

ನವದೆಹಲಿ: ತೃಣಮೂಲ ಕಾಂಗ್ರೆಸ್ ಬಂಡಾಯದ ಬೇಗೆಯಲ್ಲಿ ಬಳಲುತ್ತಿರುವಂತೆಯೇ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಮಂಗಳವಾರ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ನವದೆಹಲಿಯ 10, ಜನಪಥ್ ನಿವಾಸದಲ್ಲಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾದ ಮಮತಾ, ಪಕ್ಷದಲ್ಲಿನ ಇತ್ತೀಚಿನ ಬೆಳವಣಿಗೆ, ಬಿಜೆಪಿ ಗೆಲುವು, ಭಾರತೀಯ ಚುನಾವಣಾ ಆಯೋಗದ ನೆರವು ಮತ್ತಿತರ ವಿಚಾರ ಕುರಿತು ಚರ್ಚೆ ನಡೆಸಿದ್ದಾರೆ. ಮುಂದಿನ ಕಾರ್ಯತಂತ್ರ ಕುರಿತು ಉಭಯ ನಾಯಕಿಯರು ಸಮಾಲೋಚನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸೋಮವಾರ ನವದೆಹಲಿಯಲ್ಲಿ ನಡೆದ ವಿರೋಧ ಪಕ್ಷಗಳ ಮೈತ್ರಿಕೂಟವಾದ ಇಂಡಿಯಾ ಬಣದ ಸಭೆಯಲ್ಲಿ ಮಮತಾ ಬ್ಯಾನರ್ಜಿ ಪಾಲ್ಗೊಂಡಿದ್ದರು. ಸೋನಿಯಾ ಗಾಂಧಿ ಹಾಗೂ ಮಮತಾ ಬ್ಯಾನರ್ಜಿ ಪರಸ್ಪರ ಆಲಿಂಗನದ ನಂತರ ಸಭೆ ನಡೆದಿತ್ತು. ಉಭಯ ನಾಯಕರ ಫೋಟೋಗಳನ್ನು ಕಾಂಗ್ರೆಸ್ ತನ್ನ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಂಡಿತ್ತು.
ತೃಣಮೂಲ ಪಕ್ಷದೊಳಗಿನ ಬಂಡಾಯದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಹಾಗೂ ಮಮತಾ ಬ್ಯಾನರ್ಜಿ ಸಭೆ ನಡೆಸಿದ್ದಾರೆ. ಪಕ್ಷದ ಹಲವಾರು ಸಂಸದರು ಪ್ರತ್ಯೇಕ ಗುಂಪನ್ನು ರಚಿಸಿ ಆಡಳಿತಾರೂಢ NDA ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ತೃಣಮೂಲ ಪಕ್ಷದ 80 ಶಾಸಕರಲ್ಲಿ ಬಹುಪಾಲು ಶಾಸಕರು ಈಗಾಗಲೇ ರಾಜ್ಯ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ರಿತಬ್ರತಾ ಬ್ಯಾನರ್ಜಿ ನೇತೃತ್ವದಲ್ಲಿ ಪ್ರತ್ಯೇಕ ಗುಂಪನ್ನು ರಚಿಸಿದ್ದಾರೆ.
ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಸೋಲಿನ ನಂತರ ಬ್ಯಾನರ್ಜಿ ಮತ್ತು ಗಾಂಧಿ ನಡುವಿನ ಮೊದಲ ಸಭೆ ಇದಾಗಿದೆ. ಚುನಾವಣೆಯ ನಂತರ ಪಕ್ಷದ ಕಾರ್ಯಕರ್ತರು ಮತ್ತು ಸಂಸದ ಅಭಿಷೇಕ್ ಬ್ಯಾನರ್ಜಿ ಮೇಲೆ ದಾಳಿ ನಡೆದಿದೆ ಎಂದು ಆರೋಪಿಸಲಾಗಿದೆ.
Advertisement