Parliament Monsoon Session: ಸಂಸತ್‌ನಲ್ಲಿ ಮತ್ತೆ ಹೈಡ್ರಾಮಾ; ಅಮಿತ್ ಶಾ ವಿಚಾರವಾಗಿ ಭಾರೀ ಗದ್ದಲ, Lok Sabha-Rajya Sabha ಕಲಾಪ ಸೋಮವಾರಕ್ಕೆ ಮುಂದೂಡಿಕೆ..!

ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪದೇಪದೇ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಉಭಯ ಸದನಗಳ ಕಲಾಪವನ್ನು ಸೋಮವಾರ (ಆಗಸ್ಟ್‌ 3)ಕ್ಕೆ ಮುಂದೂಡಲಾಯಿತು.
Opposition MPs stage a protest in Lok Sabha during the Monsoon session of Parliament, in New Delhi, Friday, July 31, 2026.
ಸಂಸತ್ ಮುಂಗಾರು ಅಧಿವೇಶನ.
Updated on

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷಗಳು ನಡೆಸಿದ ತೀವ್ರ ಪ್ರತಿಭಟನೆ ಹಾಗೂ ಘೋಷಣೆಗಳ ನಡುವೆಯೇ ಸಂಸತ್ತಿನ ಮುಂಗಾರು ಅಧಿವೇಶನದ 10ನೇ ದಿನದ ಕಲಾಪವೂ ಬಲಿಯಾಯಿತು.

ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪದೇಪದೇ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಉಭಯ ಸದನಗಳ ಕಲಾಪವನ್ನು ಸೋಮವಾರ (ಆಗಸ್ಟ್‌ 3)ಕ್ಕೆ ಮುಂದೂಡಲಾಯಿತು.

ಶುಕ್ರವಾರ ಲೋಕಸಭೆಯಲ್ಲಿ ಜನನ ಮತ್ತು ಮರಣ ನೋಂದಣಿ (ತಿದ್ದುಪಡಿ) ಮಸೂದೆ–2026 ಹಾಗೂ ಸುಪ್ರೀಂ ಕೋರ್ಟ್ (ನ್ಯಾಯಮೂರ್ತಿಗಳ ಸಂಖ್ಯೆ) ತಿದ್ದುಪಡಿ ಮಸೂದೆ–2026ಗಳನ್ನು ಚರ್ಚಿಸಿ ಅಂಗೀಕರಿಸುವ ನಿರೀಕ್ಷೆ ಇತ್ತು.

ರಾಜ್ಯಸಭೆಯಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಅಭಿವೃದ್ಧಿ (ತಿದ್ದುಪಡಿ) ಮಸೂದೆ–2026 ಕುರಿತು ಚರ್ಚೆ ನಡೆಯಬೇಕಿತ್ತು.

ಆದರೆ, ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಘೋಷಣೆ ಕೂಗಲು ಆರಂಭಿಸಿದರು. ಇದರಿಂದ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಪದೇಪದೇ ಗದ್ದಲ ಉಂಟಾಯಿತು.

ಲೋಕಸಭೆಯಲ್ಲಿ ಸಭಾಧ್ಯಕ್ಷ ಓಂ ಬಿರ್ಲಾ ಆರಂಭದಲ್ಲಿ ಕಲಾಪವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಿದರು. ಬಳಿಕ ಕಲಾಪ ಪುನರಾರಂಭವಾದಾಗಲೂ ಗದ್ದಲ ಮುಂದುವರಿದ ಕಾರಣ ಕೊನೆಗೆ ಸೋಮವಾರದವರೆಗೆ ಮುಂದೂಡಲಾಯಿತು.

ರಾಜ್ಯಸಭೆಯಲ್ಲೂ ಇದೇ ಪರಿಸ್ಥಿತಿ ನಿರ್ಮಾಣವಾಯಿತು. ಸಭಾಪತಿ ಸಿ.ಪಿ. ರಾಧಾಕೃಷ್ಣನ್ ಅವರು ಕಾಂಗ್ರೆಸ್ ಅಧ್ಯಕ್ಷ ಹಾಗೂ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸಲ್ಲಿಸಿದ್ದ ನಿಯಮ 267ರಡಿ ನೀಡಿದ್ದ ನೋಟಿಸ್ ಅನ್ನು ತಿರಸ್ಕರಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರತಿಪಕ್ಷ ಸದಸ್ಯರು ಘೋಷಣೆಗಳನ್ನು ಮುಂದುವರಿಸಿದರು.

Opposition MPs stage a protest in Lok Sabha during the Monsoon session of Parliament, in New Delhi, Friday, July 31, 2026.
ನೀಟ್ ವಿವಾದ: ಮೀಡಿಯಾ ಮುಂದೆ ಬೈಟ್ಸ್ ನೀಡಿದರೆ ಸಮಸ್ಯೆ ಬಗೆಹರಿಯಲ್ಲ; ಕರ್ನಾಟಕ ಸರ್ಕಾರವನ್ನು ಹಿಗ್ಗಾ ಮುಗ್ಗಾ ಜಾಡಿಸಿದ ರಾಘವ್ ಚಡ್ಡಾ!

ಸಭಾಪತಿ ರಾಧಾಕೃಷ್ಣನ್ ಅವರು ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ'ಬ್ರಿಯಾನ್ ಅವರನ್ನು ಸದನದಲ್ಲಿ ಉಂಟಾದ ಗದ್ದಲದ ಬಗ್ಗೆ ತರಾಟೆಗೆ ತೆಗೆದುಕೊಂಡು, ತಮ್ಮ ಸ್ಥಾನಕ್ಕೆ ತೆರಳಿ ಕಲಾಪ ನಡೆಯಲು ಅವಕಾಶ ನೀಡುವಂತೆ ಸೂಚಿಸಿದರು. ಆದರೂ ಗದ್ದಲ ನಿಲ್ಲದ ಹಿನ್ನೆಲೆಯಲ್ಲಿ ರಾಜ್ಯಸಭೆಯ ಕಲಾಪವನ್ನೂ ಆಗಸ್ಟ್‌ 3ರ ಬೆಳಿಗ್ಗೆ 11 ಗಂಟೆಯವರೆಗೆ ಮುಂದೂಡಲಾಯಿತು.

ಇದೇ ವೇಳೆ ಕಾಂಗ್ರೆಸ್ ಸಂಸದ ಕೆ.ಸಿ. ವೇಣುಗೋಪಾಲ್ ಅವರು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ವಿರುದ್ಧ ಹಕ್ಕುಚ್ಯುತಿ ಮಂಡನೆ ಸಲ್ಲಿಸಿದರು.

ಬಳಿಕ ಸಂಸತ್ ಆವರಣದಲ್ಲಿ ಪ್ರತಿಪಕ್ಷ ಸಂಸದರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಸಂಸದ ಪಪ್ಪು ಯಾದವ್ ನೇತೃತ್ವದಲ್ಲಿ ರಾಮ ಮಂದಿರಕ್ಕೆ ಸಂಗ್ರಹಿಸಲಾದ ದೇಣಿಗೆ ದುರ್ಬಳಕೆ ಆಗಿದೆ ಎಂಬ ಭಿತ್ತಿಚಿತ್ರಗಳನ್ನು ಪ್ರದರ್ಶಿಸಲಾಯಿತು.

ಕೇಸರಿ ಬಣ್ಣದ ಉಡುಪು ಧರಿಸಿದ್ದ ಪಪ್ಪು ಯಾದವ್ ದೇಣಿಗೆ ಪೆಟ್ಟಿಗೆಗಳೊಂದಿಗೆ ಕುಳಿತಿದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಪ್ರತಿಪಕ್ಷ ಸಂಸದರು ಆ ಪೆಟ್ಟಿಗೆಗಳಿಗೆ ಹಣ ಹಾಕಿದರು. ಬಳಿಕ ಪಪ್ಪು ಯಾದವ್ ಆ ಹಣವನ್ನು ತಮ್ಮ ಜೇಬಿಗೆ ಹಾಕಿಕೊಳ್ಳುವ ಮೂಲಕ ದೇಣಿಗೆ ದುರ್ಬಳಕೆ ಆರೋಪವನ್ನು ನಾಟಕೀಯವಾಗಿ ಪ್ರದರ್ಶಿಸಿದರು.

ಇನ್ನೊಂದೆಡೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಪ್ರತಿಪಕ್ಷ ಸಂಸದರೂ ಅಮಿತ್ ಶಾ ವಿರುದ್ಧ ಪ್ರತಿಭಟನೆ ನಡೆಸಿದರು. ಜುಲೈ 20ರಂದು ಸಿಜೆಪಿ ಪ್ರತಿಭಟನಾಕಾರರ ವಿರುದ್ಧ ನಡೆದಿದ್ದ ಎನ್ನಲಾದ ಪೊಲೀಸ್ ಕ್ರಮವನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು.

ಗುರುವಾರ ಸಂಸತ್ತಿನ ಉಭಯ ಸದನಗಳೂ ಸಾರ್ವಜನಿಕ ಪರೀಕ್ಷೆಗಳು (ಅನ್ಯಾಯ ವಿಧಾನಗಳ ತಡೆ) ತಿದ್ದುಪಡಿ ಮಸೂದೆ–2026ಗೆ ಅನುಮೋದನೆ ನೀಡಿದ್ದವು.

ಈ ಕಾನೂನನ್ನು ಎನ್‌ಡಿಎ ನಾಯಕರು ಸ್ವಾಗತಿಸಿದ್ದರೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದು ಪರೀಕ್ಷಾ ವ್ಯವಸ್ಥೆಯಲ್ಲಿ ನಿಜವಾದ ಸುಧಾರಣೆ ತರಬಹುದೇ ಎಂದು ಪ್ರಶ್ನಿಸಿದ್ದಾರೆ.

ಇದರ ನಡುವೆಯೇ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಲೋಕಸಭೆಯಲ್ಲಿ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ್ದಾರೆ.

ಮತ್ತೊಂದೆಡೆ, ಐಐಟಿ ಮದ್ರಾಸ್ ನಿರ್ದೇಶಕ ಪ್ರೊ. ವಿ. ಕಾಮಕೋಟಿ ಅವರನ್ನು ಉದ್ದೇಶಿಸಿ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಬಳಸಿದ್ದ "ಗೋಮೂತ್ರ ತಜ್ಞ" ಎಂಬ ಹೇಳಿಕೆಗೆ ದೇಶದ ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳು ಹಾಗೂ ಹಿರಿಯ ಶಿಕ್ಷಣ ತಜ್ಞರು ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದಾರೆ.

ಈ ಎಲ್ಲ ರಾಜಕೀಯ ಬೆಳವಣಿಗೆಗಳ ನಡುವೆ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವಿನ ಸಂಘರ್ಷ ಇನ್ನಷ್ಟು ತೀವ್ರಗೊಂಡಿದ್ದು, ಮುಂದಿನ ವಾರವೂ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com