ಕರ್ನಾಟಕದ ಮೇಕೆದಾಟು ಯೋಜನೆಗೆ ವಿರೋಧ: ತಮಿಳುನಾಡು ವಿಧಾನಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕಾರ-Video

ತಮಿಳುನಾಡು ವಿಧಾನಸಭೆಯಲ್ಲಿ ಇಂದು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಅವರು ಮಂಡಿಸಿದ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿತು. ಈ ನಿರ್ಣಯವು ಕರ್ನಾಟಕ ಸರ್ಕಾರ ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟುವಿನಲ್ಲಿ ಸಮತೋಲನ ಜಲಾಶಯ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತಪಡಿಸಿತು.
Chief Minister C. Joseph Vijay moves a resolution in the Assembly against the Karnataka government’s Mekedatu dam proposal
ತಮಿಳು ನಾಡು ವಿಧಾನಸಭೆಯಲ್ಲಿ ಯೋಜನೆ ವಿರುದ್ಧ ನಿರ್ಣಯ ಅಂಗೀಕಾರ
Updated on

ತಮಿಳುನಾಡು ವಿಧಾನಸಭೆಯಲ್ಲಿ ಇಂದು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಅವರು ಮಂಡಿಸಿದ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿತು. ಈ ನಿರ್ಣಯವು ಕರ್ನಾಟಕ ಸರ್ಕಾರ ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟುವಿನಲ್ಲಿ ಸಮತೋಲನ ಜಲಾಶಯ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತಪಡಿಸಿತು.

ಈ ಗೌರವಾನ್ವಿತ ಸದನವು ಕಾವೇರಿ ಜಲ ವಿವಾದ ನ್ಯಾಯಮಂಡಳಿಯು 2007ರ ಫೆಬ್ರವರಿ 5ರಂದು ನೀಡಿದ ಅಂತಿಮ ತೀರ್ಪು ಹಾಗೂ ಸುಪ್ರೀಂ ಕೋರ್ಟ್ 2018ರ ಫೆಬ್ರವರಿ 16ರಂದು ನೀಡಿದ ತೀರ್ಪನ್ನು ಗೌರವಿಸದೆ, ಸಂಬಂಧಿತ ಜಲಾನಯನ ರಾಜ್ಯಗಳ ಒಪ್ಪಿಗೆ ಪಡೆಯದೆ ಮತ್ತು ಕೇಂದ್ರ ಸರ್ಕಾರದ ಯಾವುದೇ ಅನುಮೋದನೆ ಪಡೆಯದೆ ಕಾವೇರಿ ನದಿಗೆ ಅಡ್ಡಲಾಗಿ ಮೆಕೆದಾಟುವಿನಲ್ಲಿ ಅಣೆಕಟ್ಟು ನಿರ್ಮಿಸಲು ಕರ್ನಾಟಕ ಸರ್ಕಾರವು ಕೈಗೊಂಡಿರುವ ಏಕಪಕ್ಷೀಯ ಪ್ರಯತ್ನವನ್ನು ಈ ಸದನ ತೀವ್ರವಾಗಿ ವಿರೋಧಿಸುತ್ತದೆ ಎಂದು ಮುಖ್ಯಮಂತ್ರಿ ವಿಜಯ್ ಮಂಡಿಸಿದ ನಿರ್ಣಯದಲ್ಲಿ ತಿಳಿಸಿದರು.

Chief Minister C. Joseph Vijay moves a resolution in the Assembly against the Karnataka government’s Mekedatu dam proposal
ಮೇಕೆದಾಟು ಯೋಜನೆಗೆ ಅನುಮೋದನೆ ನೀಡಬಾರದು: ಕೇಂದ್ರ ಸರ್ಕಾರಕ್ಕೆ ತಮಿಳು ನಾಡು CM ಜೋಸೆಫ್ ಒತ್ತಾಯ; ವಿಧಾನಸಭೆಯಲ್ಲಿ ನಿರ್ಣಯ ಮಂಡನೆ-Video

ಮೇಕೆದಾಟು ಯೋಜನೆಯು ಅಸ್ತಿತ್ವದಲ್ಲಿರುವ ಕಾನೂನು ನಿಯಮಗಳನ್ನು ಉಲ್ಲಂಘಿಸುತ್ತಿದ್ದು, ಕಾವೇರಿ ನೀರಿನ ಮೇಲಿನ ತಮಿಳುನಾಡಿನ ಹಕ್ಕುಗಳಿಗೆ ಪ್ರತಿಕೂಲ ಪರಿಣಾಮ ಉಂಟುಮಾಡಲಿದೆ ಎಂದು ಪ್ರತಿಪಾದಿಸಿದರು.

ಈ ನಿರ್ಣಯದಲ್ಲಿ, ಮೇಕೆದಾಟು ಯೋಜನೆಗೆ ಅಗತ್ಯವಿರುವ ಎಲ್ಲ ರೀತಿಯ ಅನುಮೋದನೆಗಳನ್ನು ಕೇಂದ್ರ ಸರ್ಕಾರ ನಿರಾಕರಿಸಬೇಕು ಎಂದು ಒತ್ತಾಯಿಸಲಾಯಿತು. ತಾಂತ್ರಿಕ ಹಾಗೂ ಪರಿಸರ ಅನುಮೋದನೆ ಸೇರಿದಂತೆ ಯಾವುದೇ ರೀತಿಯ ಅನುಮತಿಯನ್ನು ಯೋಜನೆಗೆ ನೀಡಬಾರದು ಎಂದು ನಿರ್ಣಯದಲ್ಲಿ ಆಗ್ರಹಿಸಲಾಯಿತು.

ಸರ್ವಾನುಮತದಿಂದ ಒಪ್ಪಿಗೆ

ಕಾವೇರಿ ಜಲಾನಯನ ಪ್ರದೇಶವು ನೀರಿನ ಕೊರತೆ ಹೊಂದಿರುವ ಪ್ರದೇಶವಾಗಿದ್ದು, ಈಗಾಗಲೇ ಜಾರಿಯಲ್ಲಿರುವ ನೀರು ಹಂಚಿಕೆ ಒಪ್ಪಂದದ ಆಧಾರದ ಮೇಲೆ ನಿರ್ವಹಣೆ ನಡೆಯುತ್ತಿದೆ ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ. ಆದ್ದರಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಯಾವುದೇ ಹೊಸ ಯೋಜನೆಯನ್ನು ಕೈಗೊಳ್ಳಬಾರದು ಹಾಗೂ ಹೆಚ್ಚುವರಿ ಪ್ರಮಾಣದ ನೀರನ್ನು ಬಳಸಿಕೊಳ್ಳಲು ಅವಕಾಶ ನೀಡಬಾರದು ಎಂದು ನಿರ್ಣಯವು ಒತ್ತಿಹೇಳಿದೆ.

ತಮಿಳುನಾಡು ಸರ್ಕಾರವು ಕೇಂದ್ರ ಜಲ ಆಯೋಗ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದು, ರಾಜ್ಯದ ರೈತರ ಹಿತಾಸಕ್ತಿಯನ್ನು ರಕ್ಷಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಸಲ್ಲಿಸಿರುವ ವಿವರವಾದ ಯೋಜನಾ ವರದಿ (DPR)ಯನ್ನು ಪರಿಶೀಲಿಸಬಾರದು, ಪ್ರಕ್ರಿಯೆಗೊಳಿಸಬಾರದು ಹಾಗೂ ಅನುಮೋದಿಸಬಾರದು ಎಂದು ಆಗ್ರಹಿಸಿದೆ.

ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಮಂಡಿಸಿದ ನಿರ್ಣಯವನ್ನು ತಮಿಳು ನಾಡು ವಿಧಾನಸಭೆಯ ಎಲ್ಲಾ ಪಕ್ಷಗಳ ಸದಸ್ಯರು ಭಿನ್ನಾಭಿಪ್ರಾಯವಿಲ್ಲದೆ ಸರ್ವಾನುಮತದಿಂದ ಅಂಗೀಕರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com