

ಮುಂಬೈ: ಮಹಾರಾಷ್ಟ್ರದ ಪರ್ಭಣಿಯಲ್ಲಿ ನಿರ್ಮಾಣ ಹಂತದ ಆಂಜನೇಯಸ್ವಾಮಿ ದೇವಸ್ಥಾನದ ಛಾವಣಿ ಕುಸಿದು ಬಿದ್ದು, ನಾಲ್ಕು ಭಕ್ತರು ಮೃತಪಟ್ಟಿದ್ದಾರೆ ಮತ್ತು 20ಕ್ಕೂ ಹೆಚ್ಚು ಭಕ್ತರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಇಂದು ಮಧ್ಯಾಹ್ನ 3.30 ರ ಸುಮಾರಿಗೆ ಪರ್ಭಣಿ ಜಿಲ್ಲೆಯ ಯಶ್ವಾಡಿ ದೇವಸ್ಥಾನದ ಗರ್ಭಗುಡಿಯ ಮುಂಭಾಗದ ನಿರ್ಮಾಣ ಹಂತದ ಛಾವಣಿ ಕುಸಿದು ಬಿದ್ದಿದ್ದು, ಸುಮಾರು 20 ಭಕ್ತರು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ರಕ್ಷಣಾ ತಂಡಗಳು ಸ್ಥಳಕ್ಕೆ ದೌಡಾಯಿಸಿ, ಅವಶೇಷಗಳಡಿ ಸಿಲುಕಿದ್ದ ಭಕ್ತರನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡಿರುವ 20 ಜನರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮಾನವತ್ ತಹಸೀಲ್ದಾರ್ ಪಾಂಡುರಂಗ ಮೊಚೆವಾಡ್ ಅವರ ಮಾಹಿತಿ ಪ್ರಕಾರ, ಗಾಯಾಳುಗಳ ಪೈಕಿ 6 ಮಂದಿಯ ಸ್ಥಿತಿ ಗಂಭೀರವಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವೆ ಮೇಘನಾ ಬೋರ್ಡಿಕರ್ ಅವರು ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ್ದು, ಮೃತಪಟ್ಟವರ ಕುಟುಂಬಗಳಿಗೆ ಮತ್ತು ಗಾಯಾಳುಗಳಿಗೆ ಅಗತ್ಯವಿರುವ ಎಲ್ಲಾ ರೀತಿಯ ಆರ್ಥಿಕ ನೆರವು ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.
Advertisement