

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧದಲ್ಲಿ ರಷ್ಯಾ ಸೇನೆಗೆ ಸೇರ್ಪಡೆಯಾಗಿ ಮೃತಪಟ್ಟ ಅಥವಾ ನಾಪತ್ತೆಯಾದ ಭಾರತೀಯರ ಕುಟುಂಬಗಳಿಗೆ ನೆರವಾಗಲು ಕೂಡಲೇ ನೋಡಲ್ ಅಧಿಕಾರಿಯನ್ನು ನೇಮಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ರಷ್ಯಾ ಸೈನ್ಯದಲ್ಲಿ ಸಿಲುಕಿರುವ ಮತ್ತು ಪ್ರಾಣ ಕಳೆದುಕೊಂಡಿರುವ ಭಾರತೀಯರ ಕುಟುಂಬಗಳ ರಕ್ಷಣೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ. ಮೋಹನಾ ಅವರನ್ನೊಳಗೊಂಡ ಪೀಠವು ಈ ಆದೇಶ ಹೊರಡಿಸಿದೆ.
ಯುದ್ಧದಲ್ಲಿ ಮೃತಪಟ್ಟ ಅಥವಾ ನಾಪತ್ತೆಯಾದವರ ಕುಟುಂಬಗಳೊಂದಿಗೆ ಸಮನ್ವಯ ಸಾಧಿಸಿ, ಅವರಿಗೆ ಅಗತ್ಯ ನೆರವು ಒದಗಿಸುವ ಜವಾಬ್ದಾರಿಯನ್ನು ಈ ನೋಡಲ್ ಅಧಿಕಾರಿಗೆ ವಹಿಸುವಂತೆ ಹಾಗೂ ಮೃತರ ದೇಹಗಳ ಗುರುತು ಪತ್ತೆಹಚ್ಚುವ ಪ್ರಕ್ರಿಯೆಯನ್ನು ಸುಗಮಗೊಳಿಸಲು ಕುಟುಂಬ ಸದಸ್ಯರ ಡಿಎನ್ಎ ಮಾದರಿಗಳನ್ನು ಮೃತದೇಹಗಳೊಂದಿಗೆ ಹೊಂದಾಣಿಕೆ ಮಾಡುವ ವ್ಯವಸ್ಥೆ ಕಲ್ಪಿಸುವಂತೆ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಸೂಚಿಸಿದೆ.
ಅಲ್ಲದೆ, ರಷ್ಯಾ ರಾಯಭಾರ ಕಚೇರಿಯ ಮುಂದೆ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ನೆರವು ನೀಡಬೇಕು. ಈ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಗಳು ಹಾಗೂ ಬೆಳವಣಿಗೆಗಳನ್ನು ಕುಟುಂಬಗಳಿಗೆ ಅವರ ಸ್ಥಳೀಯ ಭಾಷೆಗಳಲ್ಲಿ ಒದಗಿಸುವಂತೆಯೂ ನಿರ್ದೇಶನ ನೀಡಿದೆ.
ಮೃತರ ದೇಹಗಳನ್ನು ಭಾರತಕ್ಕೆ ತರಿಸಿಕೊಳ್ಳುವುದು ಹಾಗೂ ಪರಿಹಾರ ಪಡೆಯಲು ಅಗತ್ಯವಿರುವ ಕಾನೂನು ಪ್ರಕ್ರಿಯೆಗಳನ್ನು ಮುಂದುವರಿಸುವಲ್ಲಿ ಕುಟುಂಬಗಳಿಗೆ ನೆರವಾಗುವಂತೆ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ (NALSA) ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳಿಗೂ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಯುದ್ಧಭೂಮಿಯಲ್ಲಿ ಮೃತಪಟ್ಟ ಅಥವಾ ನಾಪತ್ತೆಯಾದ ಭಾರತೀಯರ ಕುಟುಂಬಗಳು ತಮ್ಮ ಸಂಬಂಧಿಕರ ಕುರಿತು ಮಾಹಿತಿ ಪಡೆಯಲು, ಮೃತದೇಹಗಳನ್ನು ಭಾರತಕ್ಕೆ ತರಿಸಿಕೊಳ್ಳಲು ಹಾಗೂ ಪರಿಹಾರ ಪಡೆಯಲು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಗಣಿಸಿ ನ್ಯಾಯಾಲಯ ಈ ಕ್ರಮ ಕೈಗೊಂಡಿದೆ.