರೂಂಗೆ ನುಗ್ಗಿ ಒಳಗೆ ಹಾಗೂ ಹೊರಗೆ ನಿಲ್ಲಿಸಿದ್ದ ಹಲವು ವಾಹನಗಳಿಗೆ ಹಾನಿ ಉಂಟುಮಾಡಿದೆ.
ಚೆಂಡಿನಂತೆ ಹಾರಿ ಬಿದ್ದ ವ್ಯಕ್ತಿ
ಟೈಲ್ಸ್ ಶೋರೂಂನಿಂದ ಹೊರಬಂದ ಇಬ್ಬರು ವ್ಯಕ್ತಿಗಳು ರಸ್ತೆ ಸಮೀಪ ಬರುತ್ತಲೇ ವೇಗವಾಗಿ ಬರುತ್ತಿದ್ದ ಕಾರನ್ನು ಗಮನಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ.
ಈ ವೇಳೆ ಮುಂದಿದ್ದ ವ್ಯಕ್ತಿ ತಪ್ಪಿಸಿಕೊಳ್ಳುವಲ್ಲಿ ಸಫಲರಾಗಿದ್ದು, ಆದರೆ ಹಿಂದೆ ಇದ್ದ ವ್ಯಕ್ತಿಗೆ ಏನಾಗುತ್ತಿದೆ ಎನ್ನುವಷ್ಟರಲ್ಲೇ ಕಾರು ಆತನನ್ನು ಗುದ್ದಿದೆ. ಕಾರು ಗುದ್ದಿದ ರಭಸಕ್ಕೆ ಸುಮಾರು 10 ಅಡಿ ಮೇಲಕ್ಕೆ ಹಾರಿದ ವ್ಯಕ್ತಿ ಚೆಂಡಿನಂತೆ ಹಾರಿ ಹೋಗಿ ದೂರದಲ್ಲಿ ನಿಂತಿದ್ದ ಬೊಲೆರೋ ವಾಹನದ ಮೇಲೆ ಬೀಳುತ್ತಾನೆ.
ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಾಸಿಲಾಯಿತಾದರೂ ಆತ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.
ಮೃತನನ್ನು ಕಪಿಲ್ ಎಂದು ಗುರುತಿಸಲಾಗಿದ್ದು, ಆತ ಬಹರಾಂಪುರ ನಿವಾಸಿಯಾಗಿದ್ದಾನೆ. ಟೈಲ್ಸ್ ಖರೀದಿಸಲು ಶೋರೂಂಗೆ ಬಂದಿದ್ದ ವೇಳೆ ನಿಯಂತ್ರಣ ತಪ್ಪಿದ ಕಾರು ನೇರವಾಗಿ ಆತನಿಗೆ ಡಿಕ್ಕಿ ಹೊಡೆದಿದೆ.
ಮೃತ ಕಪಿಲ್ ಸೇರಿದಂತೆ ಅಪಘಾತದಲ್ಲಿ ಗಾಯಗೊಂಡ ಮೂವರು ಇತರರನ್ನು ನಲ್ಹಡ್ನ ಶಹೀದ್ ಹಸನ್ ಖಾನ್ ಮೇವಾತಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಪಿಲ್ ಮೃತಪಟ್ಟಿದ್ದಾರೆ.
ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಅಪಘಾತಕ್ಕೆ ಕಾರಣವಾದ ಕಾರಿನ ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಥಮಿಕ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಳಿಕ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿದರು. ಶೋರೂಂನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಕಾರು ಮೊದಲು ರಸ್ತೆಯಲ್ಲಿದ್ದ ವಾಹನಗಳಿಗೆ ಡಿಕ್ಕಿ ಹೊಡೆದು ನಂತರ ಶೋರೂಂಗೆ ನುಗ್ಗುವ ದೃಶ್ಯ ಸ್ಪಷ್ಟವಾಗಿ ಸೆರೆಯಾಗಿದೆ.
ಪೊಲೀಸ್ ತನಿಖೆ
ಅಪಘಾತಕ್ಕೀಡಾದ ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಅತಿವೇಗವೇ ಅಪಘಾತಕ್ಕೆ ಪ್ರಮುಖ ಕಾರಣ ಎಂದು ತಿಳಿದುಬಂದಿದೆ. ಸಿಸಿಟಿವಿ ದೃಶ್ಯಗಳು ಸೇರಿದಂತೆ ಇತರ ಸಾಕ್ಷ್ಯಗಳನ್ನು ಪರಿಶೀಲಿಸುತ್ತಿರುವ ಪೊಲೀಸರು, ಅಪಘಾತ ನಡೆದ ನಿಖರ ಸಂದರ್ಭವನ್ನು ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ.
ಮೃತ ಕಪಿಲ್ ಅವರ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ಉಳಿದ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.