

ನವದೆಹಲಿ: ದೆಹಲಿಯ ಜಂತರ್ ಮಂತರ್ನಲ್ಲಿ ಇತ್ತೀಚಿಗೆ ನಡೆದ ಕಾಕ್ರೋಚ್ ಜನತಾ ಪಕ್ಷ(ಸಿಜೆಪಿ) ನೇತೃತ್ವದ ಪ್ರತಿಭಟನೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬೆಂಬಲ ಮತ್ತು ರಕ್ಷಣೆ ನೀಡುವುದಾಗಿ ಆಮ್ ಆದ್ಮಿ ಪಕ್ಷದ(ಎಎಪಿ) ದೆಹಲಿ ಮುಖ್ಯಸ್ಥ ಸೌರಭ್ ಭಾರದ್ವಾಜ್ ಶುಕ್ರವಾರ ಘೋಷಿಸಿದ್ದಾರೆ. ಅಲ್ಲದೆ ಈ ವಿದ್ಯಾರ್ಥಿಗಳು "ಬಲಪಂಥೀಯ ಗೂಂಡಾಗಳಿಂದ" ಬೆದರಿಕೆ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
"ದೆಹಲಿ ಜೆನ್ ಝಿ" ಯನ್ನು ಉದ್ದೇಶಿಸಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಭಾರದ್ವಾಜ್, ಪ್ರತಿಭಟನೆಯಲ್ಲಿ ಶಾಂತಿಯುತವಾಗಿ ಭಾಗವಹಿಸಿದ್ದ ಯಾವುದೇ ವಿದ್ಯಾರ್ಥಿಗಳು ಭಯಪಡಬಾರದು ಮತ್ತು ಸಹಾಯಕ್ಕಾಗಿ ತಮ್ಮ ಪಕ್ಷವನ್ನು ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.
"ಜಂತರ್ ಮಂತರ್ ಪ್ರತಿಭಟನೆಯಲ್ಲಿ ಶಾಂತಿಯುತವಾಗಿ ಭಾಗವಹಿಸಿದ್ದ ಯಾವುದೇ ವಿದ್ಯಾರ್ಥಿ ದೆಹಲಿಯಲ್ಲಿ ಬಲಪಂಥೀಯ ಗೂಂಡಾಗಳಿಂದ ಬೆದರಿಕೆಗಳನ್ನು ಎದುರಿಸುತ್ತಿದ್ದರೆ, ಭಯಪಡಬೇಡಿ. ಅವರನ್ನು ಮನೆಗೆ ಆಹ್ವಾನಿಸಿ, ನಮಗೆ ತಿಳಿಸಿ. ನಾವು ನೋಡಿಕೊಳ್ಳುತ್ತೇವೆ" ಎಂದು ಎಎಪಿ ನಾಯಕ ಭರವಸೆ ನೀಡಿದ್ದಾರೆ.
ಭಾರದ್ವಾಜ್ ಅವರ ಹೇಳಿಕೆಯನ್ನು ಹಂಚಿಕೊಂಡ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ಇದು "ಪ್ರಮುಖ ಘೋಷಣೆ" ಎಂದು ಹೇಳಿದ್ದಾರೆ. "ಈ ಗೂಂಡಾಗಳನ್ನು ಸರಿಪಡಿಸಲು ನಾವೆಲ್ಲರೂ ಒಟ್ಟಾಗಿ ಬರುತ್ತೇವೆ" ಎಂದು ತಿಳಿಸಿದ್ದಾರೆ.
ಪ್ರತಿಭಟನೆಯಲ್ಲಿ ಭಾಗವಹಿಸಿದ ವ್ಯಕ್ತಿಗಳ ವಿರುದ್ಧ ಯಾವುದೇ ಪ್ರತಿಕೂಲ ಕಾನೂನು ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ದೆಹಲಿ ಸರ್ಕಾರದ ಗೃಹ ಇಲಾಖೆ ಆದೇಶ ಹೊರಡಿಸಿದ ಒಂದು ದಿನದ ನಂತರ ಎಎಪಿ ನಾಯಕರು ಈ ಹೇಳಿಕೆ ನೀಡಿದ್ದಾರೆ.