

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಂಡಾಯದ ಬೇಗುದಿಯಲ್ಲಿ ಬೇಯುತ್ತಿರುವ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಕಾಂಗ್ರೆಸ್ ಜೊತೆಗೆ ವಿಲೀನದ ಮಾತುಗಳು ಕೇಳಿಬರುತ್ತಿದೆ.
ಈ ಕುರಿತು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್, ಇವು ಸಂಪೂರ್ಣವಾಗಿ ಆಧಾರರಹಿತ ವದಂತಿಗಳು ಎಂದು ಅಲ್ಲಗಳೆದರು.
ಮಮತಾ ಬ್ಯಾನರ್ಜಿ ಮತ್ತು ಅಭಿಷೇಕ್ ಬ್ಯಾನರ್ಜಿ ಇತ್ತೀಚಿಗೆ ದೆಹಲಿಯಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದರು. ಆದರೆ ಅವರು ಇಂಡಿಯಾ ಬಣದಲ್ಲಿ ಮುಂದುವರೆಯುವ ಕುರಿತು ಚರ್ಚೆ ನಡೆಸಿದ್ದು, ಬೇರೆ ಯಾವುದೇ ವಿಚಾರ ಚರ್ಚೆ ಯಾಗಿಲ್ಲ ಎಂದು ಸ್ಪಷ್ಪಪಡಿಸಿದರು.
ಮುಂದಿನ 2-3 ತಿಂಗಳುಗಳಲ್ಲಿ ದೇಶಾದ್ಯಂತ ನಾವು ಹೋರಾಟ ನಡೆಸುತ್ತಿವೆ. ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲೂ ಪ್ರತಿಭಟನೆ ಮಾಡುತ್ತೇವೆ. ಜನರು ಎಲ್ಲೆಲ್ಲಿ ಕಷ್ಟಗಳನ್ನು ಎದುರಿಸುತ್ತಿದ್ದರೋ ಅಲ್ಲಿ ಕಾಂಗ್ರೆಸ್ ಅವರೊಂದಿಗೆ ಭಾವನೆಗಳನ್ನು ಹಂಚಿಕೊಳ್ಳುತ್ತದೆ ಮತ್ತು ಅವರಿಗಾಗಿ ಹೋರಾಡುತ್ತದೆ ಎಂದು ತಿಳಿಸಿದರು.
ಮಧ್ಯಪ್ರದೇಶ ಮತ್ತು ಜಾರ್ಖಂಡ್ನಲ್ಲಿ ಸಂಭವಿಸಿದ ಇತ್ತೀಚಿನ ಪರಿಸ್ಥಿತಿ ಪ್ರಜಾಪ್ರಭುತ್ವಕ್ಕೆ ಅತ್ಯಂತ ಕಳವಳಕಾರಿಯಾಗಿದೆ. ಯಾವುದೇ ಸಮಸ್ಯೆ ಇಲ್ಲದಿದ್ದರೂ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ತಿರಸ್ಕರಿಸಿದ್ದಾರೆ. ಈ ಕುರಿತು ಇಂದು ಪ್ರಧಾನ ಕಾರ್ಯದರ್ಶಿಗಳು, ಉಸ್ತುವಾರಿಗಳು ಮತ್ತು ಕಾಂಗ್ರೆಸ್ ಅಧ್ಯಕ್ಷರೊಂದಿಗೆ ಚರ್ಚೆ ನಡೆಸಿದ್ದೇವೆ ಎಂದು ಅವರು ತಿಳಿಸಿದರು.
ಮೀನಾಕ್ಷಿ ನಟರಾಜನ್ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣ, ಎಫ್ಐಆರ್ ಅಥವಾ ಚಾರ್ಜ್ಶೀಟ್ ಇರಲಿಲ್ಲ. ಆದಾಗ್ಯೂ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮತ್ತೊಂದೆಡೆ ಕಲಂನಲ್ಲಿ ತನ್ನ ಹೆಸರನ್ನು ಸರಿಯಾಗಿ ಉಲ್ಲೇಖಿಸದ ಬಿಜೆಪಿ ಬೆಂಬಲಿತ ಕಾರ್ಪೊರೇಟ್ ಅಭ್ಯರ್ಥಿಯ ನಾಮಪತ್ರವನ್ನು ಜಾರ್ಖಂಡ್ನಲ್ಲಿ ಚುನಾವಣಾಧಿಕಾರಿ ಅಂಗೀಕರಿಸಿದ್ದಾರೆ. ಇದು ಪ್ರಜಾಪ್ರಭುತ್ವದ ದಯನೀಯ ಸ್ಥಿತಿಯನ್ನು ತೋರಿಸುತ್ತದೆ. ಇಂದಿನ ಸಭೆಯಲ್ಲಿ ಈ ವಿಷಯವನ್ನು ವಿವರವಾಗಿ ಚರ್ಚಿಸಲಾಗಿದ್ದು, ಈ ಬಗ್ಗೆ ಹೋರಾಟ ನಡೆಸುತ್ತೇವೆ ಎಂದು ಹೇಳಿದರು.
Advertisement