ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ 1 ಕೋಟಿ ರೂ ಪರಿಹಾರ ನೀಡಿ; ಪ್ರಧಾನಿ ಮೋದಿಗೆ Cockroach Janta Party ಪತ್ರ

ದೇಶದ ಭವಿಷ್ಯವಾದ ಯುವ ವಿದ್ಯಾರ್ಥಿಗಳ ಜೀವ ಮತ್ತು ಮಾನಸಿಕ ಆರೋಗ್ಯಕ್ಕೆ ಗಂಭೀರ ಅಪಾಯ ಎದುರಾಗಿದೆ. ಈ ಬಗ್ಗೆ ನಿಮ್ಮ ಗಮನ ಸೆಳೆಯಲು ಭಾರವಾದ ಮನಸ್ಸಿನಿಂದ ಈ ಪತ್ರ ಬರೆಯುತ್ತಿದ್ದೇನೆ.
File photo
ಸಂಗ್ರಹ ಚಿತ್ರ
Updated on

ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳು ಮತ್ತು ಮರುಪರೀಕ್ಷೆಗಳ ವಿವಾದಗಳ ನಡುವೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ ರೂ.1 ಕೋಟಿ ಪರಿಹಾರ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಕ್‌ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಜೂನ್ 20ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ ವಿದ್ಯಾರ್ಥಿಗಳ ಪ್ರತಿಭಟನೆಯ ಮುನ್ನ ಈ ಪತ್ರ ಬರೆದಿರುವ ದೀಪ್ಕೆ, ಶಿಕ್ಷಣ ವ್ಯವಸ್ಥೆಯಲ್ಲಿ ಉಂಟಾಗಿರುವ ಬಿಕ್ಕಟ್ಟಿಗೆ ಹೊಣೆಗಾರಿಕೆಯನ್ನು ನಿಗದಿಪಡಿಸಬೇಕೆಂದು ಆಗ್ರಹಿಸಿದ್ದಾರೆ. ಜೊತೆಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಮತ್ತೊಮ್ಮೆ ಒತ್ತಾಯಿಸಿದ್ದಾರೆ.

“ದೇಶದ ಭವಿಷ್ಯವಾದ ಯುವ ವಿದ್ಯಾರ್ಥಿಗಳ ಜೀವ ಮತ್ತು ಮಾನಸಿಕ ಆರೋಗ್ಯಕ್ಕೆ ಗಂಭೀರ ಅಪಾಯ ಎದುರಾಗಿದೆ. ಈ ಬಗ್ಗೆ ನಿಮ್ಮ ಗಮನ ಸೆಳೆಯಲು ಭಾರವಾದ ಮನಸ್ಸಿನಿಂದ ಈ ಪತ್ರ ಬರೆಯುತ್ತಿದ್ದೇನೆ” ಎಂದು ಹೇಳಿದ್ದಾರೆ.

ಇತ್ತೀಚಿನ ವಾರಗಳಲ್ಲಿ 11 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿರುವ ಅವರು, ಕಳೆದ 48 ಗಂಟೆಗಳಲ್ಲೇ ಐವರು ವಿದ್ಯಾರ್ಥಿಗಳು ಜೀವ ಕಳೆದುಕೊಂಡಿದ್ದಾರೆ. ಪರೀಕ್ಷೆಗಳ ಮರುನಿರ್ವಹಣೆ ಕುರಿತ ಅನಿಶ್ಚಿತತೆ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ವಿವಾದಗಳಿಂದ ವಿದ್ಯಾರ್ಥಿಗಳಲ್ಲಿ ಆತಂಕ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.

ಮಕ್ಕಳ ಶಿಕ್ಷಣಕ್ಕಾಗಿ ದೊಡ್ಡ ಪ್ರಮಾಣದ ಸಾಲ ಮಾಡಿದ್ದ ಅನೇಕ ಕುಟುಂಬಗಳು, ಈಗ ತಮ್ಮ ಮಕ್ಕಳನ್ನು ಕಳೆದುಕೊಂಡು ಸಂಪೂರ್ಣ ಸಂಕಷ್ಟಕ್ಕೆ ಸಿಲುಕಿವೆ. ಹೀಗಾಗಿ ಇಂತಹ ಕುಟುಂಬಗಳಿಗೆ ತಲಾ ರೂ.1 ಕೋಟಿ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

File photo
ಬೆಂಗಳೂರಿನಲ್ಲಿ Cockroach Janta Party ಮೊದಲ ಪ್ರತಿಭಟನೆ: ಪ್ರಕಾಶ್ ರಾಜ್, ಸೋನಂ ವಾಂಗ್ಚುಕ್ ಭಾಗಿ; 'ನಮ್ಮ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತೇವೆ' ಘೋಷಣೆ

ಇದೇ ವೇಳೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಗೆ ಆಗ್ರಹಿಸಿರುವ ಅವರು, “ಕಳೆದ ಒಂದು ತಿಂಗಳಿಂದ ಶಿಕ್ಷಣ ಸಚಿವರ ರಾಜೀನಾಮೆಗೆ ನಾವು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದೇವೆ. ವಿದ್ಯಾರ್ಥಿಗಳು ಬಯಸುವುದು ಕೇವಲ ಹೊಣೆಗಾರಿಕೆ” ಎಂದು ಹೇಳಿದ್ದಾರೆ.

ಶಿಕ್ಷಣ ವ್ಯವಸ್ಥೆಯ ಮೇಲಿನ ವಿದ್ಯಾರ್ಥಿಗಳು ಮತ್ತು ಪೋಷಕರ ವಿಶ್ವಾಸ ಮರುಸ್ಥಾಪನೆಗೆ ಹೊಣೆಗಾರಿಕೆ ನಿಗದಿಪಡಿಸುವುದು ಅತ್ಯಗತ್ಯ. ಸಚಿವರ ವಿರುದ್ಧ ಕ್ರಮ ಕೈಗೊಳ್ಳದಿರುವುದು ಆಡಳಿತವು ಯಥಾಸ್ಥಿತಿಯನ್ನು ಒಪ್ಪಿಕೊಂಡಂತಾಗುತ್ತದೆ ಎಂಬ ಸಂದೇಶವನ್ನು ನೀಡುತ್ತದೆ ಎಂದು ಎಚ್ಚರಿಸಿದ್ದಾರೆ.

ಜೂನ್ 20ರಿಂದ ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಜಂತರ್ ಮಂತರ್‌ನಲ್ಲಿ ಸೇರಿ ತಮ್ಮ ಬೇಡಿಕೆಗಳಿಗಾಗಿ ಧ್ವನಿ ಎತ್ತಲಿದ್ದಾರೆ. ಸರ್ಕಾರ ವಿದ್ಯಾರ್ಥಿಗಳ ಧ್ವನಿಯನ್ನು ಆಲಿಸಲಿದೆ ಎಂಬ ನಿರೀಕ್ಷೆ ಇದೆ ಎಂದು ದೀಪ್ಕೆ ತಿಳಿಸಿದ್ದಾರೆ.

ಜೂನ್ 6ರಂದು ನಡೆದ ಮೊದಲ ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ಮತ್ತು ಯುವ ವೃತ್ತಿಪರರು ಭಾಗವಹಿಸಿ ಪರೀಕ್ಷಾ ಅಕ್ರಮಗಳು ಹಾಗೂ ನೇಮಕಾತಿ ಪರೀಕ್ಷೆಗಳಲ್ಲಿನ ಅವ್ಯವಹಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಎರಡನೇ ಹಂತದ ಪ್ರತಿಭಟನೆಗೆ ಸಿಜೆಪಿ ಸಿದ್ಧತೆ ನಡೆಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com